
ನವದೆಹಲಿ, 23 ಜೂನ್ (ಹಿ.ಸ.) :
ಆ್ಯಂಕರ್ : ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದಿತ್ತೆಂದು ಆರೋಪಿಸಲಾಗಿರುವ ಅಕ್ರಮ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ತಮಿಳು ನಾಡಿನ ವಿವಿಧ ನಗರಗಳಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದೆ.
ಚೆನ್ನೈ, ತ್ರಿಚಿ, ಕೊಯಮತ್ತೂರು ಹಾಗೂ ಮಧುರೈ ಸೇರಿದಂತೆ ರಾಜ್ಯದ ಸುಮಾರು 18 ಸ್ಥಳಗಳಲ್ಲಿ ಇ.ಡಿ. ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳು ಮತ್ತು ಹಣಕಾಸು ವ್ಯವಹಾರಗಳ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.
ಅಧಿಕೃತ ಮೂಲಗಳ ಪ್ರಕಾರ, 2017ರಲ್ಲಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ದಾಖಲಿಸಿದ್ದ ಎಫ್ಐಆರ್ ಆಧರಿಸಿ ಇ.ಡಿ. ತನಿಖೆ ಆರಂಭಿಸಿತ್ತು. ಈ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿದ್ದ ಪೊಲೀಸರು 2021ರಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಇದೇ ಆರೋಪಪಟ್ಟಿಯನ್ನು ಆಧಾರವಾಗಿಸಿಕೊಂಡು ಇ.ಡಿ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದೆ.
ಮಂಗಳವಾರ ಬೆಳಗ್ಗೆಯಿಂದಲೇ ಆರಂಭವಾದ ಈ ಕಾರ್ಯಾಚರಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಶಂಕಿತರ ನಿವಾಸಗಳು ಮತ್ತು ವಾಣಿಜ್ಯ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ. ಅಧಿಕಾರಿಗಳು ವಿವಿಧ ದಾಖಲೆಗಳು, ಬ್ಯಾಂಕ್ ವ್ಯವಹಾರಗಳ ವಿವರಗಳು ಹಾಗೂ ಡಿಜಿಟಲ್ ಸಾಧನಗಳನ್ನು ಪರಿಶೀಲಿಸುತ್ತಿದ್ದಾರೆ.
ಪರೀಕ್ಷೆಯಲ್ಲಿ ಅಕ್ರಮವಾಗಿ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸುವುದಕ್ಕೆ ಪ್ರತಿಯಾಗಿ ದೊಡ್ಡ ಪ್ರಮಾಣದ ಅಕ್ರಮ ಹಣದ ವ್ಯವಹಾರ ನಡೆದಿರುವ ಶಂಕೆಯನ್ನು ಇ.ಡಿ. ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಸಾಕ್ಷ್ಯ ಸಂಗ್ರಹ ಮತ್ತು ಹಣದ ಹರಿವಿನ ಮೂಲವನ್ನು ಪತ್ತೆಹಚ್ಚುವ ಉದ್ದೇಶದಿಂದ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.