

ಕೊಪ್ಪಳ, 23 ಮೇ (ಹಿ.ಸ.) :
ಆ್ಯಂಕರ್ : ಮೇ 3 ರಂದು ದೇಶಾದ್ಯಂತ ನಡೆದ ನೀಟ್ ಪರೀಕ್ಷೆಯ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ (ಲೀಕ್) ಕುರಿತು ತನಿಖೆ ನಡೆಸಿ, ಕೇಂದ್ರ ಶಿಕ್ಷಣ ಸಚಿವರು ಹಾಗೂ ಕೇಂದ್ರ ಗೃಹ ಸಚಿವರ ರಾಜೀನಾಮೆ ಪಡೆಯುವಂತೆ ಒತ್ತಾಯಿಸಿ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ ನೇತೃತ್ವದಲ್ಲಿ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಷ್ಟ್ರಪತಿಗಳಿಗೆ ಹಲವು ಒತ್ತಾಯಗಳನ್ನು ಮಾಡಿದ್ದು, ನೀಟ್ ಪರೀಕ್ಷೆಯನ್ನು ರಾಜ್ಯಗಳಿಗೆ ಮರಳಿ ನೀಡುವಂತೆ ಒತ್ತಾಯಿಸಿದ್ದಾರೆ.
ವಂಚನೆಗೆ ಒಳಗಾದ ಲಕ್ಷಾಂತರ ಅರ್ಹ ವಿದ್ಯಾರ್ಥಿಗಳಿಗೆ ಸೂಕ್ತ ನ್ಯಾಯ ಸಿಗುವಂತಾಗಬೇಕು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ದೇಶದ ಭವಿಷ್ಯವಾಗಿರುವ ಯುವ ಪೀಳಿಗೆಗೆ ಮತ್ತು ಭವಿಷ್ಯದ ವೈದ್ಯರಿಗೆ ನ್ಯಾಯ ಒದಗಿಸಲು, ತಾವುಗಳು ಈ ವಿಷಯದಲ್ಲಿ ತಕ್ಷಣವೇ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವಿಶಾಲಾಕ್ಷಿ ತಾವರಗೇರಿ, ಮುಖಂಡರಾದ ಸುಮಂಗಲಾ ನಾಯಕ, ಚನ್ನಮ್ಮ ಮುಳಗುಂದ ಇತರರು ಇದ್ದರು, ತಹಶೀಲ್ದಾರರು, ಕೊಪ್ಪಳ ಇವರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಅರ್ಪಿಸಲಾಯಿತು, ತಹಶೀಲ್ದಾರ ಪರವಾಗಿ ಗ್ರೇಡ್ 2 ತಹಶೀಲ್ದಾರ ಗವಿಸಿದ್ದಪ್ಪ ಮನ್ನೂರ ಮನವಿ ಸ್ವೀಕರಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್