
ಬಾಗಲಕೋಟೆ, 28 ಜೂನ್ (ಹಿ.ಸ.) :
ಆಂಕರ್ : ರಾಷ್ಟ್ರೀಯ ಪೋಲಿಯೋ ಭಾನುವಾರದ ಅಂಗವಾಗಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಬಾದಾಮಿ ವಿಧಾನ ಸಭಾ ಕ್ಷೇತ್ರದ ಶಾಸಕ ಭೀಮಸೇನ ಬಿ. ಚಿಮ್ಮನಕಟ್ಟಿ ಅವರು, ರಾಷ್ಟ್ರೀಯ ಪೋಲಿಯೋ ಲಸಿಕಾ ಅಭಿಯಾನದಲ್ಲಿ ಭಾಗವಹಿಸಿ ನವಜಾತ ಶಿಶುಗಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಮಕ್ಕಳ ಆರೋಗ್ಯ ರಕ್ಷಣೆಗೆ ಮಹತ್ವದ ಪಾತ್ರ ವಹಿಸುವ ಪೋಲಿಯೋ ಲಸಿಕಾ ಅಭಿಯಾನ ಯಶಸ್ವಿಯಾಗಲು ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಶಾಸಕ ಚಿಮ್ಮನಕಟ್ಟಿ ಕರೆ ನೀಡಿದರು.
ಬಳಿಕ ಮಾತನಾಡಿದ ಅವರು, “ಪೋಲಿಯೋ ಮುಕ್ತ ಸಮಾಜ ನಿರ್ಮಾಣವು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೇ ಪೋಲಿಯೋ ಹನಿ ಹಾಕಿಸುವ ಮೂಲಕ ಅವರ ಆರೋಗ್ಯಕರ ಭವಿಷ್ಯವನ್ನು ಸುರಕ್ಷಿತಗೊಳಿಸಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಪ್ರತಿಯೊಬ್ಬ ಪೋಷಕರು ಜಾಗೃತಿ ವಹಿಸಬೇಕು” ಎಂದು ಹೇಳಿದರು.
ಆರೋಗ್ಯ ಇಲಾಖೆಯ ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿದ ಶಾಸಕರು, “ವೈದ್ಯ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಮಾನವೀಯ ಸೇವೆಯ ಮಹತ್ತರ ಜವಾಬ್ದಾರಿಯಾಗಿದೆ. ಪ್ರತಿಯೊಬ್ಬ ರೋಗಿಯನ್ನು ಗೌರವ, ಪ್ರೀತಿ ಮತ್ತು ಕಾಳಜಿಯಿಂದ ನೋಡಿಕೊಳ್ಳುವುದು ವೈದ್ಯಕೀಯ ಸೇವೆಯ ನಿಜವಾದ ಅರ್ಥವಾಗಿದೆ” ಎಂದು ತಿಳಿಸಿದರು.
ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುವಾಗ ವೃತ್ತಿ ನೈತಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, “ನಾವು ಎಲ್ಲಿಂದ ಬಂದಿದ್ದೇವೆ ಎಂಬುದನ್ನು ಎಂದಿಗೂ ಮರೆಯಬಾರದು. ತಂದೆ-ತಾಯಿಯ ಶ್ರಮ, ಗುರುಗಳ ಆಶೀರ್ವಾದ ಮತ್ತು ನಮ್ಮ ಜೀವನದ ಹೋರಾಟಗಳನ್ನು ನೆನಪಿನಲ್ಲಿಟ್ಟುಕೊಂಡು ಸೇವೆ ಸಲ್ಲಿಸಿದಾಗ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯವಾಗುತ್ತದೆ” ಎಂದರು.
ಕಾರ್ಯಕ್ರಮದಲ್ಲಿ “ಪ್ರತಿಯೊಂದು ಮಗುವಿಗೂ ಪೋಲಿಯೋ ಹನಿ – ಆರೋಗ್ಯವಂತ ಭಾರತ ನಮ್ಮ ಗುರಿ” ಎಂಬ ಸಂದೇಶದೊಂದಿಗೆ ರಾಷ್ಟ್ರೀಯ ಪೋಲಿಯೋ ಲಸಿಕಾ ಅಭಿಯಾನಕ್ಕೆ ಅರ್ಥಪೂರ್ಣ ಚಾಲನೆ ನೀಡಲಾಯಿತು. ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಅಭಿಯಾನದ ಯಶಸ್ಸಿಗೆ ಸಹಕಾರ ನೀಡುವ ಸಂಕಲ್ಪ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande