
ನವದೆಹಲಿ, 17 ಜೂನ್ (ಹಿ.ಸ.) :
ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆಯಿಂದ ಜೂನ್ 22ರವರೆಗೆ ಮಧ್ಯ ಪ್ರದೇಶದ ಐದು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಅವಧಿಯಲ್ಲಿ ಅವರು ಬೈತೂಲ್, ಓಂಕಾರೇಶ್ವರ, ಜಬಲ್ಪುರ್ ಮತ್ತು ಶ್ಯೋಪುರ ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಓಂಕಾರೇಶ್ವರ ಜ್ಯೋತಿರ್ಲಿಂಗ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವುದರ ಜೊತೆಗೆ ಕುನೋ ರಾಷ್ಟ್ರೀಯ ಉದ್ಯಾನವನಕ್ಕೂ ಭೇಟಿ ನೀಡಲಿದ್ದಾರೆ.
ನಾಳೆ ಬೆಳಿಗ್ಗೆ 9.25ಕ್ಕೆ ರಾಷ್ಟ್ರಪತಿ ಇಂದೋರ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬೈತೂಲ್ಗೆ ತೆರಳಿ, ಬೆಳಿಗ್ಗೆ 11.10ಕ್ಕೆ ಬ್ರಹ್ಮಕುಮಾರೀಸ್ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 12.20ಕ್ಕೆ ಬೈತೂಲ್ನಿಂದ ಓಂಕಾರೇಶ್ವರಕ್ಕೆ ಪ್ರಯಾಣ ಬೆಳೆಸಿ, ಮಧ್ಯಾಹ್ನ 1.40ಕ್ಕೆ ಅಲ್ಲಿಗೆ ತಲುಪಲಿದ್ದಾರೆ.
ಸಂಜೆ 6.20ಕ್ಕೆ ಓಂಕಾರೇಶ್ವರ ಜ್ಯೋತಿರ್ಲಿಂಗ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಹಾಮಂಗಳಾರತಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಓಂಕಾರೇಶ್ವರದಲ್ಲಿರುವ ಎನ್ಎಚ್ಡಿಸಿ ಅತಿಥಿಗೃಹದಲ್ಲಿ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.
ಜೂನ್ 19ರಂದು ಬೆಳಿಗ್ಗೆ 9.50ಕ್ಕೆ ಅಂತರರಾಷ್ಟ್ರೀಯ ಸಿಕಲ್ ಸೆಲ್ ಅನೀಮಿಯಾ ದಿನಾಚರಣೆ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಬೆಳಿಗ್ಗೆ 11.30ಕ್ಕೆ ಓಂಕಾರೇಶ್ವರದಿಂದ ಹೊರಟು ಮಧ್ಯಾಹ್ನ ಇಂದೋರ್ ತಲುಪಿ, ಅಲ್ಲಿಂದ ಪಶ್ಚಿಮ ಬಂಗಾಳದ ಕಲೈಕುಂಡಕ್ಕೆ ಪ್ರಯಾಣಿಸಲಿದ್ದಾರೆ.
ಜೂನ್ 20ರಂದು ಸಂಜೆ 6.10ಕ್ಕೆ ಜಬಲ್ಪುರ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಷ್ಟ್ರಪತಿ, ಅಲ್ಲಿನ ಸರ್ಕ್ಯೂಟ್ ಹೌಸ್ನಲ್ಲಿ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.
ಜೂನ್ 21ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಬಲ್ಪುರ್ನಲ್ಲಿ ನಡೆಯುವ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 11.40ಕ್ಕೆ ರಾಣಿ ದುರ್ಗಾವತಿ ವಿಶ್ವವಿದ್ಯಾಲಯದ 36ನೇ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಅದೇ ದಿನ ಮಧ್ಯಾಹ್ನ 1.20ಕ್ಕೆ ಜಬಲ್ಪುರ್ನಿಂದ ಗ್ವಾಲಿಯರ್ಗೆ ತೆರಳಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 3.35ಕ್ಕೆ ಕುನೋ ಅತಿಥಿಗೃಹ ತಲುಪಿ ಅಲ್ಲಿಯೇ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.
ಜೂನ್ 22ರಂದು ಬೆಳಿಗ್ಗೆ 6.30ಕ್ಕೆ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ವನ್ಯಜೀವಿ ವೀಕ್ಷಣೆ ಮತ್ತು ಸಫಾರಿ ನಡೆಸಲಿದ್ದಾರೆ. ಬಳಿಕ ಬೆಳಿಗ್ಗೆ 10.20ಕ್ಕೆ ಕುನೋದಿಂದ ಹೊರಟು ಗ್ವಾಲಿಯರ್ ವಿಮಾನ ನಿಲ್ದಾಣ ತಲುಪಿ, ಅಲ್ಲಿಂದ ನವದೆಹಲಿಗೆ ಪ್ರಯಾಣಿಸಲಿದ್ದಾರೆ ಎಂದು ರಾಷ್ಟ್ರಪತಿ ಕಚೇರಿ ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.