



ಗಂಗಾವತಿ, 08 ಮೇ (ಹಿ.ಸ.) :
ಆ್ಯಂಕರ್ : ಹನುಮಂತನ ಜನ್ಮಸ್ಥಳವಾದ ಕಿಷ್ಕಿಂಧಾ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿಗೆ ಇಂದು ಮುಂಜಾನೆ ಶುಭ ಮುಹೂರ್ತದಲ್ಲಿ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಎ.ಎಂ.ಆರ್ (AMR) ಗ್ರೂಪ್ನ ಅಧ್ಯಕ್ಷರಾದ ಶ್ರೀ ಡಾ. ಎ. ಮಹೇಶ್ ರೆಡ್ಡಿ ಅವರ ಕುಟುಂಬದವರು ಭಕ್ತಿಭಾವದಿಂದ ವಿಶೇಷ ಸೇವೆ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ, ಸುಮಾರು ₹2.5 ಕೋಟಿ ಮೌಲ್ಯದ ಭವ್ಯ ಬಂಗಾರದ ಆಭರಣಗಳನ್ನು ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಹಾಗೂ ಅವರ ಧರ್ಮಪತ್ನಿ ಲಕ್ಷ್ಮಿ ಅರುಣಾ ಅವರ ಉಪಸ್ಥಿತಿಯಲ್ಲಿ ದೇವಸ್ಥಾನಕ್ಕೆ ಸಮರ್ಪಿಸಿದರು.
ಅತ್ಯಂತ ಕಲಾತ್ಮಕವಾಗಿ ವಿನ್ಯಾಸಗೊಳಿಸಲಾದ ಬಂಗಾರದ ಪ್ರಭಾವಳಿ, ಛತ್ರಿ, ಕಿರೀಟ ಹಾಗೂ ಗದೆಯನ್ನು ಶ್ರೀ ಆಂಜನೇಯ ಸ್ವಾಮಿಗೆ ಅರ್ಪಿಸುವ ಮೂಲಕ ತಮ್ಮ ಅಪಾರ ಭಕ್ತಿ ಮತ್ತು ಶ್ರದ್ಧೆಯನ್ನು ವ್ಯಕ್ತಪಡಿಸಿದರು. ಈ ವೇಳೆ ದೇವಾಲಯದ ಅರ್ಚಕರು ವೇದಮಂತ್ರಗಳೊಂದಿಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ, ಸಮರ್ಪಿತ ಆಭರಣಗಳಿಗೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗಂಗಾವತಿ ತಹಸಿಲ್ದಾರರಾದ ಶ್ರೀಮತಿ ವಸಂತ ಕುಮಾರಿ, ಕನಕಗಿರಿ ತಹಸಿಲ್ದಾರರಾದ ವಿಶ್ವನಾಥ್, ಗ್ರೇಡ್ 2 ತಹಶೀಲ್ದಾರರಾದ ಮಹಾಂತಗೌಡ ಪಾಟೀಲ್, ಮಾಜಿ ಸಂಸದರಾದ ಶಿವರಾಮೇಗೌಡ, ಮಾಜಿ ಜಿಲ್ಲಾಧ್ಯಕ್ಷರಾದ ವಿರುಪಾಕ್ಷಪ್ಪ ಸಿಂಗನಾಳ್, ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಚಂದ್ರು ಹಿರೂರು, ಮಾಜಿ ಕಾಡಾ ಅಧ್ಯಕ್ಷರಾದ ತಿಪ್ಪೇರುದ್ರಸ್ವಾಮಿ, ಮುಖಂಡರಾದ ಮನೋಹರ ಗೌಡ ಹೇರೂರು, ಯಮನೂರು ಚೌಡ್ಕಿ, ವೀರೇಶ್ ಬಲಕುಂದಿ, ಮಲ್ಲಿಕಾರ್ಜುನ ಸ್ವಾಮಿ, ಬಾಬು ರೆಡ್ಡಿ, ಗಂಗಾಧರ ಸ್ವಾಮಿ, ಸಂಗಮೇಶ್ ಬಾದವಾಡಿಗಿ, ವೆಂಕಟೇಶ್ ಜಬ್ಬಲಗುಡ್ಡ, ರಮೇಶ್ ಹೊಸಮಲಿ, ಮಂಜುನಾಥ ಗೊಂದಿ, ಮಂಜುನಾಥ ಕಲಾಲ್, ಅರ್ಜುನ್ ರಾಯ್ಕರ್, ವೀರೇಶ್ ಅಂಜನಾದ್ರಿ ಹಾಗೂ ತಾಲೂಕು ಆಡಳಿತ ಸಿಬ್ಬಂದಿ ವರ್ಗದವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್