
ಕೊಪ್ಪಳ, 31 ಮೇ (ಹಿ.ಸ.) :
ಆ್ಯಂಕರ್ : ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುವ ಬುದ್ಧಿಮಾಂದ್ಯ ಹಾಗೂ ಬಹುವಿಧ ಅಂಗವೈಕಲ್ಯ ಹೊಂದಿರುವ ವಿಕಲಚೇತನ ಮಕ್ಕಳ ಆರೈಕೆದಾರರಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿ ಆದೇಶದಂತೆ, ಕೊಪ್ಪಳ ನಗರಸಭೆಯ 2026-27ನೇ ಸಾಲಿನ ಶೇ.5ರ ಯೋಜನೆಯ ಎಸ್.ಎಫ್.ಸಿ ಮುಕ್ತನಿಧಿ ಅನುದಾನದಡಿ ಶೇ. 50ರ ವೈಯಕ್ತಿಕ ಕಾರ್ಯಕ್ರಮದಡಿ ಈ ಸಹಾಯಧನ ವಿತರಿಸಲಾಗುತ್ತಿದೆ. ಅರ್ಹ ಫಲಾನುಭವಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವವರು ಜೂನ್ 15 ರೊಳಗಾಗಿ ಕೊಪ್ಪಳ ನಗರಸಭೆ ಕಾರ್ಯಾಲಯಕ್ಕೆ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳಲ್ಲಿ ವಿಕಲಚೇತನರು ಕೊಪ್ಪಳ ನಗರದ ನಿವಾಸಿಯಾಗಿರುವ ಕುರಿತು ದಾಖಲೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬುದ್ಧಿಮಾಂದ್ಯ ಹಾಗೂ ಬಹುವಿಧ ಅಂಗವೈಕಲ್ಯದ ಪ್ರಮಾಣ ಪತ್ರ, ಇತ್ತೀಚಿನ ಎರಡು ಪಾಸ್ಪೆÇೀರ್ಟ್ ಅಳತೆಯ ಭಾವಚಿತ್ರಗಳು, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಪ್ರತಿ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿಗಳನ್ನು ಸಲ್ಲಿಸಬೇಕು. ನಿಗದಿತ ಅವಧಿಯ ನಂತರ ಸಲ್ಲಿಕೆಯಾಗುವ ಹಾಗೂ ಅಪೂರ್ಣ ದಾಖಲೆಗಳನ್ನು ಹೊಂದಿರುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಕೊಪ್ಪಳ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್