
ಬೆಂಗಳೂರು, 27 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ಅವರು, ಈ ಶೈಕ್ಷಣಿಕ ವರ್ಷವು ಸರ್ಕಾರಿ ಶಿಕ್ಷಣದಲ್ಲಿ ಐತಿಹಾಸಿಕ ಮೈಲಿಗಲ್ಲಾಗಿರುವುದಾಗಿ ಹೇಳಿದ್ದಾರೆ. ವಿದ್ಯಾರ್ಥಿಗಳು ದಾಖಲೆಯ ಮಟ್ಟದ ಫಲಿತಾಂಶಗಳನ್ನು ಸಾಧಿಸಿರುವುದನ್ನು ಉಲ್ಲೇಖಿಸಿ, ಎಸ್ಎಸ್ಎಲ್ಸಿಯಲ್ಲಿ ಶೇ. 94.10 ಹಾಗೂ ಪಿಯುಸಿಯಲ್ಲಿ ಶೇ. 86.48 ರಷ್ಟು ಉತ್ತೀರ್ಣತೆ ಸಾಧನೆಯು ಸರ್ಕಾರಿ ಶಾಲಾ ವ್ಯವಸ್ಥೆಯ ಬಲವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದ್ದಾರೆ.
ಈ ಸಾಧನೆಯಿಂದ ಉತ್ತೇಜಿತರಾಗಿ ರಾಜ್ಯ ಸರ್ಕಾರ “8 ಶಿಕ್ಷಣ ಖಾತರಿಗಳು” ಎಂಬ ಯೋಜನೆಯ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮತ್ತೊಂದು ದೊಡ್ಡ ಹೆಜ್ಜೆ ಇಡುತ್ತಿದೆ ಎಂದು ಅವರು ಹೇಳಿದ್ದಾರೆ. ಶಿಕ್ಷಕರ ಲಭ್ಯತೆ ಹೆಚ್ಚಿಸುವುದು, ಸುಧಾರಿತ ಮೂಲಸೌಕರ್ಯ, ಮಾಧ್ಯಮದ ಆಯ್ಕೆ, ಉಚಿತ ಸಾರಿಗೆ, ಡಿಜಿಟಲ್ ಕಲಿಕೆ, ಕಲೆ ಮತ್ತು ಕ್ರೀಡಾ ಶಿಕ್ಷಣ, ಶೈಕ್ಷಣಿಕ ಗುಣಮಟ್ಟದ ಮೇಲ್ವಿಚಾರಣೆ ಹಾಗೂ ಕೌಶಲ್ಯ ಆಧಾರಿತ ತರಬೇತಿ ನೀಡುವಂತಹ ಕ್ರಮಗಳು ಇದರ ಭಾಗವಾಗಿವೆ.
ಈ ಸುಧಾರಣೆಗಳಿಂದ 50 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಯೋಜನ ದೊರೆಯಲಿದ್ದು, ಈ ಶೈಕ್ಷಣಿಕ ವರ್ಷದಿಂದಲೇ ಪ್ರಮುಖ ಬದಲಾವಣೆಗಳು ಜಾರಿಗೆ ಬರಲಿವೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.
ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲೇ ಅತ್ಯುತ್ತಮ ಸರ್ಕಾರಿ ಶಾಲಾ ವ್ಯವಸ್ಥೆಯನ್ನು ನಿರ್ಮಿಸುವ ದೃಷ್ಟಿಕೋನ ಹೊಂದಿರುವುದಾಗಿ ತಿಳಿಸಿರುವ ಮುಖ್ಯಮಂತ್ರಿ, ಈ ಪರಿವರ್ತನಾತ್ಮಕ ಪ್ರಯಾಣದಲ್ಲಿ ಪಾಲ್ಗೊಳ್ಳಲು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa