
ಕೊಪ್ಪಳ, 01 ಜೂನ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ನಗರಸಭೆ ವತಿಯಿಂದ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯವನ್ನು ಒದಗಿಸುವ ಕುರಿತಂತೆ ಜೂನ್ ಮಾಹೆಯಲ್ಲಿ ಲೋಕ ಕಲ್ಯಾಣ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ (ಪಿಎಂ ಸ್ವನಿಧಿ) ಯೋಜನೆ ಅಡಿಯಲ್ಲಿ ನಗರದ ಬೀದಿ ಬದಿ ವ್ಯಾಪಾರಿಗಳಿಗೆ ಕಿರುಸಾಲ ಸೌಲಭ್ಯ ಹಾಗೂ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ನಗರ ಮಟ್ಟದಲ್ಲಿ ಲೋಕ ಕಲ್ಯಾಣ ಮೇಳಗಳನ್ನು ಆಯೋಜಿಸಲಾಗುತ್ತಿದೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ, ಭಾರತ ಸರ್ಕಾರ ಹಾಗೂ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ನಿರ್ದೇಶನದಂತೆ ಜೂನ್ 1 ರಿಂದ ಜೂನ್ 30ರ ವರೆಗೆ ಒಂದು ತಿಂಗಳ ಕಾಲ ಕೊಪ್ಪಳ ನಗರಸಭೆ ವತಿಯಿಂದ ಬ್ಯಾಂಕ್ಗಳ ಸಹಯೋಗದಲ್ಲಿ ಈ ಮೇಳಗಳನ್ನು ನಡೆಸಲಾಗುತ್ತಿದೆ.
ಈ ಮೇಳಗಳ ಮೂಲಕ ಅರ್ಹ ಬೀದಿ ಬದಿ ವ್ಯಾಪಾರಿಗಳಿಗೆ ಪಿಎಂ ಸ್ವನಿಧಿ ಯೋಜನೆಯಡಿ ಕಿರುಸಾಲ ಸೌಲಭ್ಯ, ವಿಮಾ ಯೋಜನೆಗಳು, ಪಿಂಚಣಿ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಮಾಹಿತಿ ಹಾಗೂ ನೋಂದಣಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಯೋಜನೆಯ ಪ್ರಯೋಜನ ಪಡೆಯಲು ಕೊಪ್ಪಳ ನಗರಸಭೆ ವ್ಯಾಪ್ತಿಯ ಅರ್ಹ ಬೀದಿ ಬದಿ ವ್ಯಾಪಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಲೋಕ ಕಲ್ಯಾಣ ಮೇಳದಲ್ಲಿ ಭಾಗವಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರಸಭೆಯ ಡೇ-ನಲ್ಮ್ ವಿಭಾಗದ ಸಿಬ್ಬಂದಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್