


ಬಳ್ಳಾರಿ, 28 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಂಗ್ರಹಿಸಿ, ಸಾಗಾಣಿಕೆ ಮಾಡುತ್ತಿದ್ದ ಜಾಲದ ವಿರುದ್ಧ ತೀವ್ರ ನಿಗಾ ವಹಿಸಿದ್ದು, ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ಕಿ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಕೆ.ಆರ್ ದೇವರಾಜ್ ಅವರು ತಿಳಿಸಿದ್ದಾರೆ.
ಮೇ 27 ರಂದು ಜಿಲ್ಲೆಯ ಮೂರು ಪ್ರತ್ಯೇಕ ಕಡೆಗಳಲ್ಲಿ ಅಗತ್ಯ ವಸ್ತುಗಳ ಕಾಯ್ದೆಯಡಿ (ಇ.ಸಿ ಕಾಯ್ದೆ) ಪ್ರಕರಣಗಳನ್ನು ದಾಖಲಿಸಲಾಗಿದೆ. ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ನಂದಿ ಲೇಔಟ್ನಲ್ಲಿ ಕಾರ್ಡುದಾರರಿಂದ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಲಾರಿಗೆ ತುಂಬಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಕೆ.ಎ-36/ಸಿ-5899 ಸಂಖ್ಯೆಯ ಲಾರಿ ಹಾಗೂ ಅದರಲ್ಲಿದ್ದ 226 ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಕುರುಗೋಡು ನಿವಾಸಿಗಳಾದ ಯರಿಸ್ವಾಮಿ, ಉಮಾಶಂಕರ್, ಮಾನ್ವಿ ತಾಲೂಕಿನ ವೀರಭದ್ರಪ್ಪ, ಚಾಲಕ ವಿನೋದ್ ಹಾಗೂ ಲಾರಿ ಮಾಲೀಕ ಪಂಪನಗೌಡ ಎಂಬುವವರ ವಿರುದ್ಧ ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಿರುಗುಪ್ಪ ತಾಲ್ಲೂಕಿನ ಬಂಡ್ರಾಳ್ ಗ್ರಾಮದಲ್ಲಿ ಮಾರುತಿ ಓಮಿನಿ ವಾಹನ (ಸಂಖ್ಯೆ: ಕೆ.ಎ-34/ಎನ್-7709) ಮೂಲಕ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಜಾಲವನ್ನು ಪತ್ತೆಹಚ್ಚಲಾಗಿದ್ದು, ವಾಹನ ಸೇರಿದಂತೆ 150 ಕ್ವಿಂಟಾಲ್ ಅಕ್ಕಿಯನ್ನು ಸಿರುಗುಪ್ಪ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಳ್ಳಾರಿ ತಾಲ್ಲೂಕಿನ ಚೆಳಗುರ್ಕಿ ಗ್ರಾಮದಲ್ಲಿ ಕಾರ್ಡುದಾರರಿಂದ ಅಕ್ರಮವಾಗಿ ಸಂಗ್ರಹಿಸಿ ಸಾಗಿಸುತ್ತಿದ್ದ 30 ಕ್ವಿಂಟಾಲ್ ಅಕ್ಕಿ ಮತ್ತು ಸಾಗಾಣಿಕೆಗೆ ಬಳಸಿದ್ದ ವಾಹನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಪಿ.ಡಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಮೂರೂ ಕಾರ್ಯಾಚರಣೆಗಳಲ್ಲಿ ಒಟ್ಟು 406 ಕ್ವಿಂಟಾಲ್ ಪಡಿತರ ಅಕ್ಕಿ ಹಾಗೂ ಸಾಗಾಣಿಕೆಗೆ ಬಳಸಲಾಗಿದ್ದ 3 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ಇವುಗಳ ಅಂದಾಜು ಒಟ್ಟು ಮೌಲ್ಯ ರೂ.14,33,800 ಆಗುದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಅಕ್ರಮ ದಂಧೆಕೋರರ ವಿರುದ್ಧ ಇಲಾಖೆಯು ಕಠಿಣ ಕ್ರಮ ಮುಂದುವರಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್