


ಹೊಸಪೇಟೆ, 08 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಾರ್ವಜನಿಕರಿಗೆ ನಿರಂತರ ನೀರು ಪೂರೈಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೊಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ ತಿಳಿಸಿದರು.
ಹರಪನಹಳ್ಳಿ ತಾಲೂಕಿನ ವಿವಿಧ ಬಾಧಿತ ಗ್ರಾಮಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅಧಿಕಾರಿಗಳೊಂದಿಗೆ ಅವರು ಮಾತನಾಡಿದರು.
ಜಿಲ್ಲೆಯ 740 ಗ್ರಾಮಗಳ ಪೈಕಿ 153 ಗ್ರಾಮಗಳಲ್ಲಿ ನೀರಿನ ಅಭಾವ ಉಂಟಾಗಬಹುದೆಂದು ಗುರುತಿಸಲಾಗಿದೆ. ಅದರಂತೆ ಈಗಾಗಲೇ ಜಿಲ್ಲೆಯ ಹರಪನಹಳ್ಳಿ ತಾಲೂಕಿನ 24 ಗ್ರಾಮ, ಹಗರಿಬೊಮ್ಮನಹಳ್ಳಿಯ 5 ಮತ್ತು ಹಡಗಲಿ ತಾಲೂಕಿನ 3 ಗ್ರಾಮಗಳು ಸೇರಿದಂತೆ ಒಟ್ಟು 32 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉದ್ಭವಿಸಿದೆ. ಈ ನೀರಿನ ಸಮಸ್ಯೆ ಉಂಟಾದ ಗ್ರಾಮಗಳಿಗೆ 41 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಸರಬರಾಜು ಮಾಡುತ್ತಿದೆ. ಅಲ್ಲದೆ, ಅಗತ್ಯವಿದ್ದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ 4 ನೀರಿನ ಟ್ಯಾಂಕರ್ಗಳನ್ನು ಬಳಸಿಕೊಳ್ಳಲು ತಿಳಿಸಿದ ಅವರು,
ಪ್ರತಿಯೊಂದು ಗ್ರಾಮದಲ್ಲಿರುವ ನೀರಿನ ಮೂಲಗಳನ್ನು ಸ್ವಚ್ಛಗೊಳಿಸಬೇಕು. ನೀರು ಕುಡಿಯಲು ಯೋಗ್ಯವಾಗಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಂಡೇ ನಂತರ ನೀರು ಸರಬರಾಜು ಮಾಡಬೇಕು. ರಸ್ತೆ ಮತ್ತು ಚರಂಡಿ ಪಕ್ಕದಲ್ಲಿರುವ ಪೈಪ್ಲೈನ್ಗಳಲ್ಲಿ ನೀರು ಪೋಲಾಗದಂತೆ ಎಚ್ಚರವಹಿಸಬೇಕು. ಒಂದು ವೇಳೆ ಪೈಪ್ ಹೊಡೆದು ನೀರು ಕಲುಷಿತಗೊಂಡರೆ ಅದಕ್ಕೆ ಪಿಡಿಒ ಹಾಗೂ ಇಂಜಿನಿಯರ್ಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಶುದ್ಧ ನೀರಿನ ಘಟಕಗಳ ದುರಸ್ತಿಗೊಳಿಸಿ:
ಜಿಲ್ಲೆಯ 666 ಶುದ್ಧ ಕುಡಿಯುವ ನೀರಿನ ಘಟಕಗಳು ಸದಾ ಸುಸ್ಥಿತಿಯಲ್ಲಿರಬೇಕು. ತಾಂತ್ರಿಕ ದೋಷ ಕಂಡುಬAದ ತಕ್ಷಣವೇ ದುರಸ್ತಿ ಕೈಗೊಳ್ಳಬೇಕು. ನೀರಿನ ಸಮಸ್ಯೆಗಳ ಕುರಿತು ದೂರು ನೀಡಲು ಮತ್ತು ತಕ್ಷಣದ ಪರಿಹಾರಕ್ಕಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ 24x7 ಕಂಟ್ರೋಲ್ ರೂಮ್ ಸಹಾಯವಾಣಿ ತೆರೆಯಲಾಗಿದೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಹಾಯವಾಣಿ ಸಂಖ್ಯೆ 9480837823 ಗೆ ಕರೆ ಮಾಡಿ ದೂರು ನೀಡಬಹುದು ಎಂದು ತಿಳಿಸಿದರು.
ಈ ವೇಳೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಕಾಧಿಕಾರಿಗಳು, ಗ್ರಾಮ ಪಂಚಾಯತ್ ಪಿಡಿಒಗಳು ಇದ್ದರು
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್