
ಗದಗ, 11 ಮೇ (ಹಿ.ಸ.) :
ಆ್ಯಂಕರ್ : ಸಮಾಜದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವುದು ಪುಣ್ಯದ ಕೆಲಸವಾಗಿದ್ದು, ಅಂತಹ ಕಾರ್ಯದಲ್ಲಿ ಭಾಗವಹಿಸುವವರು ಧನ್ಯರು ಎಂದು ಪ್ರಜಾಪಿತ ಬ್ರಹ್ಮಕುಮಾರಿಯ ಈಶ್ವರೀಯ ವಿಶ್ವವಿದ್ಯಾಲಯದ ವಿವಿಧ ಸಂಚಾಲಕಿ ಬ್ರ.ಕು. ಸವಿತಕ್ಕ ಹೇಳಿದರು.
ಗದಗ ಜಿಲ್ಲೆಯ ನರೇಗಲ್ ಪಟ್ಟಣದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
“ಪರೀಕ್ಷೆ ಒಂದು ಹಬ್ಬದಂತಿದ್ದು, ಅದನ್ನು ಸಮರ್ಥವಾಗಿ ಎದುರಿಸಿದ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಪ್ರತಿಭಾವಂತರಾಗುತ್ತಾರೆ.
ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವುದು ಶಿವನಿಗೆ ಪ್ರೀತಿಯ ಕೆಲಸವಾಗಿದೆ. ಈ ಉತ್ತಮ ಕಾರ್ಯಕ್ಕೆ ಸಹಕಾರ ನೀಡಿದ ಎಲ್ಲರಿಗೂ ಈಶ್ವರೀಯ ಆಶೀರ್ವಾದ ದೊರೆಯುತ್ತದೆ” ಎಂದು ಹೇಳಿದರು.
೧.೧. ಬಾಲಕರ ಶಾಲೆಯ ಮುಖ್ಯ ಶಿಕ್ಷಕ ಎಂ. ಸಜ್ಜನ ಮಾತನಾಡಿ, ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸುವುದು ಉತ್ತಮ ಸಂಪ್ರದಾಯವಾಗಿದೆ. ಶೇ. 85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ವಿಶೇಷವಾಗಿ ಆಹ್ವಾನಿಸಿ ಸನ್ಮಾನಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಇದೇ ವೇದಿಕೆಯಲ್ಲಿ ಸನ್ಮಾನ ಸ್ವೀಕರಿಸಬೇಕು ಎಂದು ಅವರು ಆಶಿಸಿದರು.
ಶಿಕ್ಷಕ ಎಂ.ವಿ. ಬಿಂಗಿ ಹಾಗೂ ಉಪನ್ಯಾಸಕ ಶಿವಾನಂದ ಗೋಗೇರಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಮಾತುಗಳನ್ನಾಡಿದರು. ಶಿಕ್ಷಕ ಮಹಾದೇವಪ್ಪ ಬೇವಿನಕಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 21 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / lalita MP