
ಬಾಗಲಕೋಟೆ, 15 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ ತೇರದಾಳ ಮತಕ್ಷೇತ್ರದ ಕಲಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಬೆಂಬಲ ವ್ಯಕ್ತವಾಗಿದ್ದು, ಸುಮಾರು 300ಕ್ಕೂ ಹೆಚ್ಚು ಯುವಕರು ಹಾಗೂ ಹಿರಿಯರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕರ್ನಾಟಕ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳು, ಅಭಿವೃದ್ಧಿ ಕಾರ್ಯಗಳು ಹಾಗೂ ಕಾಂಗ್ರೆಸ್ ಪಕ್ಷದ ಯುವ ನಾಯಕತ್ವದಿಂದ ಪ್ರೇರಿತರಾಗಿ ಈ ಸೇರ್ಪಡೆ ಕಾರ್ಯಕ್ರಮ ನಡೆದಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಯುವ ನಾಯಕರಾದ ಸಿದ್ದು ಕೊಣ್ಣೂರ ಅವರ ನೇತೃತ್ವದಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ನೂತನವಾಗಿ ಕಾಂಗ್ರೆಸ್ ಸೇರ್ಪಡೆಗೊಂಡ ಕಾರ್ಯಕರ್ತರನ್ನು ಪಕ್ಷದ ಶಾಲು ಹೊದಿಸಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಜಮಖಂಡಿ ಹಾಗೂ ತೇರದಾಳ ಮತಕ್ಷೇತ್ರಗಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು, ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಯುವ ಕಾರ್ಯಕರ್ತರು ಉಪಸ್ಥಿತರಿದ್ದರು.
ಸೇರ್ಪಡೆಗೊಂಡ ಯುವಕರು ಹಾಗೂ ಹಿರಿಯರು ಮಾತನಾಡಿ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು, ಜನಪರ ಕಾರ್ಯಕ್ರಮಗಳು ಹಾಗೂ ಕ್ಷೇತ್ರದ ಅಭಿವೃದ್ಧಿ ದೃಷ್ಟಿಕೋನವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷದೊಂದಿಗೆ ಕೈಜೋಡಿಸಿರುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮುಖಂಡರು, “ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಆಡಳಿತಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಹೊಸದಾಗಿ ಸೇರ್ಪಡೆಗೊಂಡ ಎಲ್ಲರ ಸಹಕಾರದಿಂದ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗುವುದು” ಎಂದು ಹೇಳಿದರು.
ನೂತನ ಸದಸ್ಯರಿಗೆ ಕಾಂಗ್ರೆಸ್ ಕುಟುಂಬದ ಪರವಾಗಿ ಹೃತ್ಪೂರ್ವಕ ಸ್ವಾಗತ ಹಾಗೂ ಶುಭಾಶಯಗಳನ್ನು ಮುಖಂಡರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande