
ಸಿರುಗುಪ್ಪ, 30 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಸಾರ್ವಜನಿಕರಿಗೆ ಮತ್ತು ಪ್ರಯಾಣಿಕರಿಗೆ ಗುಣಮಟ್ಟದ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಸುಲಭವಾಗಿ ಒದಗಿಸುವ ಉದ್ದೇಶದಿಂದ, ಸಿರುಗುಪ್ಪ ನಗರಸಭೆಯ ಮಾರುಕಟ್ಟೆ ಆವರಣದಲ್ಲಿ ನಂದಿನಿ ಪಾರ್ಲರ್ ಸ್ಥಾಪಿಸಲು ರಾಬಕೊವಿ ಜಿಲ್ಲಾ ಹಾಲು ಒಕ್ಕೂಟಕ್ಕೆ ನಿವೇಶನ ಮಂಜೂರು ಮಾಡಲು ಉದ್ದೇಶಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದಾಗಿದೆ.
ಸಿರುಗುಪ್ಪ-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿಯ ಬಸ್ ನಿಲ್ದಾಣದ ಪಕ್ಕದಲ್ಲಿರುವ ಇಂದಿರಾ ಕ್ಯಾಂಟೀನ್ ಮುಂಭಾಗದ ನಗರಸಭೆ ತರಕಾರಿ ಮಾರುಕಟ್ಟೆ ಆವರಣದಲ್ಲಿ 10*15=150 ಚದರ ಅಡಿ ವಿಸ್ತೀರ್ಣದ ನಿವೇಶನ ಅಳತೆಯಲ್ಲಿ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಒಕ್ಕೂಟದ ಮೂಲಕ ಶುದ್ಧ ಮತ್ತು ಪೌಷ್ಟಿಕ ನಂದಿನಿ ಉತ್ಪನ್ನಗಳನ್ನು ಸಾರ್ವಜನಿಕರಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ.
ಈ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಈ ಪ್ರಕಟಣೆ ಹೊರಡಿಸಿದ 15 ದಿನಗಳ ಒಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಿರಗುಪ್ಪ ನಗರಸಭೆ ಕಾರ್ಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಂದು ವೇಳೆ ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆಗಳು ಬರದಿದ್ದಲ್ಲಿ, ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ನಿಯಮಾನುಸಾರ ನಿವೇಶನ ಮಂಜೂರು ಮಾಡಲು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಿರುಗುಪ್ಪ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್