
ಬೆಂಗಳೂರು, 22 ಮೇ (ಹಿ.ಸ.) :
ಆ್ಯಂಕರ್ : ಕಲಬುರ್ಗಿ ಜಿಲ್ಲೆಯಲ್ಲಿ ಪಿಎಂ ಮಿತ್ರ ಟೆಕ್ಸ್ ಟೈಲ್ ಪಾರ್ಕ್ ನಿರ್ಮಾಣ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಇಂದು ಸಚಿವರಾದ ಎಂ.ಬಿ. ಪಾಟೀಲ ಹಾಗೂ ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ಅಧಿಕಾರಿಗಳ ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ರಾಜ್ಯದ ಜವಳಿ ಕ್ಷೇತ್ರಕ್ಕೆ ಹೊಸ ಆಯಾಮ ನೀಡಲಿರುವ ಈ ಮಹತ್ವಾಕಾಂಕ್ಷಿ ಯೋಜನೆಯ ಮೊದಲ ಹಂತವನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮೂಲಕ ಜಾರಿಗೊಳಿಸಲು ತೀರ್ಮಾನ ಕೈಗೊಳ್ಳಲಾಯಿತು. ಯೋಜನೆಗೆ ಅಗತ್ಯವಾದ ಆಡಳಿತಾತ್ಮಕ ಅನುಮೋದನೆ ಪಡೆಯುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲು ಸಹ ನಿರ್ಧರಿಸಲಾಯಿತು.
ಸಭೆಯ ಬಳಿಕ ಮಾತನಾಡಿದ ಎಂ.ಬಿ. ಪಾಟೀಲ, ಪಿಎಂ ಮಿತ್ರ ಟೆಕ್ಸ್ ಟೈಲ್ ಪಾರ್ಕ್ ಯೋಜನೆ ಕಲಬುರ್ಗಿ ಹಾಗೂ ಹೈದರಾಬಾದ್-ಕರ್ನಾಟಕ ಭಾಗದ ಕೈಗಾರಿಕಾ ಅಭಿವೃದ್ಧಿಗೆ ಹೊಸ ದಿಕ್ಕು ತೋರಲಿದೆ ಎಂದು ಹೇಳಿದರು. ಈ ಯೋಜನೆಯಿಂದ ಭಾರಿ ಪ್ರಮಾಣದ ಹೂಡಿಕೆ ಆಕರ್ಷಣೆಯಾಗುವ ಜೊತೆಗೆ ಸಾವಿರಾರು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜವಳಿ ಕ್ಷೇತ್ರದಲ್ಲಿ ಸಮಗ್ರ ಕೈಗಾರಿಕಾ ಪರಿಸರ ನಿರ್ಮಾಣವಾಗುವುದರಿಂದ ಸ್ಥಳೀಯ ಯುವಕರಿಗೆ ಉದ್ಯೋಗದ ಅವಕಾಶಗಳು ಹೆಚ್ಚಲಿದ್ದು, ಪೂರಕ ಕೈಗಾರಿಕೆಗಳ ಬೆಳವಣಿಗೆಯೂ ಸಾಧ್ಯವಾಗಲಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.