
ಗದಗ, 10 ಜೂನ್ (ಹಿ.ಸ.) :
ಆ್ಯಂಕರ್ : ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಶೇ.94.14 ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಳಿಸಲಾಗಿದೆ. ಜಿಲ್ಲೆಯಲ್ಲಿ ಎಸ್ಐಆರ್ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ತಿಳಿಸಿದರು.
ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಎಸ್ ಐ ಆರ್ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು.
ಎಸ್.ಐ.ಆರ್ ಕುರಿತು ರಾಜ್ಯದಾದ್ಯಂತ ಸಾಕಷ್ಟು ಚರ್ಚೆಗಳು ನಡೆದಿವೆ. ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲಗಳನ್ನು ನಿವಾರಿಸಲು ಪಾರದರ್ಶಕವಾಗಿ ಎಸ್.ಐ.ಆರ್ ಪ್ರಕ್ರಿಯೆ ನಡೆಲಾಗುವುದು. ಅರ್ಹ ಯಾವೊಬ್ಬ ಮತದಾರನೂ ಪಟ್ಟಿಯಿಂದ ಹೊರಗುಳಿಯಬಾರದು, ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಹೇಳಿದರು.
ಕಳೆದ ಆರು ತಿಂಗಳಿಂದ ಎಸ್.ಐ.ಆರ್ ಅಂಗವಾಗಿ ನಿರಂತರವಾಗಿ ಸಿದ್ಧತೆ ನಡೆಸಲಾಗಿದೆ. ಆಯೋಗದ ಮಾರ್ಗಸೂಚಿಯಂತೆ 2002ರ ಮತದಾರರ ಪಟ್ಟಿಯನ್ನು ಮಾನದಂಡವಾಗಿಟ್ಟುಕೊಂಡು, ಪ್ರಸ್ತುತ ಇರುವ 2025ರ ಮತದಾರರ ಪಟ್ಟಿಯೊಂದಿಗೆ ಹೋಲಿಕೆ ಹಾಗೂ ಮ್ಯಾಪಿಂಗ್ ಪ್ರಕ್ರಿಯೆ ನಡೆಸಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಿಲ್ಲೆಯಲ್ಲಿ ಈಗಾಗಲೇ ಶೇ 94.14 ರಷ್ಟು ನೈಜ ಮತದಾರರನ್ನು ಗುರುತಿಸಿ, ಕುಟುಂಬಗಳ ಲಿಂಕೇಜ್ನೊಂದಿಗೆ ಹೊಂದಾಣಿಕೆ ಮಾಡಲಾಗಿದೆ ಎಂದರು.
ವಿಶೇಷ ಪರಿಷ್ಕರಣೆ ಅಂಗವಾಗಿ ಜೂನ್ 20 ರಿಂದ 29ರವರೆಗೆ ಪೂರ್ವಸಿದ್ಧತೆ, ತರಬೇತಿ ಮತ್ತು ಮುದ್ರಣ ಕಾರ್ಯಗಳು ನಡೆಯಲಿವೆ. ಜೂನ್ 30 ರಿಂದ ಜುಲೈ 29 ರವರೆಗೆ ಬಿ.ಎಲ್.ಒ.ಗಳು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಹಾಗೂ ಪರಿಶೀಲನೆ ನಡೆಸಲಿದ್ದಾರೆ. ತದನಂತರ ಆಗಸ್ಟ್ 5 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಕೋರಿದರು.
53004 ಮತದಾರರ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ:
2025ರ ಜಿಲ್ಲೆಯ ಮತದಾರರ ಪಟ್ಟಿಯ ಪ್ರಕಾರ ಒಟ್ಟು 9,04,994 ಅರ್ಹ ಮತದಾರರಿದ್ದು, ಈ ಪೈಕಿ ಈಗಾಗಲೇ 8,51,991 ಮತದಾರರನ್ನು ಗುರುತಿಸಿ ಮ್ಯಾಪಿಂಗ್ ಮಾಡಲಾಗಿದೆ. ಇದರಲ್ಲಿ ಕೆಲವರು ಮೃತರಾಗಿರಬಹುದು, ಬೇರೆ ಕಡೆಗೆ ಕಾಯಂ ಆಗಿ ವಲಸೆ ಹೋಗಿರಬಹುದು, ಅಥವಾ ಮತಪಟ್ಟಿಯಲ್ಲಿ ಎರಡು ಬಾರಿ ಹೆಸರು ಸೇರ್ಪಡೆಯಾಗಿರಬಹುದು. ಆದರೆ, ಯಾರನ್ನೂ ಏಕಾಏಕಿ ಪಟ್ಟಿಯಿಂದ ಕೈಬಿಡಲಾಗುವುದಿಲ್ಲ. ಪತ್ತೆಯಾಗದ ಈ 53004 ಮತದಾರರಿಗೆ ನೋಟಿಸ್ ನೀಡಿ ಪರಿಶೀಲಿಸಲಾಗುವುದು. ಮೃತ ಪಟ್ಟ ಬಗ್ಗೆ ಅಧಿಕೃತ ಮರಣ ಪ್ರಮಾಣಪತ್ರ ಸಿಗುವವರೆಗೂ ಯಾರ ಹೆಸರನ್ನೂ ಪಟ್ಟಿಯಿಂದ ತೆಗೆದುಹಾಕುವುದಿಲ್ಲ. ಮತದಾರರ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು ಎಂದರು.
ಮನೆ ಗಣತಿ ಸಹಕಾರಕ್ಕೆ ಕೋರಿಕೆ:
ಈಗಾಗಲೇ ಮನೆ ಮನೆ ಸಮೀಕ್ಷೆ ಮುಗಿದಿದ್ದು, ಮುಂದಿನ ಹಂತವಾಗಿ ಪ್ರತಿಯೊಬ್ಬ ಮತದಾರರ ಮನೆ ಬಾಗಿಲಿಗೆ ಬಿಎಲ್ಒಗಳ ಮೂಲಕ ಅರ್ಧದಷ್ಟು ಮಾಹಿತಿ ಭರ್ತಿಯಾಗಿರುವ ಗಣತಿ ನಮೂನೆ ತಲುಪಿಸಲಾಗುವುದು. ಇದರಲ್ಲಿ ಮತದಾರರ ಹೆಸರು, ಎಪಿಕ್ ಸಂಖ್ಯೆ, ಸಂಬಂಧಿಕರ ಹೆಸರು ಹಾಗೂ ವಿಧಾನಸಭಾ ಕ್ಷೇತ್ರದ ವಿವರಗಳು ಇರಲಿವೆ. ಬಿಎಲ್ಒಗಳು ಮನೆಗಳಿಗೆ ಕನಿಷ್ಠ ಮೂರು ಬಾರಿ ಭೇಟಿ ನೀಡಿ, ಗಣತಿ ನಮೂನೆಗಳನ್ನು ತಲುಪಿಸಲು ಪ್ರಯತ್ನಿಸಲಿದ್ದಾರೆ. ನಂತರ ವಿವರಗಳು ಸರಿಯಾಗಿವೆಯೇ ಎಂಬುದನ್ನು ಮತದಾರರಿಂದ ದೃಢೀಕರಿಸಿಕೊಂಡು ಸಹಿ ಪಡೆದು ವಾಪಸ್ ತರಲಿದ್ದಾರೆ. ಸಾರ್ವಜನಿಕರು ಗಣತಿ ನಮೂನೆ ಸ್ವೀಕರಿಸಿ, ಪರಿಶೀಲಿಸಿ ಕಡ್ಡಾಯವಾಗಿ ಬಿಎಲ್ಒಗಳಿಗೆ ವಾಪಸ್ ನೀಡಬೇಕು. ಇಲ್ಲದಿದ್ದರೆ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟು ಹೋಗುವ ಸಾಧ್ಯತೆ ಇರುತ್ತದೆ. ರಾಜಕೀಯ ಪಕ್ಷಗಳು ಈ ಬೃಹತ್ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಕೋರಿದರು.
ಅಗತ್ಯ ದಾಖಲೆ ಪಡೆದು ಮತಪಟ್ಟಿಗೆ ಸೇರ್ಪಡೆ:
ಕುಟುಂಬದ ಮುಖ್ಯಸ್ಥರ ಹೆಸರು 2002ರ ಮತದಾರರ ಪಟ್ಟಿಯಲ್ಲಿದ್ದರೆ, ಹೊಸದಾಗಿ ಅರ್ಹತೆ ಪಡೆಯುವ ಕುಟುಂಬದ ಇತರೆ ಸದಸ್ಯರ ಹೆಸರನ್ನು ಸೇರ್ಪಡೆ ಮಾಡುವುದು ಸುಲಭವಾಗುತ್ತದೆ. ಮದುವೆಯಾಗಿ ಅಥವಾ ವಲಸೆ ಬಂದು ಇಲ್ಲಿ ನೆಲೆಸಿರುವವರ ಹೆಸರು ಹಳೆಯ ವೋಟರ್ ಲಿಸ್ಟ್ನಲ್ಲಿ ಇಲ್ಲದಿದ್ದರೆ, ಅವರಿಗೆ ಫ್ಯಾಮಿಲಿ ಲಿಂಕೇಜ್ ಸಿಗುವುದಿಲ್ಲ. ಈ ಹಿಂದೆ ಅವರು ವಾಸವಾಗಿದ್ದ ಸ್ಥಳದಲ್ಲಿನ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇದ್ದರೆ, ಆ ಮಾಹಿತಿ ಅನುಸಾರ ಹೆಸರು ಸೇರ್ಪಡೆ ಮಾಡಬಹುದು. ಮ್ಯಾಪಿಂಗ್ ಆಗದೆ ಇರುವವರು ಮನೆ ಗಣತಿ ಫಾರಂ ಜೊತೆ ಚುನಾವಣಾ ಆಯೋಗ ನಿಗದಿಪಡಿಸಿದ ಕೇಂದ್ರ ಅಥವಾ ರಾಜ್ಯ ಸರ್ಕಾರ, ಸಾರ್ವಜನಿಕ ಉದ್ಯಮಗಳು ನಿಯಮಿತ ಉದ್ಯೋಗಿ ಗುರುತಿನ ಚೀಟಿ, ಪಿಂಚಣಿ ಆದೇಶ ಅಥವಾ ಗುರುತಿನ ಚೀಟಿ, 1 ಜುಲೈ 1987ಕ್ಕಿಂತ ಮೊದಲು ಭಾರತದಲ್ಲಿ ಸರ್ಕಾರಿ, ಸ್ಥಳೀಯ ಪ್ರಾಧಿಕಾರ, ಬ್ಯಾಂಕ್,ಅಂಚೆ ಕಚೇರಿ, ಎಲ್.ಐ.ಸಿ ಉದ್ಯಮಗಳಿಂದ ನೀಡಲಾದ ಯಾವುದೇ ಗುರುತಿನ ಚೀಟಿ, ಪ್ರಮಾಣ ಪತ್ರ ಅಥವಾ ದಾಖಲೆ, ಜನನ ಪ್ರಮಾಣ ಪತ್ರ, ಪಾಸ್ಪೋರ್ಟ್, ಮೆಟ್ರಿಕ್ಯೂಲೇಶನ್ (ಎಸ್.ಎಸ್.ಎಲ್.ಸಿ) ಶೈಕ್ಷಣಿಕ ಪ್ರಮಾಣ ಪತ್ರ, ಶಾಶ್ವತ ನಿವಾಸ ಪ್ರಮಾಣ ಪತ್ರ, ಅರಣ್ಯ ಹಕ್ಕು ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ರಾಷ್ಟ್ರೀಯ ನಾಗರಿಕರ ನೋಂದಣಿ, ಕುಟುಂಬ ನೊಂದಣಿ, ಭೂಮಿ ಮನೆ ಹಂಚಿಕೆ ಪ್ರಮಾಣ ಪತ್ರ ಸಲ್ಲಿಸಬಹುದು. ಇದರೊಂದಿಗೆ ಆಧಾರ್ ಕಾರ್ಡನ್ನು ಗುರುತಿನ ಪುರಾವೆಯಾಗಿ ಮಾತ್ರ ನೀಡಬಹುದು. ಇವುಗಳನ್ನು ಪಡೆದು ಮತಪಟ್ಟಿಗೆ ಸೇರಿಸಲು ಕ್ರಮ ವಹಿಸಲಾಗುವುದು.
ಅಕ್ಟೋಬರ್ 7 ರಂದು ಅಂತಿಮ ಮತಪಟ್ಟಿ ಪ್ರಕಟ:
ಮನೆ ಗಣತಿ ತರುವಾಯ ಆಗಸ್ಟ್ 5 ರಂದು ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು. ಮತದಾರ ಪಟ್ಟಿಗೆ ಆಕ್ಷೇಪಣೆಗಳ ಸಲ್ಲಿಕೆಗೆ ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರು ಅಕ್ಟೋಬರ್ 3 ಒಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಸಾರ್ವಜನಿಕರಿಂದ ಬರುವ ಆಕ್ಷೇಪಣೆಗಳ ಇತ್ಯರ್ಥದ ನಂತರ, ಅಕ್ಟೋಬರ್ 7 ರಂದು ಅಂತಿಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು. ನಂತರ ಈಗ ಜಾರಿಯಲ್ಲಿರುವ ಎಲ್ಲಾ ಮತದಾರರ ಪಟ್ಟಿಗಳು ಸಂಪೂರ್ಣವಾಗಿ ರದ್ದಾಗಲಿದ್ದು ಪರಿಷ್ಕೃತ ಮತದಾರರ ಪಟ್ಟಿ ಮಾತ್ರ ಊರ್ಜಿತವಾಗುತ್ತದೆ. ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.
ಮತಗಟ್ಟೆಗಳ ಮರುಹಂಚಿಕೆ:
ಚುನಾವಣೆ ಆಯೋಗದ ನಿಯಮಾವಳಿಗಳ ಪ್ರಕಾರ ಪ್ರದೇಶಗಳಲ್ಲಿ ಗರಿಷ್ಠ 1,200 ಮತದಾರರು ಇರಬೇಕಾಗುತ್ತದೆ. ಸದ್ಯದ ಪರಿಷ್ಕರಣೆಯಲ್ಲಿ ಗರಿಷ್ಠ ಮಿತಿಯನ್ನು 1,200 ಎಂದು ನಿಗದಿಪಡಿಸಿಕೊಳ್ಳಲಾಗಿದೆ. ಯಾವುದೇ ಮತಗಟ್ಟೆ ವ್ಯಾಪ್ತಿಯಲ್ಲಿ 1,200 ಕ್ಕಿಂತ ಹೆಚ್ಚು ಮತದಾರರಿದ್ದರೆ, ಅಂತಹ ಕಡೆಗಳಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಒಂದು ಬೂತ್ನಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಮತದಾರರು ಇರದಂತೆ ಮರುಹಂಚಿಕೆ ಮತ್ತು ಪರಿಷ್ಕರಣೆ ಮಾಡಿ, ಜುಲೈ 29ರ ಒಳಗಾಗಿ ಈ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಪ್ರತಿಯೊಂದು ರಾಜಕೀಯ ಪಕ್ಷಗಳು ತಮ್ಮ ಮಟ್ಟದಲ್ಲಿ ಬೂತ್ ಮಟ್ಟದ ಏಜೆಂಟರನ್ನು ತಕ್ಷಣವೇ ನೇಮಕ ಮಾಡಿ ಎಸ್.ಐ.ಆರ್ ಪ್ರಕ್ರಿಯೆಗೆ ಸಹರಿಸುವಂತೆ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಚುನಾವಣಾ ಶಾಖೆಯ ತಹಶಿಲ್ದಾರ ಸಂತೋಷಕುಮಾರ ಹಿರೇಮಠ ಸೇರಿದಂತೆ ಸಹಾಯಕ ಚುನಾವಣಾಧಿಕಾರಿಗಳು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP