
ವಿಜಯಪುರ, 07 ಮೇ (ಹಿ.ಸ.) :
ಆಂಕರ್ : ಮನೆಗಳ ಉತಾರ (ಹಕ್ಕುಪತ್ರ/ದಾಖಲೆ) ನೀಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ ಮೂರು ತಿಂಗಳ ಗಡುವು ಮುಗಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ನಿವಾಸಿಗಳು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ
ತಹಶೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.
ಸಂಬಂಧಪಟ್ಟ ನಿವಾಸಿಗಳು ಹಲವು ವರ್ಷಗಳಿಂದ ಮನೆಗಳ ದಾಖಲೆಗಾಗಿ ಸರ್ಕಾರಿ ಕಚೇರಿಗಳ ಸುತ್ತ ಅಲೆದಾಡುತ್ತಿದ್ದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಲ್ಲ ಎಂದು ಆರೋಪಿಸಿದ್ದಾರೆ.
ಅಧಿಕಾರಿಗಳು ಮೂರು ತಿಂಗಳೊಳಗೆ ಉತಾರ ನೀಡಲಾಗುವುದು ಎಂದು ಭರವಸೆ ನೀಡಿದ್ದರೂ ಗಡುವು ಮುಗಿದ ನಂತರವೂ ಕಡತಗಳು ಮುಂದಕ್ಕೆ ಸಾಗದೆ ಇರುವುದರಿಂದ ಜನರು ಬೇಸತ್ತಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಧರಣಿಯಲ್ಲಿ ಭಾಗವಹಿಸಿದ ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಯುವಕರು ಆಡಳಿತದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ತಮ್ಮ ಮನೆಗಳಿಗೆ ಸಂಬಂಧಿಸಿದ ದಾಖಲೆಗಳಿಲ್ಲದೆ ಬ್ಯಾಂಕ್ ಸಾಲ, ವಿದ್ಯುತ್ ಸಂಪರ್ಕ, ಸರ್ಕಾರಿ ಸೌಲಭ್ಯಗಳು ಸೇರಿದಂತೆ ಹಲವು ಮೂಲಭೂತ ಅಗತ್ಯಗಳನ್ನು ಪಡೆಯಲು ಸಮಸ್ಯೆಯಾಗುತ್ತಿದೆ ಎಂದು ಅವರು ದೂರಿದರು.
ಪ್ರತಿಭಟನಾಕಾರರು ತಹಶೀಲ್ದಾರ್ ಕಚೇರಿ ಎದುರು ಘೋಷಣೆ ಕೂಗಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. “ಉತಾರೆ ಕೊಡಿ, ಜನರ ಸಮಸ್ಯೆ ಬಗೆಹರಿಸಿ” ಎಂದು ಆಗ್ರಹಿಸಿದ ನಿವಾಸಿಗಳು, ತಕ್ಷಣ ದಾಖಲೆ ನೀಡದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದರು.
ಸ್ಥಳಕ್ಕೆ ಬಂದ ಅಧಿಕಾರಿಗಳು ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನ ನಡೆಸಿದ್ದು, ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಆದರೆ ಸ್ಪಷ್ಟ ಆದೇಶ ಮತ್ತು ಕಾಲಮಿತಿ ಘೋಷಣೆ ಆಗುವವರೆಗೂ ಧರಣಿ ಹಿಂಪಡೆಯುವುದಿಲ್ಲ ಎಂದು ನಿವಾಸಿಗಳು ತಿಳಿಸಿದ್ದಾರೆ.
ಈ ಘಟನೆ ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಎಬ್ಬಿಸಿದ್ದು, ಸಾರ್ವಜನಿಕ ಸೇವೆಗಳ ವಿಳಂಬದಿಂದ ಸಾಮಾನ್ಯ ಜನರು ಎದುರಿಸುತ್ತಿರುವ ಸಂಕಷ್ಟವನ್ನು ಮತ್ತೆ ಬೆಳಕಿಗೆ ತಂದಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande