ಕುಕನೂರು : ಡೆಂಗ್ಯೂ ಕಾಯಿಲೆ ಜಾಗೃತಿ
ಒಡೆದ
ಕುಕನೂರು: ಡೆಂಗ್ಯೂ ಖಾಯಿಲೆ ಜಾಗೃತಿ


ಕುಕನೂರು, 19 ಮೇ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ, ಕೊಪ್ಪಳ ಮತ್ತು ಸಮುದಾಯ ಆರೋಗ್ಯ ಕೇಂದ್ರ ಹಾಗೂ ಶ್ರೀ ಜ್ಞಾನ ಕೋಚಿಂಗ್ ಸೆಂಟರ್, ಕುಕನೂರು ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಜ್ಞಾನ ಕೋಚಿಂಗ್ ಸೆಂಟರ್ನಲ್ಲಿ “ಡೆಂಗ್ಯೂ ಕಾಯಿಲೆ ಜಾಗೃತಿ ಕಾರ್ಯಕ್ರಮ” ನಡೆಯಿತು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ವ್ಹಿ. ಪೂಜಾರ ಅವರು ಮಾತನಾಡಿ, ಪ್ರತಿ ವರ್ಷ ಮೇ 16 ರಂದು “ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ”ವನ್ನು ಆಚರಿಸಲಾಗುತ್ತಿದ್ದು, ಈ ಬಾರಿ “ಡೆಂಗಿ ನಿಯಂತ್ರಣಕ್ಕಾಗಿ ಸಮುದಾಯದ ಸಹಭಾಗಿತ್ವ ಪರಿಶೀಲಿಸಿ, ಸ್ವಚ್ಛಗೊಳಿಸಿ ಹಾಗೂ ಮುಚ್ಚಿಡಿ” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತದೆ.

ಇದರ ಉದ್ದೇಶ ಡೆಂಗ್ಯೂ ಕಾಯಿಲೆಯಿಂದ ಉಂಟಾಗುವ ಸಾವು ನೋವುಗಳ ನಿಯಂತ್ರಣ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವುದಾಗಿದೆ.

ಇದು ಒಂದು ಮಾರಕರೋಗ, ಈಡಿಸ್ ಜಾತಿಯ ಸೋಂಕಿತ ಸೊಳ್ಳೆಯಿಂದ ಕಚ್ಚುವುದರಿಂದ ಹರಡುತ್ತದೆ.

ನೀರಿನಲ್ಲಿ ಸೋಂಕಿತ ಈಡಿಸ್ ಜಾತಿಯ ಸೊಳ್ಳೆಗಳು ಮೊಟ್ಟೆಗಳನ್ನಿಟ್ಟು ಸಂತಾನಾಭಿವೃದ್ಧಿ ಮಾಡುತ್ತವೆ.

ಮನುಷ್ಯರಿಗೆ ಕಚ್ಚುವುದರಿಂದ ಈ ಕಾಯಿಲೆ ಹರಡುತ್ತದೆ. ಈ ರೋಗದ ಲಕ್ಷಣಗಳು ವಿಪರಿತ ಜ್ವರ, ತಲೆನೋವು, ವಾಂತಿ, ಕಣ್ಣಿನ ಹಿಂಭಾಗದಲ್ಲಿ ನೋವು, ಮೈಮೇಲೆ ಬಿಲ್ಲೆ ಹಾಕಾರದ ಕೆಂಪು ಗಂಧೆಗಳು, ಕಪ್ಪು ಮಲವಿಸರ್ಜನೆ, ವಸಡುಗಳಲ್ಲಿ ರಕ್ತಸ್ರಾವ ಇಂತಹ ಲಕ್ಷಣಗಳಿದ್ದರೆ ತಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿನೀಡಿ, ರಕ್ತ ಪರೀಕ್ಷೆ ಮಾಡಿಸಿ, ಚಿಕಿತ್ಸೆ ಪಡೆದುಕೊಳ್ಳಬೇಕು ಅಥವಾ ಆರೋಗ್ಯ ಸಿಬ್ಬಂದಿ ಭೇಟಿ ಮಾಡಿ ಎಂದರು.

ಯಾವುದೇ ಕಾರಣಕ್ಕೂ ಜ್ವರದ ಬಗ್ಗೆ ನಿರ್ಲಕ್ಷತನ ಮಾಡಬಾರದು. ಶಾಲಾ ವಿದ್ಯಾರ್ಥಿಗಳಾದ ತಾವು ತಮ್ಮ ಶಾಲೆಗಳಲ್ಲಿ, ಮನೆಗಳಲ್ಲಿ, ನೀರು ಶೇಖರಿಸುವ ಡ್ರಮ್, ಬ್ಯಾರಲ್, ಸಿಮೆಂಟ್ ತೊಟ್ಟೆ, ಕಲ್ಲಿನದೋಣಿ ಇನ್ನಿತರ ನೀರು ಸಂಗ್ರಹ ಪರಿಕರಗಳನ್ನು ವಾರದಲ್ಲಿ 2 ಬಾರಿ ಸ್ವಚ್ಚವಾಗಿ ತೊಳೆದು ಬಿಸಿಲಿನಲ್ಲಿ ಒಣಗಿಸಿ ಪುನಃ ನೀರು ತುಂಬಬೇಕು.

ನೀರಿನ ಸಲಕರಣೆಗಳಿಗೆ ಸೊಳ್ಳೆ ಹೋಗದಂತೆ ಭದ್ರವಾಗಿ ಮುಚ್ಚಳದಿಂದ ಮುಚ್ಚಬೇಕು.

ಸಾಯಂಕಾಲ ವೇಳೆ ಮನೆಯ ಮುಂದೆ ಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಸೊಳ್ಳೆ ಕಡಿತದಿಂದ ದೂರವಿರಲು ವೈಯಕ್ತಿಕ ರಕ್ಷಣೆ ಮಾಡಿಕೊಳ್ಳಬೇಕು. ಮನೆಯ ಸುತ್ತ-ಮುತ್ತಲೂ ನೀರು ನಿಲ್ಲದಂತೆ ಎಚ್ಚರಿಕೆವಹಿಸಬೇಕು.

ಲಾರ್ವಾ ನಾಶಕ್ಕಾಗಿ ಸ್ವಚ್ಚಗೊಳಿಸತ್ತಿರಬೇಕು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ತಮ್ಮ ಮನೆಗೆ ಭೇಟಿ ನೀಡಿದಾಗ ಸಹಕರಿಸಿ, ಕೈಜೋಡಿಸಬೇಕೆಂದು ತಿಳಿಸಿದರು.

ಡೆಂಗ್ಯೂ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ತಮ್ಮ ಮನೆಯ ಸುತ್ತ-ಮುತ್ತ ಘನ ತ್ಯಾಜ್ಯ ವಸ್ತುಗಳಾದ ಟೈರ್, ಒರಳುಕಲ್ಲು, ತೆಂಗಿನಚಿಪ್ಪು, ಒಡೆದ ಪ್ಲಾಸ್ಟಿಕ್ ಬಕೆಟ್ ಇತ್ಯಾದಿಗಳನ್ನು ಮನೆಯ ಮೇಲೆ ಮತ್ತು ಅಕ್ಕ-ಪಕ್ಕದಲ್ಲಿ ಬಿಸಾಡಬಾರದು. ಸ್ವಚ್ಚತೆ ಕಾಪಾಡಬೇಕು. ಶಾಲಾ ಆವರಣದಲ್ಲಿ ಸೊಳ್ಳೆಗಳಿಂದ ಮುಕ್ತಿಹೊಂದಲು “ಈಡಿಸ್ ಸೊಳ್ಳೆ ಉತ್ಪತ್ತಿ ರಹಿತ ಆವರಣ” ಹಾಗೂ “ಪ್ರತಿ ಶುಕ್ರವಾರ ಡೆಂಗಿ ನಿಯಂತ್ರಣ ಅಭಿಯಾನ”ದ ಅಂಗವಾಗಿ ಒಣಗಿದ ದಿನ ಆಚರಿಸಲಾಗುತ್ತದೆ ಎಂದು ಹೇಳಿದರು.

ಆರೋಗ್ಯ ನಿರೀಕ್ಷಣಾಧಿಕಾರಿ ಕಾಳಪ್ಪ ಕುಂಬಾರ ಅವರು, ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳು ಮತ್ತು ಅವುಗಳ ನಿಯಂತ್ರಣ ಮುಂಜಾಗ್ರತ ಕುರಿತು, ವಿವರವಾಗಿ ಮಾತನಾಡಿದರು ಮತ್ತು ಇತರೆ ಕ್ಷಯರೋಗ ನಿರ್ಮೂಲನೆ, ಕುಷ್ಠರೋಗ ನಿರ್ಮೂಲನೆ ಹಾಗೂ ಹದಿ-ಕರೆಯದವರ ಆರೋಗ್ಯ ರಕ್ಷಣೆ, ಹೆಚ್.ಪಿ.ವಿ ಲಸಿಕೆ, ರಾಷ್ಟ್ರೀಯ ಹಾವು ಕಡಿತ ಹಾಗೂ ನಾಯಿ ಕಡಿತ ನಿಯಂತ್ರಣ ಕಾರ್ಯಕ್ರಮ ಕುರಿತು ವಿವರವಾಗಿ ತಿಳಿಸಿದರು.

ಆರ್.ಕೆ.ಎಸ್.ಕೆ ಆಪ್ತ ಸಮಾಲೋಚಕರಾದ ಕಳಕಪ್ಪ ಅವರು ಬಾಲ್ಯವಿವಾಹ ಹಾಗೂ ಹದಿ-ಹರೆಯದವರ ಆರೋಗ್ಯ ಸಮಸ್ಯೆಗಳು ಹಾಗೂ ಪರಿಹಾರ ಕುರಿತು ವಿವರವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೋಚಿಂಗ್ ಸೆಂಟರ್ ಮುಖ್ಯಸ್ಥರಾದ ಅನ್ವರ್ಪಾಷಾ, ರಾಮನಗೌಡ, ಸಹ-ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande