ಆಗಸ್ಟ್ನಲ್ಲಿ ಸುಪ್ರೀಂ ಕೋರ್ಟ್ನಿಂದ 'ಸಮಾಧಾನ ಸಮಾರೋಹ್' ವಿಶೇಷ ಲೋಕ ಅದಾಲತ್ ಆಯೋಜನೆ : ಅನು ಶಿವರಾಮನ್
ಬಳ್ಳಾರಿ, 30 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ, ಬರುವ ಆಗಸ್ಟ್ 21, 22 ಮತ್ತು 23 ರಂದು ''ಸಮಾಧಾನ ಸಮಾರೋಹ್'' ಎಂಬ ವಿಶೇಷ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಹಾಗೂ ಕೆಎಎಲ್ಎಸ
ಆಗಸ್ಟ್ನಲ್ಲಿ ಸುಪ್ರೀಂ ಕೋರ್ಟ್ನಿಂದ 'ಸಮಾಧಾನ ಸಮಾರೋಹ್' ವಿಶೇಷ ಲೋಕ ಅದಾಲತ್ ಆಯೋಜನೆ : ಅನು ಶಿವರಾಮನ್


ಬಳ್ಳಾರಿ, 30 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ, ಬರುವ ಆಗಸ್ಟ್ 21, 22 ಮತ್ತು 23 ರಂದು 'ಸಮಾಧಾನ ಸಮಾರೋಹ್' ಎಂಬ ವಿಶೇಷ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಹಾಗೂ ಕೆಎಎಲ್ಎಸ್ಎ ಕಾರ್ಯನಿರ್ವಾಹಕ ಅಧ್ಯಕ್ಷರಾದ ಅನು ಶಿವರಾಮನ್ ಅವರು ಹೇಳಿದರು.

'ಸಮಾಧಾನ ಸಮಾರೋಹ್' ವಿಶೇಷ ಲೋಕ ಅದಾಲತ್ ಕುರಿತು, ಆನ್ ಲೈನ್ ಮೂಲಕ ಕರ್ನಾಟಕ ಹೈಕೋರ್ಟ್ ನ ಮೊದಲ ಮಹಡಿಯಲ್ಲಿರುವ ಕಾರ್ಯನಿರ್ವಾಹಕ ಅಧ್ಯಕ್ಷರ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಸುಪ್ರೀಂ ಕೋರ್ಟ್ ಪ್ರಕರಣಗಳ ಇತ್ಯರ್ಥಕ್ಕೆ ಇದು ವಿಶೇಷ ಲೋಕ್ ಅದಾಲತ್ ಆಗಿದೆ. ಸಾರ್ವಜನಿಕರಿಗೆ ಇದು ಸುವರ್ಣಾವಕಾಶವಾಗಿದ್ದು, ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ದಾವೆಗಳನ್ನು ಪರಸ್ಪರ ಒಪ್ಪಿಗೆ ಮತ್ತು ಸಂಧಾನದ ಮೂಲಕ ಬಗೆಹರಿಸಿ, ದಾವೆದಾರರಿಗೆ ಶೀಘ್ರ ನ್ಯಾಯ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಹೈಕೋರ್ಟ್ ಕಾನೂನು ಸೇವಾ ಸಮಿತಿಯ ಅಧ್ಯಕ್ಷ ನ್ಯಾಯಮೂರ್ತಿ ಆರ್.ದೇವದಾಸ್ ಅವರು ಮಾತನಾಡಿ, ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಉಳಿದಿರುವ ಸಾವಿರಾರು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು 'ವಿಶೇಷ ಲೋಕ್ ಅದಾಲತ್' ಎಂಬ ವಿನೂತನ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಎಂದೂ ನಡೆಯದ ಈ ವಿಶೇಷ ಕಾರ್ಯಕ್ರಮದ ಮೂಲಕ ಜನಸಾಮಾನ್ಯರಿಗೆ ತಮ್ಮ ಕಾನೂನು ಹೋರಾಟವನ್ನು ಸುಲಭವಾಗಿ ಮುಕ್ತಾಯಗೊಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ರಾಜ್ಯದ 4,328 ಪ್ರಕರಣಗಳ ಗುರುತಿಸುವಿಕೆ:

ಕರ್ನಾಟಕ ರಾಜ್ಯದ ವಿವಿಧ ತಾಲೂಕು ಮತ್ತು ಜಿಲ್ಲಾ ಮಟ್ಟಗಳಿಂದ ಸುಪ್ರೀಂ ಕೋರ್ಟ್ಗೆ ಹೋದ ಸುಮಾರು 4,328 ಪ್ರಕರಣಗಳನ್ನು ಈಗಾಗಲೇ ಸುಪ್ರೀಂ ಕೋರ್ಟ್ ಗುರುತಿಸಿ, ಪಟ್ಟಿಯನ್ನು ಕಳುಹಿಸಿಕೊಟ್ಟಿದೆ. ರಾಜಿ ಸಂಧಾನದ ಮೂಲಕ ಬಗೆಹರಿಸಬಹುದಾದ ಪ್ರಕರಣಗಳನ್ನು ಗುರುತಿಸಿ, ಅವುಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವುದು ಈ ಲೋಕ್ ಅದಾಲತ್ನ ಮುಖ್ಯ ಗುರಿಯಾಗಿದೆ ಎಂದು ತಿಳಿಸಿದರು.

ವರ್ಷಾನುಗಟ್ಟಲೆ ಸುಪ್ರೀಂ ಕೋರ್ಟ್ನಲ್ಲಿ ನಡೆಯುವ ಕಾನೂನು ಪ್ರಕ್ರಿಯೆಗಳು ಜನರಿಗೆ ಹೊರೆಯಾಗಬಹುದು. ಈ ಲೋಕ್ ಅದಾಲತ್ ಮೂಲಕ ಪರಸ್ಪರ ಒಪ್ಪಿಗೆಯ ಮೇರೆಗೆ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ಸಮಯ ಮತ್ತು ಹಣ ಎರಡೂ ಉಳಿತಾಯವಾಗಲಿದೆ. ತಮ್ಮ ಪ್ರಕರಣಗಳು ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವವರು ಕೂಡಲೇ ಸಂಬಂಧಪಟ್ಟ ತಾಲ್ಲೂಕು ಅಥವಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿಗೆ ಸಂಪರ್ಕಿಸಿ ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬೇಕೆಂದು ವಿನಂತಿಸಿದರು.

ವಿಡಿಯೋ ಸಂವಾದ ಬಳಿಕ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು, ಸಾರ್ವಜನಿಕರು ಮತ್ತು ದಾವೆದಾರರು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬೇಕು. ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದು ಉತ್ತಮ ವೇದಿಕೆಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದು ಎಂದರು.

ಸುಪ್ರೀಂ ಕೋರ್ಟ್ ನೀಡಿರುವ ಪಟ್ಟಿಯ ಅನ್ವಯ, ಕರ್ನಾಟಕ ರಾಜ್ಯದಿಂದ ಸುಮಾರು 4,328 ಪ್ರಕರಣಗಳನ್ನು ಗುರುತಿಸಲಾಗಿದೆ. ಈ ಪೈಕಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಿಗೆ ಸಂಬಂಧಿಸಿದ 109 ಪ್ರಕರಣಗಳು ಇತ್ಯರ್ಥಕ್ಕೆ ಲಭ್ಯವಿವೆ. ಸುಪ್ರೀಂ ಕೋರ್ಟ್ಗೆ ಅಲೆಯುವ ಬದಲು, ಸ್ಥಳೀಯವಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿಗಳ ಮೂಲಕವೇ ಸಂಧಾನ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂದು ತಿಳಿಸಿದರು.

ಪಕ್ಷಕಾರರು ಭೌತಿಕವಾಗಿ ಹಾಜರಾಗಲು ಸಾಧ್ಯವಾಗದಿದ್ದರೆ, ವಿಡಿಯೋ ಕಾನ್ಫರೆನ್ಸ್ ಮೂಲಕವೂ ಸಂಧಾನದಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಉದಾಹರಣೆಗೆ, ಒಬ್ಬರು ಬಳ್ಳಾರಿಯಲ್ಲಿದ್ದು ಇನ್ನೊಬ್ಬರು ಮುಂಬೈ ಅಥವಾ ವಿದೇಶದಲ್ಲಿದ್ದರೂ ತಂತ್ರಜ್ಞಾನದ ಮೂಲಕ ಸಂಧಾನ ನಡೆಸಬಹುದು. ತರಬೇತಿ ಪಡೆದ ಪರಿಣಿತ ಮಧ್ಯಸ್ಥಿಕೆದಾರರು ಮತ್ತು ವಕೀಲರು ಉಭಯ ಪಕ್ಷಗಳ ನಡುವೆ ಸಮಾಲೋಚನೆ ನಡೆಸಿ, ಇಬ್ಬರಿಗೂ ಒಪ್ಪಿಗೆಯಾಗುವಂತಹ ಪರಿಹಾರ ಕಂಡುಕೊಳ್ಳಲು ನೆರವಾಗುತ್ತಾರೆ. ಇದರಲ್ಲಿ ವೈವಾಹಿಕ ವಿವಾದಗಳು, ಅಪಘಾತ ವಿಮೆ ಪರಿಹಾರ, ಚೆಕ್ ಬೌನ್ಸ್ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ಕ್ರಿಮಿನಲ್ ರಾಜಿ ಪ್ರಕರಣಗಳು ಹಾಗೂ ಕಾರ್ಮಿಕ ವಿವಾದಗಳನ್ನು ಇಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಹೇಳಿದರು.

ನ್ಯಾಯಾಲಯದಲ್ಲಿ ಒಬ್ಬರು ಗೆದ್ದು ಇನ್ನೊಬ್ಬರು ಸೋಲುತ್ತಾರೆ. ಆದರೆ ಸಂಧಾನದ ಮೂಲಕ ಪ್ರಕರಣ ಇತ್ಯರ್ಥವಾದರೆ ಇಬ್ಬರೂ ಗೆದ್ದಂತೆ. ಇದು ಸಮಯ ಮತ್ತು ಹಣದ ಉಳಿತಾಯ ಮಾಡುವುದಲ್ಲದೆ, ಸಮಾಜದಲ್ಲಿ ಶಾಂತಿ ಮತ್ತು ಬಾಂಧವ್ಯವನ್ನು ಕಾಪಾಡುತ್ತದೆ. ನಿಮ್ಮ ಪ್ರಕರಣವು ಸುಪ್ರೀಂ ಕೋರ್ಟ್ ಪಟ್ಟಿಯಲ್ಲಿ ಇಲ್ಲದಿದ್ದರೂ, ವೆಬ್ಸೈಟ್ ಮೂಲಕ ನೋಂದಾಯಿಸಿಕೊಂಡು ಈ ಸೌಲಭ್ಯ ಪಡೆಯಬಹುದು ಎಂದು ಅವರು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande