ನೀಟ್ ಪರೀಕ್ಷೆ ಅವ್ಯವಹಾರದ ವಿರುದ್ಧ ಹೋರಾಟ : ರೆಡ್ಡಿ ಶ್ರೀನಿವಾಸ್
ದೇಶದಾದ್ಯಂತ
Fight against NEET exam malpractice: Reddy Srinivas


ಗಂಗಾವತಿ , 17 ಮೇ (ಹಿ.ಸ.) :

ಆ್ಯಂಕರ್ : ದೇಶದಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ನಡೆಸಲಾದ ನೀಟ್ ((NEET) ಪರೀಕ್ಷೆಯ ಅಕ್ರಮಗಳು ಹಾಗೂ ಕೇಂದ್ರ ಸರ್ಕಾರವು ಮರುಪರೀಕ್ಷೆಗೆ ದಿನಾಂಕ ನಿಗದಿ ಮಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಮುಖಂಡ ಹಾಗೂ ಗ್ಯಾರೆಂಟಿ ಯೋಜನೆಗಳ ಕೊಪ್ಪಳ ಜಿಲ್ಲಾಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್ ಅವರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ನೀಟ್ ಪರೀಕ್ಷೆ ನಡೆಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅವರು ನೇರ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕೇಂದ್ರ ಸರ್ಕಾರದ ಬೇಜವಾಬ್ದಾರಿತನದಿಂದಾಗಿ ವಿದ್ಯಾರ್ಥಿಗಳು ಇಂದು ಬೀದಿಗೆ ಬೀಳುವಂತಾಗಿದೆ ಎಂದು ತೀವ್ರ ಆತಂಕ ವ್ಯಕ್ತಪಡಿಸಿದರು.

22 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟ!

ದೇಶಾದ್ಯಂತ ಒಟ್ಟು 5,433 ಪರೀಕ್ಷಾ ಕೇಂದ್ರಗಳಲ್ಲಿ ಬರೋಬ್ಬರಿ 22 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಗಲಿರುಳು ಶ್ರಮಪಟ್ಟು ಈ ಬಾರಿ ನೀಟ್ ಪರೀಕ್ಷೆ ಬರೆದಿದ್ದರು. ಆದರೆ, ವ್ಯವಸ್ಥೆಯ ಲೋಪದೋಷಗಳಿಂದಾಗಿ ವಿದ್ಯಾರ್ಥಿಗಳು ಈಗ ಮತ್ತೆ ಕಡ್ಡಾಯವಾಗಿ ಮರುಪರೀಕ್ಷೆ ಬರೆಯುವ ಅನಿವಾರ್ಯತೆ ನಿರ್ಮಾಣವಾಗಿದೆ. ಇದು ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯ ಮತ್ತು ಅವರ ಮಾನಸಿಕ ಸ್ಥಿತಿಯೊಂದಿಗೆ ಆಟವಾಡಿದಂತೆ ಎಂದು ರೆಡ್ಡಿ ಶ್ರೀನಿವಾಸ್ ಕಿಡಿಕಾರಿದ್ದಾರೆ.

ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ಅನ್ಯಾಯ: ಕಷ್ಟಪಟ್ಟು ಓದಿ ಉತ್ತಮವಾಗಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆಯ ನಿರ್ಧಾರವು ಕೇಂದ್ರ ಸರ್ಕಾರ ಮಾಡಿದ ದೊಡ್ಡ ಅನ್ಯಾಯವಾಗಿದೆ.

ಅಃಖಿ ಪರೀಕ್ಷಾ ಕ್ರಮಕ್ಕೆ ವಿರೋಧ: ಮುಂಬರುವ 2026ರ ವರ್ಷದಿಂದ ನೀಟ್ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ (CBT) ಮಾದರಿಯಲ್ಲಿ ನಡೆಸಲು ನಿರ್ಧರಿಸಿರುವುದು ಸರ್ಕಾರದ ಗೊಂದಲ ಮತ್ತು ಹಳೇ ಆಫ್ಲೈನ್ ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತದೆ.

ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ: ಪರೀಕ್ಷಾ ವ್ಯವಸ್ಥೆಯಲ್ಲಿ ಸರಣಿ ಲೋಪದೋಷಗಳು ಹಾಗೂ ಅಕ್ರಮಗಳು ನಡೆದಿರುವ ಹಿನ್ನೆಲೆಯಲ್ಲಿ, ಇದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

ಮುಂದುವರಿಯಲಿರುವ ಕಾಂಗ್ರೆಸ್ ಹೋರಾಟ

ಕಾಂಗ್ರೆಸ್ ಪಕ್ಷವು ಯಾವಾಗಲೂ ವಿದ್ಯಾರ್ಥಿಗಳ ಪರವಾಗಿ ನಿಲ್ಲುತ್ತದೆ. ಕೇಂದ್ರ ಸರ್ಕಾರದ ಈ ವೈಫಲ್ಯದ ವಿರುದ್ಧ ಮತ್ತು ವಿದ್ಯಾರ್ಥಿಗಳಿಗೆ ಸಂಪೂರ್ಣ ನ್ಯಾಯ ಸಿಗುವವರೆಗೂ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಶಿವರಾಜ್ ತಂಗಡಗಿ ಹಾಗೂ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ರೆಡ್ಡಿ ಶ್ರೀನಿವಾಸ್ ಸ್ಪಷ್ಟಪಡಿಸಿದರು.

ಜನಾಕ್ರೋಶಕ್ಕೆ ಕಾರಣವಾದ ನಿರ್ಧಾರ

ಒಟ್ಟಾರೆಯಾಗಿ, ನೀಟ್ ಪರೀಕ್ಷಾ ಅಕ್ರಮ ಹಾಗೂ ಮರುಪರೀಕ್ಷೆಯ ನಿರ್ಧಾರವು ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಅಸಮಾಧಾನ ಮತ್ತು ಗೊಂದಲವನ್ನು ಮೂಡಿಸಿದೆ. ಈ ಹಗರಣವು ರಾಜಕೀಯವಾಗಿಯೂ ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶಕ್ಕೆ ಪ್ರಮುಖ ಕಾರಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳಿಗೆ ಶುಭ ಹಾರೈಕೆ:

ಇದೇ ಸಂದರ್ಭದಲ್ಲಿ, ಜೂನ್ 21 ರವಿವಾರ ಪರೀಕ್ಷೆ ಎದುರಿಸಲಿರುವ ವಿದ್ಯಾರ್ಥಿಗಳಿಗೆ *ಧೈರ್ಯ ತುಂಬಿದ ರೆಡ್ಡಿ ಶ್ರೀನಿವಾಸ್* ಅವರು, ಎಲ್ಲಾ ವಿದ್ಯಾರ್ಥಿಗಳಿಗೆ ಒಳಿತಾಗಲಿ, ಮುಂಬರುವ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ವೈದ್ಯಕೀಯ ಕ್ಷೇತ್ರದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ನಿಮ್ಮದಾಗಿಸಿಕೊಳ್ಳಿ ಎಂದು ಹೃದಯಪೂರ್ವಕವಾಗಿ ಶುಭ ಹಾರೈಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande