
ವಿಜಯಪುರ, 09 ಮೇ (ಹಿ.ಸ.) :
ಆಂಕರ್ : ಯೋಜನೆಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮಾತ್ರ ಗುರಿ ಸಾಧನೆ ಸಾಧ್ಯವಾಗುತ್ತದೆ. ಬದ್ಧತೆಯಿಂದ ಹಾಗೂ ಸಮಯಪಾಲನೆಯೊಂದಿಗೆ ಕೆಲಸ ಮಾಡಿದರೆ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ ಎಂದು ವಿಜಯಪುರ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಪ್ರಕಾಶ್ ವಡ್ಡರ್ ಹೇಳಿದರು.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಮುದ್ದೇಬಿಹಾಳ ಹಾಗೂ ತಾಳಿಕೋಟಿ ಜಂಟಿ ತಾಲೂಕುಗಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಸಭೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ), ಗ್ರಾಮ ಪಂಚಾಯತಿ ತೆರಿಗೆ ವಸೂಲಾತಿ, ಗ್ರಂಥಾಲಯ ನಿರ್ವಹಣೆ, ವಸತಿ ಯೋಜನೆ, ಎಸ್ಬಿಎಂ ಅನುದಾನ ಪಾವತಿ, ಇ-ಹಾಜರಾತಿ, ಮಹಿಳಾ ಗ್ರಾಮ ಸಭೆ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಯೋಜನೆಗಳ ಪ್ರಗತಿ ಕುರಿತು ಸಮಗ್ರ ಪರಿಶೀಲನೆ ನಡೆಸಲಾಯಿತು.
ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಚೇರಿಗಳಿಗೆ ಹಾಜರಾಗಬೇಕು ಹಾಗೂ ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಕಾಶ ವಡ್ಡರ ಸಲಹೆ ನೀಡಿದರು. ಮುದ್ದೇಬಿಹಾಳ ಮತ್ತು ತಾಳಿಕೋಟಿ ತಾಲೂಕುಗಳಿಗೆ ನಿಗದಿಪಡಿಸಿರುವ ಮಾನವ ದಿನಗಳನ್ನು ಮೇ ತಿಂಗಳ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ನರೇಗಾ ಯೋಜನೆಯಡಿ ಪ್ರಸ್ತುತ ಹಾಗೂ ಬಾಕಿ ಉಳಿದ ಕೂಲಿಕಾರರ ವೇತನವನ್ನು ಸಕಾಲದಲ್ಲಿ ಪಾವತಿಸಬೇಕು. ಎಲ್ಲಾ ಕೂಲಿಕಾರರ ಇ-ಕೆವೈಸಿ ಪ್ರಕ್ರಿಯೆಯನ್ನು ಶೇ.100 ರಷ್ಟು ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಇದಲ್ಲದೆ ನರೇಗಾ ಯೋಜನೆಯಡಿ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು. ನಮೂನೆ-6 ರಡಿ ಬೇಡಿಕೆ ಸಲ್ಲಿಸಿದ ಪ್ರತಿಯೊಬ್ಬ ಕೂಲಿಕಾರನಿಗೂ ಉದ್ಯೋಗ ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿವಿಧ ಯೋಜನೆಗಳಲ್ಲಿ ನಿರೀಕ್ಷಿತ ಮಟ್ಟದ ಪ್ರಗತಿ ಸಾಧಿಸದಿರುವುದನ್ನು ಉಲ್ಲೇಖಿಸಿದ ಅವರು, ತಕ್ಷಣವೇ ಕಾರ್ಯಚಟುವಟಿಕೆಗಳಿಗೆ ವೇಗ ನೀಡಿ ಗುರಿ ಸಾಧನೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ಮುದ್ದೇಬಿಹಾಳ ತಾಪಂ ಇಒ ಸಂಗನಗೌಡ, ತಾಳಿಕೋಟಿ ತಾಪಂ ಇಒ ಅನುಸೂಯ ಚಲವಾದಿ ಉಪಸ್ಥಿತರಿದ್ದರು.
ಇದೇ ವೇಳೆ ಸಹಾಯಕ ನಿರ್ದೇಶಕರು (ಗ್ರಾ.ಪಂ.) ಎಸ್.ಎಸ್. ಗಣಾಚಾರ್ಯ, ಪಿ.ಎಸ್. ಕಸನಕ್ಕಿ, ಸಹಾಯಕ ನಿರ್ದೇಶಕ (ಪಂ.ರಾ.) ಮಲ್ಲಿಕಾರ್ಜುನ ಕೋರಿ, ಸಹಾಯಕ ಲೆಕ್ಕಾಧಿಕಾರಿ ವೀರೇಶ ಹೂಗಾರ ಸೇರಿದಂತೆ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕಿನ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಹಾಯಕರು, ಬೇರ್ ಫೂಟ್ ಟೆಕ್ನಿಶಿಯನ್ಗಳು, ಗ್ರಾಮ ಕಾಯಕ ಮಿತ್ರರು ಹಾಗೂ ನರೇಗಾ ಸಿಬ್ಬಂದಿ ಸಭೆಯಲ್ಲಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande