
ದಾವಣಗೆರೆ, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚುನಾವಣಾ ಪ್ರಚಾರದ ಸಂಘಟನೆ ಬಲವರ್ಧನೆ ಕುರಿತು ಚರ್ಚೆ ನಡೆಸಲಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.
ಸಭೆಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮತದಾರರಿಗೆ ಸಮಗ್ರವಾಗಿ ತಿಳಿಸಿ, ಮನೆಮನೆಗೆ ಭೇಟಿ ನೀಡಿ ಸಂಪರ್ಕ ಸಾಧಿಸುವಂತೆ ಸೂಚನೆ ನೀಡಲಾಯಿತು. ಬೂತ್ ಮಟ್ಟದಲ್ಲಿ ಸಂಘಟನೆ ಬಲಿಷ್ಠವಾಗಿದ್ದರೆ ಚುನಾವಣಾ ಗೆಲುವು ಸುಲಭವಾಗುತ್ತದೆ ಎಂಬ ಸಂದೇಶವನ್ನು ಅವರು ಒತ್ತಿಹೇಳಿದರು.
“ಬೂತ್ ಗೆದ್ದರೆ ಚುನಾವಣೆಯ ಗೆಲುವು ಖಚಿತ” ಎಂಬ ಧ್ಯೇಯವಾಕ್ಯವನ್ನು ಮನದಲ್ಲಿಟ್ಟುಕೊಂಡು ಕಾರ್ಯಕರ್ತರು ಸಂಘಟಿತವಾಗಿ ಕಾರ್ಯನಿರ್ವಹಿಸಬೇಕು. ಪ್ರತಿ ಬೂತ್ನಲ್ಲಿ ಕೈಪಡೆ ಕಾರ್ಯಕರ್ತರು ಹಾಗೂ ಮುಖಂಡರ ಶ್ರಮವೇ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಪ್ರಮುಖ ಆಧಾರವಾಗಲಿದೆ ಎಂದು ಅವರು ಹೇಳಿದರು.
ಕಾರ್ಯಕರ್ತರ ಒಗ್ಗಟ್ಟು, ನಿಷ್ಠೆ, ಶಿಸ್ತು ಹಾಗೂ ಸಂಘಟನಾ ಶಕ್ತಿ ಪಕ್ಷಕ್ಕೆ ದೊಡ್ಡ ಬಲವಾಗಿದ್ದು, ಜನರ ವಿಶ್ವಾಸ ಗಳಿಸಲು ಪ್ರತಿಯೊಬ್ಬರೂ ಸಮರ್ಪಣಾಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಆರ್.ವಿ. ದೇಶಪಾಂಡೆ ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa