
ಕಂಪ್ಲಿ, 16 ಮೇ (ಹಿ.ಸ.) :
ಆ್ಯಂಕರ್ : ಕಂಪ್ಲಿ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕೀಯರ ವಿದ್ಯಾರ್ಥಿನಿಲಯಗಳ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳು (5 ರಿಂದ 10ನೇ ತರಗತಿ): ಕಂಪ್ಲಿ, ಎಮ್ಮಿಗನೂರು, ರಾಮಸಾಗರ ಇಲಾಖೆ ವ್ಯಾಪ್ತಿಯ ಪರಿಶಿಷ್ಟ ಜಾತಿ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಕಂಪ್ಲಿಯ ಬಾಲಕೀಯರ ನಿಲಯಗಳು. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂ.30.
ಬೇಕಾಗುವ ಪ್ರಮುಖ ದಾಖಲೆಗಳು :
ಸ್ಯಾಟ್ಸ್ ಸಂಖ್ಯೆ, ವಿದ್ಯಾರ್ಥಿಯ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ವಿದ್ಯಾರ್ಥಿಯ ಭಾವಚಿತ್ರ (ಫೋಟೋ ), ಬ್ಯಾಂಕ್ ಖಾತೆ ವಿವರಗಳು, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಹಿಂದಿನ ವರ್ಷದ ಅಂಕಪಟ್ಟಿ, ತಂದೆ/ತಾಯಿಯ ಆಧಾರ್ ಸಂಖ್ಯೆ.
ಕಂಪ್ಲಿಯ ಮೆಟ್ರಿಕ್ ನಂತರದ ಬಾಲಕೀಯರ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.
ಮಂಜೂರಾತಿ ಸಂಖ್ಯಾಬಲದ ಆಧಾರದ ಮೇಲೆ ಶೇ.75 ರಷ್ಟು ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಗೂ ಶೇ.25 ರಷ್ಟು ಇತರೆ ಜಾತಿಯ ವಿದ್ಯಾರ್ಥಿಗಳಿಗೆ ನಿಯಮಾವಳಿಗಳ ಪ್ರಕಾರ ಪ್ರವೇಶ ನೀಡಲಾಗುವುದು.
ಆಸಕ್ತ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ swdhmis.karnataka.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಅದರ ಸ್ವೀಕೃತಿ ಪ್ರತಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಬಳ್ಳಾರಿಯ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಸಂಬಂಧಪಟ್ಟ ವಿದ್ಯಾರ್ಥಿನಿಲಯದ ವಾರ್ಡನ್ರವರಿಗೆ ಸಲ್ಲಿಸಬೇಕಾಗುತ್ತದೆ ಎಂದು ಬಳ್ಳಾರಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್