
ಕೊಪ್ಪಳ, 17 ಮೇ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್ನಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ 1ನೇ ತರಗತಿಯ ಖಾಲಿ ಸ್ಥಾನಗಳಿಗೆ ವಿದ್ಯಾರ್ಥಿಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನವಾಗಿದೆ.
ವಸತಿ ಶಾಲೆಯಲ್ಲಿ ಒಟ್ಟು 40 ಸೀಟುಗಳು ಲಭ್ಯವಿದ್ದು, ಅವುಗಳಲ್ಲಿ ಪರಿಶಿಷ್ಟ ಪಂಗಡ (ಎಸ್.ಟಿ) ವಿದ್ಯಾರ್ಥಿಗಳಿಗೆ 30 ಸೀಟುಗಳು ಹಾಗೂ ಇತರೆ ವರ್ಗಗಳಿಗೆ 10 ಸೀಟುಗಳನ್ನು ಮೀಸಲಿರಿಸಲಾಗಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷದೊಳಗಿರಬೇಕು. ಜೊತೆಗೆ ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ತಹಶೀಲ್ದಾರರಿಂದ ಪಡೆದ ಆರ್.ಡಿ ಸಂಖ್ಯೆಯೊಂದಿಗೆ ಅರ್ಜಿಗೆ ಲಗತ್ತಿಸುವುದು ಕಡ್ಡಾಯವಾಗಿದೆ. ಪ್ರವೇಶಾತಿ ಪ್ರಕ್ರಿಯೆಯಲ್ಲಿ ವಿಶೇಷ ವರ್ಗದ ಮಕ್ಕಳಿಗೆ ಮೊದಲ ಆದ್ಯತೆ ನೀಡಲಾಗುವುದು.
ಪೌರಕಾರ್ಮಿಕರು, ಸಫಾಯಿ ಕರ್ಮಚಾರಿಗಳು, ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುವವರ ಮಕ್ಕಳು, ದೇವದಾಸಿಯರ ಮಕ್ಕಳು, ಅಂಗವಿಕಲತೆ ಹೊಂದಿರುವವರು, ಕೋವಿಡ್-19 ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳು, ಸಿಂಗಲ್ ಫ್ಯಾಮಿಲಿ ಮಕ್ಕಳು, ಯೋಜನಾ ನಿರಾಶ್ರಿತರು, ಮಾಜಿ ಸೈನಿಕರ ಮಕ್ಕಳು, ಕೊಳಗೇರಿಗಳಲ್ಲಿ ವಾಸಿಸುವವರು, ಕೃಷಿ ಕಾರ್ಮಿಕರ ಮಕ್ಕಳು, ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳು, ದೌರ್ಜನ್ಯಕ್ಕೊಳಗಾದ ಹಾಗೂ ಜೀತ ವಿಮುಕ್ತ ಮಕ್ಕಳಿಗೆ ಮೊದಲ ಆದ್ಯತೆ ನೀಡಲಾಗುವುದು.
ಅರ್ಹ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ತಾಲೂಕ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಗಂಗಾವತಿ ಅಥವಾ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಚಿಕ್ಕಬೆಣಕಲ್ ಇಲ್ಲಿಗೆ ನೇರವಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಾಲೂಕ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಗಂಗಾವತಿ ಅಥವಾ ವಸತಿ ಶಾಲೆಯ ಮೇಲ್ವಿಚಾರಕರನ್ನು ಸಂಪರ್ಕಿಸುವಂತೆ ಗಂಗಾವತಿ ತಾಲೂಕ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್