
ಕಲಬುರಗಿ, 18 ಮೇ (ಹಿ.ಸ.) :
ಆ್ಯಂಕರ್ : ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ನಾನಾ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಅಡಿಗಲ್ಲು ನೆರವೇರಿಸಿದರು. ನಗರದ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ವರ್ತಮಾನ ಹಾಗೂ ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ನಗರದ ಅಭಿವೃದ್ಧಿಗಾಗಿ ರೂಪಿಸಲಾಗಿರುವ ನೀಲನಕ್ಷೆಯ ಅನ್ವಯ ಜನಸೌಕರ್ಯ, ಪರಿಸರ ಸಂರಕ್ಷಣೆ ಹಾಗೂ ಮೂಲಭೂತ ಸೌಕರ್ಯ ವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ನಾನಾ ಭಾಗಗಳಲ್ಲಿ ಉದ್ಯಾನವನ, ಸ್ಮಶಾನ, ಜಂಕ್ಷನ್ ಹಾಗೂ ಕಚೇರಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.
ನಗರದ 17 ಸ್ಥಳಗಳಲ್ಲಿ ರೂ. 3.16 ಕೋಟಿ ವೆಚ್ಚದಲ್ಲಿ ಉದ್ಯಾನವನಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕರಿಗೆ ಉತ್ತಮ ವಾತಾವರಣ ಹಾಗೂ ಮನರಂಜನಾ ಸೌಲಭ್ಯ ಒದಗಿಸುವ ಉದ್ದೇಶ ಹೊಂದಲಾಗಿದೆ. ಇದೇ ವೇಳೆ 18 ಸ್ಥಳಗಳಲ್ಲಿ ರೂ. 3.58 ಕೋಟಿ ವೆಚ್ಚದಲ್ಲಿ ಸ್ಮಶಾನಗಳ ಅಭಿವೃದ್ಧಿ ಕಾಮಗಾರಿಯೂ ಆರಂಭಗೊಂಡಿದೆ.
ಇನ್ನೂ ನಗರದ ಪ್ರಮುಖ 4 ಜಂಕ್ಷನ್ಗಳ ಅಭಿವೃದ್ಧಿಗೆ ರೂ. 5.66 ಕೋಟಿ ಮೀಸಲಿಡಲಾಗಿದ್ದು, ಸಂಚಾರ ದಟ್ಟಣೆ ನಿವಾರಣೆ ಹಾಗೂ ಸುಗಮ ವಾಹನ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಜೊತೆಗೆ ರೂ. 25 ಲಕ್ಷ ವೆಚ್ಚದಲ್ಲಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಕಟ್ಟಡ ನವೀಕರಣ ಕಾಮಗಾರಿಗೂ ಚಾಲನೆ ನೀಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಅಪ್ಪಾ ಕೆರೆ ಹಾಗೂ ಕಲಬುರಗಿ ಕೋಟೆ ಅಭಿವೃದ್ಧಿ ಸೇರಿದಂತೆ ಪ್ರವಾಸೋದ್ಯಮ ಹಾಗೂ ಜನಪರ ಯೋಜನೆಗಳನ್ನು ಮುಂದಿನ ದಿನಗಳಲ್ಲಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಕಲಬುರಗಿ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯಲು ಬದ್ಧವಾಗಿದ್ದು, ಪರಿಸರ, ಜನರ ಆರೋಗ್ಯ ಹಾಗೂ ಆರ್ಥಿಕತೆಗೆ ಪೂರಕವಾಗುವ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.