
ಬಾಗಲಕೋಟೆ, 13 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸಮರ್ಪಕ ವಿದ್ಯುತ್ ಪೂರೈಕೆ ನೀಡುವಂತೆ ಆಗ್ರಹಿಸಿ ಮಲ್ಲಾಪುರ ಪಿ.ಜೆ. ಗ್ರಾಮದ ಗ್ರಾಮಸ್ಥರು ಲೋಕಾಪುರದ ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಮೂರು ವರ್ಷಗಳಿಂದ ಗ್ರಾಮದ ಸಮಸ್ಯೆ ಬಗೆಹರಿಯದೇ ಉಳಿದಿದ್ದು, ಪ್ರತಿದಿನ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ವಿದ್ಯುತ್ ಕೊರತೆಯಿಂದ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದು, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ಭಾರಿ ಹೊಡೆತ ಬಿದ್ದಿದೆ ಎಂದು ಹೇಳಿದರು.
ಸಂಜೆ ವೇಳೆಯಲ್ಲಿ ವಿದ್ಯುತ್ ಇಲ್ಲದ ಕಾರಣ ಮಕ್ಕಳು ಕತ್ತಲಿನಲ್ಲಿಯೇ ಓದುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲ ಕುಟುಂಬಗಳು ಮೊಬೈಲ್ ಫೋನ್ ಬೆಳಕಿನಲ್ಲಿಯೇ ಊಟ ಮಾಡುವಂತಹ ದುಸ್ಥಿತಿ ಎದುರಿಸುತ್ತಿವೆ ಎಂದು ಗ್ರಾಮಸ್ಥರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾಮದ ತೋಟದ ಮನೆಗಳಲ್ಲಿ ವಾಸಿಸುವ ರೈತ ಕುಟುಂಬಗಳು ಪ್ರತಿದಿನ ಕತ್ತಲಿನಲ್ಲಿಯೇ ಜೀವನ ನಡೆಸುವಂತಾಗಿದೆ. ರಾತ್ರಿ ವೇಳೆ ಕೃಷಿ ಚಟುವಟಿಕೆಗಳು, ಮನೆ ಕೆಲಸಗಳು ಹಾಗೂ ಮಕ್ಕಳ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ವಿದ್ಯುತ್ ಸಮಸ್ಯೆ ಕುರಿತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಶಾಶ್ವತ ಪರಿಹಾರ ದೊರಕಿಲ್ಲ ಎಂದು ಆರೋಪಿಸಿದ ಗ್ರಾಮಸ್ಥರು, ಕರ್ತವ್ಯ ನಿರ್ಲಕ್ಷ್ಯ ತೋರಿದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮಲ್ಲಾಪುರ ಪಿ.ಜೆ. ಗ್ರಾಮದ ವಿದ್ಯುತ್ ಸಂಪರ್ಕ ಸಮಸ್ಯೆಯನ್ನು ತಕ್ಷಣ ಪರಿಹರಿಸಿ, ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಕಲ್ಪಿಸಬೇಕು. ಇಲ್ಲವಾದಲ್ಲಿ ಸಮಸ್ಯೆ ಬಗೆಹರಿಯುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande