
ಬಾಗಲಕೋಟೆ, 11 ಜೂನ್ (ಹಿ.ಸ.) :
ಆಂಕರ್ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಅವಾರ್ಡ್ ಪ್ರತಿಗಳನ್ನು ರೈತರಿಗೆ ವಿತರಿಸುವಂತೆ ಹಾಗೂ ಯೋಜನೆಯ ಮೂಲಕ ಆಗಸ್ಟ್ ಮೊದಲ ವಾರದಲ್ಲೇ ನೀರು ಹರಿಸುವಂತೆ ಆಗ್ರಹಿಸಿ ರೈತ ಮುಖಂಡರು ಬಾಗಲಕೋಟೆ ವಿಶೇಷ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ನಗರದಲ್ಲಿ ನಡೆದ ಸಭೆಯಲ್ಲಿ ರೈತ ಮುಖಂಡರು ಹಾಗೂ ಹೋರಾಟಗಾರರು ವಿಶೇಷ ಜಿಲ್ಲಾಧಿಕಾರಿಗಳಾದ ಮಾರುತಿ ಬ್ಯಾಕೋಡ ಅವರನ್ನು ಭೇಟಿ ಮಾಡಿ, ನಾಗರಬೆಟ್ಟ ಏತ ನೀರಾವರಿ ಯೋಜನೆಯ ಕಾಮಗಾರಿಗಳಿಗೆ ವೇಗ ನೀಡುವಂತೆ ಒತ್ತಾಯಿಸಿದರು. ಹಲವು ವರ್ಷಗಳಿಂದ ರೈತರು ನಿರೀಕ್ಷಿಸುತ್ತಿರುವ ಈ ಯೋಜನೆ ಶೀಘ್ರವಾಗಿ ಅನುಷ್ಠಾನಗೊಂಡರೆ ಬರಪೀಡಿತ ಪ್ರದೇಶಗಳ ಕೃಷಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.
ಯೋಜನೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗಳು ವಿಳಂಬವಾಗುತ್ತಿರುವುದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಅವಾರ್ಡ್ ಪ್ರತಿಗಳನ್ನು ನೀಡಬೇಕು. ಅಲ್ಲದೆ ಕಾಮಗಾರಿಗಳಿಗೆ ವೇಗ ನೀಡಿ ನಿಗದಿತ ಅವಧಿಯೊಳಗೆ ನೀರು ಹರಿಸುವ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಶಾಂತಗೌಡ ಪಾಟೀಲ (ನಡಹಳ್ಳಿ), ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಸೇರಿದಂತೆ ಹಲವಾರು ರೈತರು ಉಪಸ್ಥಿತರಿದ್ದರು.
ವಿಶೇಷ ಜಿಲ್ಲಾಧಿಕಾರಿ ಮಾರುತಿ ಬ್ಯಾಕೋಡ ಹಾಗೂ ಕೆಬಿಜೆಎನ್ಎಲ್ (KBJNL) ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು, ರೈತರ ಮನವಿಯನ್ನು ಆಲಿಸಿದರು. ಯೋಜನೆಗೆ ಸಂಬಂಧಿಸಿದ ಮುಂದಿನ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು.
ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಂಡರೆ ಸುತ್ತಮುತ್ತಲಿನ ರೈತರ ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆಯಲಿದ್ದು, ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವ ನಿರೀಕ್ಷೆ ಇದೆ. ರೈತರ ಬಹುದಿನಗಳ ಬೇಡಿಕೆಯಾಗಿರುವ ಈ ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಒತ್ತಾಯಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande