
ವಿಜಯಪುರ, 15 ಮೇ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಗಾಳಿ-ಮಳೆಗೆ ಮತ್ತೊಂದು ದುರ್ಘಟನೆ ಸಂಭವಿಸಿದ್ದು, ಬಿರುಗಾಳಿಯ ಅಬ್ಬರಕ್ಕೆ ಬೃಹತ್ ಗಾತ್ರದ ಬೇವಿನ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮುದ್ದೇಬಿಹಾಳ ತಾಲೂಕಿನ ಢವಳಗಿ-ವಿಜಯಪುರ ರಸ್ತೆಯಲ್ಲಿ ನಡೆದಿದೆ.
ಢವಳಗಿ ಗ್ರಾಮದ ಸಮೀಪ ಈ ದುರ್ಘಟನೆ ಸಂಭವಿಸಿದ್ದು, ಮೃತ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ ಎಂದು ತಿಳಿದುಬಂದಿದೆ. ಏಕಾಏಕಿ ಬಿರುಸಿನ ಗಾಳಿ ಹಾಗೂ ಮಳೆ ಆರಂಭವಾಗಿದ್ದು, ರಸ್ತೆಯ ಬದಿಯಲ್ಲಿದ್ದ ಹಳೆಯ ಬೃಹತ್ ಬೇವಿನ ಮರ ಗಾಳಿಯ ಅಬ್ಬರಕ್ಕೆ ತಡೆಯಲಾಗದೆ ಏಕಾಏಕಿ ಉರುಳಿ ಬಿದ್ದಿದೆ.
ಅದೇ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯ ಮೇಲೆ ಮರ ಬಿದ್ದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ಕಂಡು ಕೆಲಕಾಲ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಆತಂಕಕ್ಕೆ ಒಳಗಾದರು.
ಸ್ಥಳೀಯ ಗ್ರಾಮಸ್ಥರು ತಕ್ಷಣ ರಕ್ಷಣಾ ಕಾರ್ಯಕ್ಕೆ ಮುಂದಾಗಿ ಮರದ ಕೊಂಬೆಗಳನ್ನು ತೆರವುಗೊಳಿಸಲು ಹರಸಾಹಸಪಟ್ಟರು. ಬಳಿಕ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.
ಇತ್ತೀಚಿನ ದಿನಗಳಲ್ಲಿ ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರಿ ಗಾಳಿ-ಮಳೆಯ ಅಬ್ಬರ ಹೆಚ್ಚಾಗಿದ್ದು, ಮರಗಳು ಉರುಳುವುದು, ಮನೆಗಳ ಮೇಲ್ಚಾವಣಿ ಹಾನಿಯಾಗುವುದು ಸೇರಿದಂತೆ ಅನಾಹುತಗಳು ಸಂಭವಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ರಸ್ತೆ ಬದಿಯ ಹಳೆಯ ಮರಗಳ ಪರಿಶೀಲನೆ ಮಾಡಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande