
ನಾಸಿಕ್, 04 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಒಂಬತ್ತು ಮಂದಿ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಶುಕ್ರವಾರ ರಾತ್ರಿ ಸುಮಾರು 10 ಗಂಟೆ ವೇಳೆಗೆ, ದರ್ಗೋಡೆ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಆಳವಾದ ಬಾವಿಗೆ ಬಿದ್ದಿದೆ. ಕುಟುಂಬವು ಸಮೀಪದ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ಮಾಹಿತಿ ದೊರಕುತ್ತಿದ್ದಂತೆಯೇ ಸ್ಥಳೀಯ ಆಡಳಿತ, ಅಗ್ನಿಶಾಮಕ ದಳ ಮತ್ತು ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಆದರೆ ಬಾವಿಯಲ್ಲಿ ನೀರು ತುಂಬಿದ್ದುದರಿಂದ ಹಾಗೂ ಕತ್ತಲಿರುವ ಕಾರಣದಿಂದ ಕಾರ್ಯಾಚರಣೆ ಆರಂಭಿಕವಾಗಿ ಸಂಕಷ್ಟಕರವಾಗಿತ್ತು.
ಶನಿವಾರ ಬೆಳಿಗ್ಗೆ ವಿಪತ್ತು ನಿರ್ವಹಣಾ ತಂಡ ಕ್ರೇನ್ ಸಹಾಯದಿಂದ ಕಾರನ್ನು ಮೇಲಕ್ಕೆತ್ತಿ, ಎಲ್ಲಾ ಮೃತದೇಹಗಳನ್ನು ಹೊರತೆಗೆದರು.
ಅಪಘಾತದಲ್ಲಿ ಮೃತಪಟ್ಟವರನ್ನು ಸುನಿಲ್ ದತ್ತಾತ್ರೇಯ ದರ್ಗೋಡೆ (35), ರೇಷ್ಮಾ ಸುನಿಲ್ ದರ್ಗೋಡೆ (33), ರಾಖಿ, ಆಶಾ, ಮಾಧುರಿ, ಶ್ರಾವಣಿ ದರ್ಗೋಡೆ, ಸೃಷ್ಟಿ (16), ಶ್ರೇಯಶ್ (11) ಮತ್ತು ಸಮೃದ್ಧಿ (7) ಎಂದು ಗುರುತಿಸಲಾಗಿದೆ.
ಈ ದುರ್ಘಟನೆಯಿಂದ ಇಡೀ ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು, ಸ್ಥಳೀಯರು ಕುಟುಂಬದ ನಷ್ಟಕ್ಕೆ ಕಂಬನಿ ಮಿಡಿದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa