
ಕೊಪ್ಪಳ, 14 ಮೇ (ಹಿ.ಸ.) :
ಆ್ಯಂಕರ್ : 2026ನೇ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆ–2ರ ಪರೀಕ್ಷೆಗಳು ಮೇ 18 ರಿಂದ ಮೇ 25ರ ವರೆಗೆ ನಡೆಯಲಿರುವ ಹಿನ್ನಲೆಯಲ್ಲಿ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯಲು ಕೊಪ್ಪಳ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023 ರ ಕಲಂ 163 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ. ಸುರೇಶ್ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ–2 ಮೇ 18ರಿಂದ ಮೇ 25ರವರೆಗೆ ಪ್ರತಿದಿನ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಜಿಲ್ಲೆಯಲ್ಲಿ ಕೊಪ್ಪಳ ತಾಲ್ಲೂಕಿನಲ್ಲಿ 4, ಗಂಗಾವತಿ ತಾಲ್ಲೂಕಿನಲ್ಲಿ 2, ಕನಕಗಿರಿ ತಾಲ್ಲೂಕಿನಲ್ಲಿ 1, ಕಾರಟಗಿ ತಾಲ್ಲೂಕಿನಲ್ಲಿ 1, ಕುಷ್ಟಗಿ ತಾಲ್ಲೂಕಿನಲ್ಲಿ 2, ಯಲಬುರ್ಗಾ ತಾಲ್ಲೂಕಿನಲ್ಲಿ 1 ಹಾಗೂ ಕುಕನೂರು ತಾಲ್ಲೂಕಿನಲ್ಲಿ 1 ಪರೀಕ್ಷಾ ಕೇಂದ್ರಗಳು ಸೇರಿದಂತೆ ಜಿಲ್ಲೆಯ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.
ಗಂಗಾವತಿಯ ಬೆಥಲ್ ಆಂಗ್ಲ ಪ್ರೌಢಶಾಲೆ, ಶ್ರೀ ಕೋಟ್ಟೂರೇಶ್ವರ ಪ.ಪೂ ಕಾಲೇಜು, ಕನಕಗಿರಿಯ ಕೆಪಿಎಸ್ ಕಾಲೇಜು, ಕಾರಟಗಿ ಕೆಪಿಎಸ್ ಕಾಲೇಜು, ಕೊಪ್ಪಳದ ಕಾಳಿದಾಸ ಪ್ರೌಢಶಾಲೆ, ನ್ಯೂ ಎಕ್ಸಲೆಂಟ್ ಪಬ್ಲಿಕ್ ಸ್ಕೂಲ್ ಹಾಗೂ ಭಾಗ್ಯನಗರ ಸರಕಾರಿ ಪದವಿ ಪೂರ್ವ ಕಾಲೇಜು, ಶ್ರೀ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕುಷ್ಟಗಿಯ ಸರಕಾರಿ ಬಾಲಕಿಯರ ಪಿಯು ಕಾಲೇಜು ಹಾಗೂ ಕ್ರೈಸ್ಟ್ ದ ಕಿಂಗ್ ಪ್ರೌಢಶಾಲೆ, ಯಲಬುರ್ಗಾ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಕುಕನೂರಿನ ವಿದ್ಯಾನಂದ ಗುರುಕುಲ ಪದವಿ ಪೂರ್ವ ಕಾಲೇಜು ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ನಿಷೇಧಾಜ್ಞೆ ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ. ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್