
ಕೊಲಾರ, ೧ ಜೂನ್ (ಹಿ.ಸ.)
ಆಂಕರ್ : ಜಿಲ್ಲೆಯಲ್ಲಿ ಬಾಲಕಾರ್ಮಿಕ ಹಾಗೂ ಜೀತಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಂಬಂಧಿಸಿದಂತೆ ಕಾರ್ಮಿಕ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಮಂದಗತಿಯ ಕಾರ್ಯವೈಖರಿ ಕುರಿತು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ಹಾಗೂ ಗುರಿಗಳನ್ನು ನಿಗದಿಪಡಿಸಿದರು. ಕಳೆದ ಸಾಲಿನಲ್ಲಿ ೧೪ ಬಾಲಕಾರ್ಮಿಕರನ್ನು ಮಾತ್ರ ಪತ್ತೆಹಚ್ಚಿ ರಕ್ಷಿಸಲಾಗಿದ್ದು, ಈ ಸಂಖ್ಯೆ ಅತ್ಯಂತ ಕಳಪೆಯಾಗಿದೆ ಎಂದು ಜಿಲ್ಲಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕೇವಲ ೩೭ ಪ್ರಕರಣಗಳಲ್ಲಿ ಮಾತ್ರ ತಪಾಸಣೆ ನಡೆಸಿರುವುದು ಇಲಾಖೆಯ ನಿರ್ಲಕ್ಷ್ಯವನ್ನು ಎತ್ತಿತೋರಿಸುತ್ತದೆ, ಅಧಿಕಾರಿಗಳು ಈ ವಿಚಾರದಲ್ಲಿ ಶೂನ್ಯ ಸಹಿಷ್ಣುತೆ (Zeಡಿo ಣoಟeಡಿಚಿಟಿಛಿe) ಹೊಂದಿರಬೇಕು ಎಂದು ತಾಕೀತು ಮಾಡಿದರು. ೧೪ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದ್ದು, ೧,೬೦,೦೦೦ ರೂ. ದಂಡ ವಸೂಲಿ ಮಾಡಲಾಗಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಸಭೆಗೆ ಒದಗಿಸಿದರು.
ಕೇವಲ ದಂಡ ವಿಧಿಸುವುದಷ್ಟೇ ಅಲ್ಲದೆ, ಪ್ರತಿಯೊಂದು ತಾಲೂಕು ಮಟ್ಟದಲ್ಲಿ ಅಂಗಡಿ ಮತ್ತು ಉದ್ದಿಮೆಗಳ ಮಾಲೀಕರ ಸಭೆ ಕರೆದು ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಜಾಗೃತಿ ಮೂಡಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜೀತಕಾರ್ಮಿಕರನ್ನು ರಕ್ಷಿಸಿದ ಬಳಿಕ ಅವರಿಗೆ ಬಿಡುಗಡೆ ಪತ್ರ (ಖeಟeಚಿse ಅeಡಿಣiಜಿiಛಿಚಿಣe) ನೀಡುವಲ್ಲಿ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳ ಮಟ್ಟದಲ್ಲಿ ವಿಳಂಬವಾಗುತ್ತಿರುವುದಕ್ಕೆ ಜಿಲ್ಲಾಧಿಕಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ರಕ್ಷಣೆ ಮಾಡಿದ ಕಾರ್ಮಿಕರನ್ನು ದಿನಗಟ್ಟಲೆ ಕಾಯಿಸದೆ, ತಕ್ಷಣವೇ ಅವರಿಗೆ ಬಿಡುಗಡೆ ಪತ್ರ ಒದಗಿಸುವಂತೆ ಮತ್ತು ಈ ಬಗ್ಗೆ ತಕ್ಷಣ ವರದಿ ನೀಡುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಬೈಲಾಗಳು ಹಲವು ವರ್ಷಗಳಿಂದ (೨೦೨೪ರಿಂದ) ನವೀಕರಣಗೊಂಡಿಲ್ಲ ಎಂಬ ಅಂಶ ಸಭೆಯಲ್ಲಿ ಬೆಳಕಿಗೆ ಬಂದಿದ್ದು, ಈ ಆಡಳಿತಾತ್ಮಕ ಲೋಪದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸೊಸೈಟಿಯಲ್ಲಿರುವ ಸಿಬ್ಬಂದಿ ಹಾಗೂ ಲೆಕ್ಕಿಗರು ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡುತ್ತಿಲ್ಲ, ಲಭ್ಯವಿರುವ ಅನುದಾನವನ್ನು ಸರಿಯಾಗಿ ಬಳಸಿ ಕಾರ್ಯಕ್ರಮಗಳನ್ನು ರೂಪಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸೊಸೈಟಿಯ ನಿಯಮಾವಳಿಗಳನ್ನು ತಕ್ಷಣವೇ ನವೀಕರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಅಲ್ಲದೆ ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡುವಂತೆ ಸಹ ಅವರು ಕಾರ್ಮಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜೂನ್ ೧೨ ಹಮ್ಮಿಕೊಳ್ಳಲಾಗಿದ್ದು, ಈ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮತ್ತು ನಗರ ಪ್ರದೇಶಗಳಲ್ಲಿ ಕಸ ವಿಲೇವಾರಿ ವಾಹನಗಳ ಮೂಲಕ ಜಿಂಗಲ್ಸ್ ಪ್ರಸಾರ ಮಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸೂಚನೆ ನೀಡಲಾಯಿತು.
ಎಲ್ಲಾ ಕಾರ್ಮಿಕ ನಿರೀಕ್ಷಕರುಗಳಿಗೆ (ಐಚಿbouಡಿ Iಟಿsಠಿeಛಿಣoಡಿs) ವಾರ ಮತ್ತು ತಿಂಗಳ ಗುರಿಯನ್ನು ನಿಗದಿಪಡಿಸಿ, ನಿರಂತರವಾಗಿ ತಪಾಸಣೆಗಳನ್ನು (Iಟಿsಠಿeಛಿಣioಟಿs) ನಡೆಸುವಂತೆ ಆದೇಶಿಸಿದರು.
ಒಟ್ಟಾರೆಯಾಗಿ, ಬಾಲಕಾರ್ಮಿಕ ಮತ್ತು ಜೀತಕಾರ್ಮಿಕ ನಿರ್ಮೂಲನೆ ಕೇವಲ ಕಾಗದದ ಮೇಲಿನ ಅಂಕಿ-ಅಂಶಗಳಿಗೆ ಸೀಮಿತವಾಗದೆ, ನೈಜವಾಗಿ ಅನುಷ್ಠಾನಕ್ಕೆ ಬರಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಅಪರ ಪೊಲೀಸ್ ವರಿಷ್ಟಾಧಿಕಾರಿ ರವಿಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್. ಪಿ. ಬಾಗೇವಾಡಿ, ಕಾರ್ಮಿಕ ಇಲಾಖೆ ಜಿಲ್ಲಾ ಅಧಿಕಾರಿ ವರಲಕ್ಷ್ಮಿ, ಕೋಲಾರ ನಗರಸಭೆ ಆಯುಕ್ತರು ನವಿನಚಂದ್ರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸನ್ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್