
ಬಾಗಲಕೋಟೆ, 13 ಜೂನ್ (ಹಿ.ಸ.) :
ಆಂಕರ್ : ವಿಧಾನ ಪರಿಷತ್ ಸದಸ್ಯೆ ಹಾಗೂ ಹಿರಿಯ ನಟಿ, ರಾಜಕೀಯ ಮುಖಂಡೆ ಉಮಾಶ್ರೀ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಹಟಗಾರ ಹಾಗೂ ಕುರುಹಿನಶೆಟ್ಟಿ ಸಮಾಜಗಳ ನೇಕಾರ ಮುಖಂಡರು ಸಭೆ ನಡೆಸಿದರು.
ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ
ಪಟ್ಟಣದ ಬನಶಂಕರಿದೇವಿ ದೇವಸ್ಥಾನದ ಆವರಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಸಮಾಜದ ಮುಖಂಡರು ಭಾಗವಹಿಸಿ, ನೇಕಾರ ಸಮುದಾಯದ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಮಾಶ್ರೀ ಅವರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ಮಾತನಾಡಿದ ಮುಖಂಡರು, ನೇಕಾರ ಸಮುದಾಯವು ರಾಜ್ಯದ ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದೆ.
ಸಮುದಾಯದ ಸಮಸ್ಯೆಗಳು ಮತ್ತು ಬೇಡಿಕೆಗಳಿಗೆ ಸಮರ್ಪಕ ಸ್ಪಂದನೆ ದೊರೆಯಬೇಕಾದರೆ ಸರ್ಕಾರದಲ್ಲಿ ಸಮುದಾಯದ ಪ್ರತಿನಿಧಿತ್ವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಉಮಾಶ್ರೀ ಅವರು ನೇಕಾರ ಸಮುದಾಯದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಹಿಂದೆ ಸಚಿವರಾಗಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಜನಪರ ಕೆಲಸಗಳನ್ನು ಮಾಡಿದ್ದಾರೆ. ಅವರ ಅನುಭವ ಮತ್ತು ಸೇವೆಯನ್ನು ಪರಿಗಣಿಸಿ ಮತ್ತೊಮ್ಮೆ ಸಚಿವ ಸ್ಥಾನ ನೀಡಬೇಕು ಎಂದು ಮುಖಂಡರು ಆಗ್ರಹಿಸಿದರು.
ನೇಕಾರರ ಅಭಿವೃದ್ಧಿ, ಉದ್ಯೋಗ ಭದ್ರತೆ, ಕೈಮಗ್ಗ ಕ್ಷೇತ್ರದ ಉತ್ತೇಜನ ಸೇರಿದಂತೆ ವಿವಿಧ ವಿಷಯಗಳಿಗೆ ಸರ್ಕಾರದ ಮಟ್ಟದಲ್ಲಿ ಹೆಚ್ಚಿನ ಆದ್ಯತೆ ಸಿಗಬೇಕಿದೆ. ಈ ನಿಟ್ಟಿನಲ್ಲಿ ಉಮಾಶ್ರೀ ಅವರಿಗೆ ಸಚಿವ ಸ್ಥಾನ ನೀಡುವುದು ಸಮುದಾಯಕ್ಕೆ ಗೌರವ ನೀಡಿದಂತಾಗುತ್ತದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಸಭೆಯಲ್ಲಿ ಹಟಗಾರ ಹಾಗೂ ಕುರುಹಿನಶೆಟ್ಟಿ ಸಮಾಜಗಳ ಹಲವು ನೇಕಾರ ಮುಖಂಡರು ಉಪಸ್ಥಿತರಿದ್ದು, ಸರ್ಕಾರವು ತಮ್ಮ ಬೇಡಿಕೆಯನ್ನು ಪರಿಗಣಿಸುವಂತೆ ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande