

ಬಳ್ಳಾರಿ, 15 ಮೇ (ಹಿ.ಸ.) :
ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪರಿಶಿಷ್ಟರ ಹಾಸ್ಟಲ್ ಗಳಲ್ಲಿ ಕಳಪೆ ಗುಣಮಟ್ದ ಆಹಾರ ವಿತರಣೆ, ಮೂಲಭೂತ ಸೌಲಭ್ಯಗಳು ಮತ್ತು ನೈರ್ಮಲ್ಯಕ್ಕಾಗಿ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಹಾಸ್ಟಲ್ ನಿವಾಸಿಗಳು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಅವರು, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪರಿಶಿಷ್ಟರ ಹಾಸ್ಟಲ್ಗಳಲ್ಲಿ ಗುಣಮಟ್ಟದ - ಪೌಷ್ಠಿಕಾಂಶದ ಆಹಾರ ಪೂರೈಕೆ ಆಗುತ್ತಿಲ್ಲ. ಹಾಸ್ಟಲ್ಗಳಲ್ಲಿ ಮೂಲಭೂತ ಸೌಲಭ್ಯಗಳಿಲ್ಲ. ಹಾಸ್ಟಲ್ನಲ್ಲಿ ಸ್ವಚ್ಛತೆ ಇಲ್ಲವಾಗಿದೆ ಎಂದು ಆರೋಪಿಸಿದರು.
ಹಾಸ್ಟಲ್ನ ಊಟದಲ್ಲಿ ತರಕಾರಿ, ಬೇಳೆ ಇಲ್ಲದ ಸಾಂಬಾರು, ಪಲ್ಯ, ಜಿಡ್ಡುಗಟ್ಟಿದ ಎಣ್ಣೆ ಬಳಕೆ, ಚಿಕನ್ ಇಲ್ಲ. ವಾರಕ್ಕೆ ಒಂದು ದಿನ ಒಂದು ಮೊಟ್ಟೆ ಹಾಗೂ ಒಂದು ಬಾಳೆಹಣ್ಣನ್ನು ಮಾತ್ರ ನೀಡಲಾಗುತ್ತಿದೆ ಎಂದು ಅವರು ದೂರಿದರು.
ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಅವರು, ವಿದ್ಯಾರ್ಥಿಗಳು ಮೇಲಧಿಕಾರಿಗಳಿಗೆ ಈ ಮಾಹಿತಿ ನೀಡಿದಾಗ, ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕ ಮಾಡಲು ತಿಳಿಸುತ್ತಾರೆ. ಆದರೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅನುದಾನವನ್ನು ವಿಶ್ವವಿದ್ಯಾಲಯಕ್ಕೆ ನೀಡಲಾಗುತ್ತದೆ. ವಿಶ್ವವಿದ್ಯಾಲಯವು ಹಾಸ್ಟಲ್ ನಿರ್ವಹಣೆ ಮಾಡುತ್ತಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆಯ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಈರಣ್ಣ, ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ್, ಉಪಾಧ್ಯಕ್ಷೆ ಎಂ. ಶಾಂತಿ, ಕಚೇರಿ ಕಾರ್ಯದರ್ಶಿ ನಿಹಾರಿಕ, ಕಾರ್ಯದರ್ಶಿ ಮಂಡಳಿ ಸದಸ್ಯ ಸಮೀರ್ ಹಾಗೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಾದ ನಿಹಾರಿಕಾ. ಆರ್, ಅರುಣ್ ಭಗತ್, ಭಾಗ್ಯಬಾಯಿ, ಮಂಜುನಾಥ, ಹನುಮೇಶ ಬನ್ನಿಕೊಪ್ಪ, ಬಾರೇಶ್, ವಿನಯ್ ಕುಮಾರ್, ಮಹೇಶ್ ನಾಯಕ ಹಾಗೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್