

ಬಳ್ಳಾರಿ, 13 ಮೇ (ಹಿ.ಸ.) :
ಆ್ಯಂಕರ್ : ಮಕ್ಕಳು ತಾವು ಕಲಿತದ್ದನ್ನು ಮರೆಯದೆ ನಿರಂತರ ಅಭ್ಯಾಸ ಮಾಡುವ ಮೂಲಕ ತಮ್ಮ ಕೌಶಲಗಳನ್ನು ವೃದ್ಧಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಸವಿತಾ.ಸಿ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಪಾರ್ವತಿ ನಗರದ 2ನೇ ಕ್ರಾಸ್ನಲ್ಲಿರುವ ಸರ್ಕಾರಿ ಕನ್ನಡ ಮಾಧ್ಯಮ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 05 ರಿಂದ 16 ವರ್ಷದ ಮಕ್ಕಳಿಗಾಗಿ ಆಯೋಜಿಸಲಾಗಿದ್ದ 15 ದಿನಗಳ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲೆ, ಜೇಡಿಮಣ್ಣಿನ ಕಲೆ, ಸಮೂಹ ನೃತ್ಯ, ಸಮೂಹ ಸಂಗೀತ, ಕಸದಿಂದ ರಸ, ಕರಾಟೆ, ಯೋಗ ಇತ್ಯಾದಿಗಳ ‘ಬೇಸಿಗೆ ಶಿಬಿರ’ದ ಸಮಾರೋಪದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಕ್ಕಳು ಶಿಬಿರದಲ್ಲಿ ಕಳೆದ 15 ದಿನಗಳ ಕಾಲ ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ಪಡೆದ ತರಬೇತಿಯನ್ನು ಕೇವಲ ಶಿಬಿರಕ್ಕೆ ಸೀಮಿತಗೊಳಿಸಬಾರದು. ಬದಲಾಗಿ ನಿರಂತರ ಅಭ್ಯಸಿಸುತ್ತಿರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್ ಅವರು ಅಧ್ಯಕ್ಷತೆ ವಹಿಸಿ, ಇಂತಹ ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರಹಾಕಲು ಉತ್ತಮ ವೇದಿಕೆಯಾಗಿವೆ. ಇಲ್ಲಿ ಕಲಿತ ವಿಷಯಗಳು ಮುಂದಿನ ದಿನಗಳಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಮಕ್ಕಳಿಗೆ ಆತ್ಮವಿಶ್ವಾಸ ನೀಡುತ್ತವೆ ಎಂದು ತಿಳಿಸಿದರು.
ಶಿಬಿರದ ಅವಧಿಯಲ್ಲಿ ಮಕ್ಕಳು ಕಲಿತ ಚಿತ್ರಕಲೆ, ಕರಕುಶಲೆ, ಜೇಡಿಮಣ್ಣಿನ ಕಲೆ, ಸಮೂಹ ನೃತ್ಯ, ಸಂಗೀತ, ಯೋಗ ಹಾಗೂ ಕರಾಟೆ ಪ್ರದರ್ಶನಗಳು ಎಲ್ಲರ ಗಮನ ಸೆಳೆದವು. ಶಿಬಿರದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಮಕ್ಕಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಲಾಯಿತು.
ಬೇಸಿಗೆ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಕ್ಕಳಿಗೆ ಮಾರ್ಗದರ್ಶನ ನೀಡಿದ ಮಲ್ಲಿಕಾರ್ಜುನ (ಚಿತ್ರಕಲೆ/ಕರಕುಶಲೆ), ಕವಿತಾ (ಸಂಗೀತ), ನಾಗರಾಜ ಕೆ.(ಚದುರಂಗ), ಪ್ರಕಾಶ್ (ಯೋಗ) ಹಾಗೂ ಮನೋಜ್ (ಕರಾಟೆ) ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಎಳೆನಾಗಪ್ಪ, ಶಾಲಾ ಶಿಕ್ಷಣ ಇಲಾಖೆಯ ಕೋಟ್ರೇಶ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ವೆಂಕಟೇಶ್, ಎಫ್.ಗೌಸೀಯ, ಶಾಶಿಬಕಾ ಜಿಲ್ಲಾ ವ್ಯವಸ್ಥಾಪಕ ಜಗನ್ನಾಥ.ಕೆ ಸೇರಿದಂತೆ ಮಕ್ಕಳು ಹಾಗೂ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್