75 ಲಕ್ಷಕ್ಕೂ ಹೆಚ್ಚು ಹಿಂದುಳಿದ ವಿದ್ಯಾರ್ಥಿಗಳಿಗೆ ₹7,981 ಕೋಟಿ ನೆರವು : ಕೇಂದ್ರ ಸರ್ಕಾರದ ಮಹತ್ವದ ಹೆಜ್ಜೆ
ನವದೆಹಲಿ, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಸಬಲೀಕರಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಈ ಹಣಕಾಸು ವರ್ಷದಲ್ಲಿ ₹7,981.47 ಕೋಟಿ ಮೊತ್ತವನ್ನು ಬಿಡುಗಡೆ ಮಾಡಿದೆ. ಈ ನೆರವು 75 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರ
File photo


ನವದೆಹಲಿ, 24 ಏಪ್ರಿಲ್ (ಹಿ.ಸ.) :

ಆ್ಯಂಕರ್ : ದೇಶದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಸಬಲೀಕರಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಈ ಹಣಕಾಸು ವರ್ಷದಲ್ಲಿ ₹7,981.47 ಕೋಟಿ ಮೊತ್ತವನ್ನು ಬಿಡುಗಡೆ ಮಾಡಿದೆ. ಈ ನೆರವು 75 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ನೀಡಿದ ಮಾಹಿತಿಯ ಪ್ರಕಾರ, ಪರಿಶಿಷ್ಟ ಜಾತಿ (SC) ಸೇರಿದಂತೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಗುರಿಯೊಂದಿಗೆ ಈ ಮೊತ್ತವನ್ನು ವಿವಿಧ ವಿದ್ಯಾರ್ಥಿವೇತನ ಯೋಜನೆಗಳಿಗೆ ವಿನಿಯೋಗಿಸಲಾಗಿದೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್ ಮಾತನಾಡಿ, ಸಮಾಜದ ಎಲ್ಲಾ ವರ್ಗಗಳ ಅಂತರ್ಗತ ಬೆಳವಣಿಗೆ ಹಾಗೂ ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸುವುದು ಸರ್ಕಾರದ ಪ್ರಮುಖ ಆದ್ಯತೆ ಎಂದು ಹೇಳಿದರು. ದುರ್ಬಲ ವರ್ಗಗಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಅವರು ತಿಳಿಸಿದರು.

ಈ ನೆರವಿನ ಅಡಿಯಲ್ಲಿ ಹಲವು ಪ್ರಮುಖ ವಿದ್ಯಾರ್ಥಿವೇತನ ಯೋಜನೆಗಳಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಪರಿಶಿಷ್ಟ ಜಾತಿಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಲ್ಲಿ ಶೇ.21ರಷ್ಟು ಹೆಚ್ಚಳವಾಗಿದ್ದು, ಸ್ನಾತಕೋತ್ತರ ವಿದ್ಯಾರ್ಥಿವೇತನದಲ್ಲಿ ಶೇ.11.23ರಷ್ಟು ಏರಿಕೆಯಾಗಿದೆ. ಉನ್ನತ ಶಿಕ್ಷಣಕ್ಕಾಗಿ ಕೇಂದ್ರ ವಲಯದ ವಿದ್ಯಾರ್ಥಿವೇತನದಲ್ಲಿ 13.5% ಹೆಚ್ಚಳ ಮಾಡಲಾಗಿದೆ.

ಇದೇ ವೇಳೆ, ಪ್ರೌಢಶಾಲಾ ಮಟ್ಟದ ವಿದ್ಯಾರ್ಥಿಗಳಿಗೆ ವಸತಿ ಶಿಕ್ಷಣ ಒದಗಿಸುವ ‘ಶ್ರೇಷ್ಠ’ ಯೋಜನೆಯಲ್ಲಿ ಶೇ.16ರಷ್ಟು ಹೆಚ್ಚಳ ಮಾಡಲಾಗಿದೆ. ಈ ಹೆಚ್ಚಳವು ಕಳೆದ ಹಣಕಾಸು ವರ್ಷದಿಗಿಂತ ಹೆಚ್ಚಿನದಾಗಿದೆ ಎಂದು ಸಚಿವರು ಹೇಳಿದರು.

ಸಚಿವಾಲಯವು ಪರಿಶಿಷ್ಟ ಜಾತಿಗಳು, ಇತರ ಹಿಂದುಳಿದ ವರ್ಗಗಳು (OBC), ಹಿರಿಯ ನಾಗರಿಕರು, ತೃತೀಯಲಿಂಗಿಗಳು, ಅಲೆಮಾರಿ ಬುಡಕಟ್ಟುಗಳು (DNT), ಕಸ ತೆಗೆಯುವವರು ಸೇರಿದಂತೆ ಹಲವು ದುರ್ಬಲ ವರ್ಗಗಳ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡುತ್ತಿದೆ.

ಶಿಕ್ಷಣ ಕ್ಷೇತ್ರದಲ್ಲಿ ಈ ಹೂಡಿಕೆ ಸಾಮಾಜಿಕ ಸಮಾನತೆಯನ್ನು ಬಲಪಡಿಸುವುದರ ಜೊತೆಗೆ, ಹಿಂದುಳಿದ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗಲಿದೆ ಎಂದು ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande