
ಬಾಗಲಕೋಟೆ, 19 ಜೂನ್ (ಹಿ.ಸ.) :
ಆಂಕರ್ : ಲಂಬಾಣಿ ಸಮಾಜದ ಮುಖಂಡರು ಶುಕ್ರವಾರ ಬಾಗಲಕೋಟೆಯಲ್ಲಿ ಸಭೆ ನಡೆಸಿ, ಹಿರಿಯ ನಾಯಕ ಹಾಗೂ ಸಮಾಜದ ಪ್ರತಿನಿಧಿ ರುದ್ರಪ್ಪ ಲಮಾಣಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಿರುವ ರುದ್ರಪ್ಪ ಲಮಾಣಿ ಅವರು ಜನಪರ ಹೋರಾಟಗಳು ಹಾಗೂ ಸಮಾಜದ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲಂಬಾಣಿ ಸಮುದಾಯದ ಸಮಸ್ಯೆಗಳು, ಹಕ್ಕುಗಳು ಮತ್ತು ಅಭಿವೃದ್ಧಿ ವಿಚಾರಗಳಿಗೆ ಸದಾ ಧ್ವನಿಯಾಗಿರುವ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಸಮಾಜಕ್ಕೆ ಹೆಚ್ಚಿನ ಪ್ರಾತಿನಿಧ್ಯ ದೊರೆಯಲಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.
ಬಾಗಲಕೋಟೆಯಲ್ಲಿ ನಡೆದ ಈ ಸಭೆಯಲ್ಲಿ ಮಾತನಾಡಿದ ಲಂಬಾಣಿ ಸಮಾಜದ ಮುಖಂಡರು, ರಾಜ್ಯದಲ್ಲಿ ಲಂಬಾಣಿ ಸಮುದಾಯದ ಜನಸಂಖ್ಯೆ ಗಣನೀಯವಾಗಿದ್ದು, ಸಮುದಾಯದ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಆದ್ಯತೆ ಅಗತ್ಯವಿದೆ ಎಂದು ಹೇಳಿದರು. ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡಿದರೆ, ಸಮುದಾಯದ ಆಶೋತ್ತರಗಳಿಗೆ ಸೂಕ್ತ ಸ್ಪಂದನೆ ದೊರೆಯಲಿದೆ ಎಂದು ಅವರು ತಿಳಿಸಿದರು.
ಸಮಾಜದ ವಿವಿಧ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದು, ಸರ್ಕಾರವು ತಮ್ಮ ಬೇಡಿಕೆಯನ್ನು ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಬಾಗಲಕೋಟೆ ಲಂಬಾಣಿ ಸಮಾಜದ ಮುಖಂಡರ ಈ ಆಗ್ರಹ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದ ನಿರ್ಧಾರದತ್ತ ಎಲ್ಲರ ಗಮನ ನೆಟ್ಟಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande