


ಬಳ್ಳಾರಿ, 20 ಜೂನ್ (ಹಿ.ಸ.) :
ಆ್ಯಂಕರ್ : ಸಮಾಜದ ಹಿಂದುಳಿದ ಹಾಗೂ ಬಡವರ ಸ್ವಾವಲಂಬಿ ಬದುಕಿಗೆ ಅಗತ್ಯವಿರುವ ಸೌಕರ್ಯಗಳನ್ನು ಕಲ್ಪಿಸಿಕೊಡುವ ಪ್ರಾಮಾಣಿಕ ಪ್ರಯತ್ನವನ್ನು ನಮ್ಮ ಸರ್ಕಾರ ನಿರಂತರವಾಗಿ ಮಾಡುತ್ತಿದೆ ಎಂದು ಸಂಡೂರು ಶಾಸಕಿ ಈ. ಅನ್ನಪೂರ್ಣ ಅವರು ಹೇಳಿದ್ದಾರೆ.
ಭವಿಷ್ಯ ನಿಧಿ ಸಂಸ್ಥೆ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ, ತೋರಣಗಲ್ಲು ವಿದ್ಯಾನಗರದ ಜೆಎಸ್ಡಬ್ಲ್ಯೂ ಟೌನ್ಶಿಪ್ನಲ್ಲಿರುವ ‘ಜೆಮ್ಯಾಕ್ಸ್' ಸಭಾಂಗಣದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪ್ರಧಾನ್ ಮಂತ್ರಿ ವಿಕಸಿತ್ ಭಾರತ್ ರೋಜ್ಗಾರ್ ಯೋಜನೆ' ಅಡಿ ಶುಕ್ರವಾರ ಹಮ್ಮಿಕೊಂಡಿದ್ದ ಬೃಹತ್ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಂಡೂರು ತಾಲೂಕು ಸುತ್ತಮುತ್ತ ಬೆಟ್ಟಗುಡ್ಡಗಳಿಂದ ಆವೃತವಾಗಿದ್ದು, ಬೇಸಾಯದ ಭೂಮಿ ತೀರಾ ಕಡಿಮೆಯಿದೆ. ಹೀಗಾಗಿ ಇಲ್ಲಿನ ಬಹುತೇಕ ಜನರು ಜೆಎಸ್ಡಬ್ಲ್ಯೂ ಸಂಸ್ಥೆಯನ್ನೇ ಆಶ್ರಯಿಸಿ ಬದುಕುತ್ತಿದ್ದಾರೆ. ಅವರ ಉದ್ಯೋಗ ಮತ್ತು ಜೀವನ ಭದ್ರತೆಗೆ ಸಂಸ್ಥೆ ಸದಾ ಒತ್ತು ನೀಡಬೇಕು ಎಂದು ತಿಳಿಸಿದರು.
ಕೈಗಾರಿಕಾ ವಲಯದ ಸುತ್ತಮುತ್ತಲಿನ ರಾಸಾಯನಿಕ ಮಿಶ್ರಿತ ಗಾಳಿಯಿಂದಾಗಿ ಸಾರ್ವಜನಿಕರಲ್ಲಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದು, ಈ ಬಗ್ಗೆ ಜೆಎಸ್ಡಬ್ಲ್ಯೂ ಸಂಸ್ಥೆಯು ವಿಶೇಷ ಗಮನಹರಿಸಬೇಕು. ಕಾರ್ಮಿಕರು ಹಾಗೂ ಬಡ ವರ್ಗದವರಿಗಾಗಿ ತಾಲೂಕಿನಲ್ಲಿ ಸುಸಜ್ಜಿತ ಉಚಿತ ಆಸ್ಪತ್ರೆಯೊಂದನ್ನು ಸ್ಥಾಪಿಸಿಕೊಡಬೇಕು ಎಂದು ಹೇಳಿದರು..
ಬಳ್ಳಾರಿ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯ ಆಯುಕ್ತ ಕೆ.ವಿ. ಪ್ರವೀಣ್ ಅವರು ಮಾತನಾಡಿ, ಮೊದಲ ಬಾರಿಗೆ ಉದ್ಯೋಗಕ್ಕೆ ಸೇರಿ ಭವಿಷ್ಯ ನಿಧಿ ಖಾತೆ ಪಡೆಯುತ್ತಿರುವ ಹೊಸ ಉದ್ಯೋಗಿಗಳಿಗೆ ಇದು ಅನ್ವಯಿಸುತ್ತದೆ. ಬಳ್ಳಾರಿ ವಲಯದಲ್ಲಿ ಇದುವರೆಗೆ ಇಂತಹ 1,374 ಹೊಸ ಕಾರ್ಮಿಕರು ಈ ಯೋಜನೆಯಡಿ ನೇರ ಹಣಕಾಸು ನೆರವು ಪಡೆಯಲು ಅರ್ಹರಾಗಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನವದೆಹಲಿಯ ವಿಜ್ಞಾನ ಭವನದಲ್ಲಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೊಸದಾಗಿ ಉದ್ಯೋಗಕ್ಕೆ ಸೇರಿದ ಅರ್ಹ ಉದ್ಯೋಗಿಗಳಿಗೆ ಪೆÇ್ರೀತ್ಸಾಹ ಸೌಲಭ್ಯ ವಿತರಣೆ ಮಾಡಿದ ಕಾರ್ಯಕ್ರಮದ ನೇರಪ್ರಸಾರವನ್ನು ವೀಕ್ಷಿಸಲಾಯಿತು.
ಬಳಿಕ ಮೊದಲ ಬಾರಿ ಉದ್ಯೋಗಕ್ಕೆ ಸೇರಿ ಇಪಿಎಫ್ಓ ಖಾತೆ ಹೊಂದಿದ ಉದ್ಯೋಗಿಗಳಿಗೆ ಪೆÇ್ರೀತ್ಸಾಹ ಧನ ವಿತರಣೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರ ವಿಶ್ವಜಿತ್ ಮೆಹೆತಾ, ಇಪಿಎಫ್ಓ ಸಂಸ್ಥೆಯ ಹಿರಿಯ ಅಧಿಕಾರಿಗಳು, ಜೆಎಸ್ಡಬ್ಲ್ಯೂ ಸಂಸ್ಥೆಯ ಅಧಿಕಾರಿಗಳು, ಉದ್ಯೋಗದಾತ ಕಂಪನಿಯ ಅಧಿಕಾರಿಗಳು, ಉದ್ಯೋಗಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್