
ಬೆಂಗಳೂರು, 06 ಮೇ (ಹಿ.ಸ.) :
ಆ್ಯಂಕರ್ : ಶಿವಾಜಿನಗರದಲ್ಲಿರುವ ಬೋರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿದ ದುರಂತದ ಬಳಿಕವೂ ಸರ್ಕಾರದ ನಿರ್ಲಕ್ಷ್ಯ ಮುಂದುವರಿದಿದೆ ಎಂದು ಬಿಜೆಪಿ ನಾಯಕ ಅಶೋಕ್ ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ಅವರು, ಘಟನೆಗೆ ವಾರ ಕಳೆದರೂ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಸಿದ ಗೋಡೆಯ ಪಕ್ಕದಲ್ಲೇ ಇನ್ನೂ ಶಿಥಿಲಗೊಂಡ ಭಾಗ ಉಳಿದಿದ್ದು, ಅದು ಯಾವ ಕ್ಷಣದಲ್ಲಾದರೂ ಕುಸಿಯುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.
ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿರುವುದನ್ನು ಉಲ್ಲೇಖಿಸಿದ ಅವರು, ಇದರ ನಡುವೆಯೂ ಅಧಿಕಾರಿಗಳು ಕನಿಷ್ಠ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಟೀಕಿಸಿದ್ದಾರೆ.
ಸ್ಥಳದಲ್ಲಿ ಮರಳು ತುಂಬಿದ ಗೋಣಿಚೀಲಗಳನ್ನು ಇಟ್ಟು ತಾತ್ಕಾಲಿಕವಾಗಿ ಗೋಡೆಯನ್ನು ತಡೆಗಟ್ಟಲು ಪ್ರಯತ್ನಿಸಿರುವುದನ್ನು ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಇದು ಶಾಶ್ವತ ಪರಿಹಾರವಲ್ಲ, ಸರ್ಕಾರದ ನಿಷ್ಕ್ರಿಯತೆಯ ಉದಾಹರಣೆ ಎಂದು ಹೇಳಿದ್ದಾರೆ.
ಘಟನೆಯ ಪರಿಣಾಮವಾಗಿ ಸುಮಾರು 200ಕ್ಕೂ ಹೆಚ್ಚು ಸಣ್ಣ ವ್ಯಾಪಾರಿಗಳನ್ನು ತೆರವುಗೊಳಿಸಿರುವುದರಿಂದ ಅವರ ಬದುಕು ಸಂಕಷ್ಟಕ್ಕೀಡಾಗಿದೆ. ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೇ ಅವರನ್ನು ಸ್ಥಳಾಂತರಿಸಿರುವುದು ಅನ್ಯಾಯ ಎಂದು ಅಶೋಕ್ ಹೇಳಿದ್ದು, ಕೂಡಲೇ ಅಪಾಯಕಾರಿ ಗೋಡೆಯನ್ನು ಸಂಪೂರ್ಣವಾಗಿ ತೆರವುಗೊಳಿಸಿ, ಹೊಸ ಕಾಂಪೌಂಡ್ ಗೋಡೆಯನ್ನು ನಿರ್ಮಿಸಬೇಕು ಮತ್ತು ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಒದಗಿಸಬೇಕು ಎಂದು ಅಶೋಕ ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa