
ನವದೆಹಲಿ, 03 ಜೂನ್ (ಹಿ.ಸ.) :
ಆ್ಯಂಕರ್ : ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆದ ಕ್ಷಿಪಣಿ ಮತ್ತು ಡ್ರೋನ್ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ದಾಳಿಯಲ್ಲಿ ಒಬ್ಬ ಭಾರತೀಯ ಪ್ರಜೆ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಬುಧವಾರ ಪ್ರಕಟಿಸಿದ ಅಧಿಕೃತ ಹೇಳಿಕೆಯಲ್ಲಿ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಆರಂಭವಾದಾಗಿನಿಂದಲೇ ನಾಗರಿಕರು ಹಾಗೂ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಸುವ ದಾಳಿಗಳಿಗೆ ಭಾರತ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಸಚಿವಾಲಯ ತಿಳಿಸಿದೆ. ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಭಾರತ ಸರ್ಕಾರ ಆಳವಾದ ಸಂತಾಪ ಸೂಚಿಸಿದೆ.
ಗಾಯಗೊಂಡ ಭಾರತೀಯರಿಗೆ ಅಗತ್ಯವಿರುವ ಎಲ್ಲ ರೀತಿಯ ನೆರವನ್ನು ಕುವೈತ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಒದಗಿಸುತ್ತಿದೆ. ಅಲ್ಲದೆ, ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
ಪ್ರದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು ಹಾಗೂ ಮಿಷನ್ಗಳು ಸಂಪೂರ್ಣ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಅಗತ್ಯವಿದ್ದರೆ ಭಾರತೀಯ ಸಮುದಾಯಕ್ಕೆ ತುರ್ತು ನೆರವು ಒದಗಿಸಲು ಸಜ್ಜಾಗಿವೆ ಎಂದು ತಿಳಿಸಲಾಗಿದೆ.
ಮಂಗಳವಾರ ತಡರಾತ್ರಿ ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್–1 ಮೇಲೆ ಇರಾನ್ನ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆದಿರುವುದಾಗಿ ವರದಿಯಾಗಿದೆ. ದಾಳಿಯಿಂದ ವಿಮಾನ ನಿಲ್ದಾಣದ ಕಟ್ಟಡಕ್ಕೆ ಭಾರೀ ಹಾನಿಯಾಗಿದ್ದು, ಸಿಬ್ಬಂದಿ ಹಾಗೂ ಪ್ರಯಾಣಿಕರು ಸೇರಿದಂತೆ ಸುಮಾರು 63 ಮಂದಿ ಗಾಯಗೊಂಡಿದ್ದಾರೆ. ಭದ್ರತಾ ಕಾರಣಗಳಿಂದ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡಿರುವ ಉದ್ವಿಗ್ನತೆಯ ನಡುವೆ ಈ ದಾಳಿ ನಡೆದಿದ್ದು, ಅಂತಾರಾಷ್ಟ್ರೀಯ ಸಮುದಾಯದಲ್ಲಿ ಆತಂಕ ಹೆಚ್ಚಿಸಿದೆ. ನಾಗರಿಕರ ಸುರಕ್ಷತೆ ಕಾಪಾಡುವಂತೆ ಹಾಗೂ ಪರಿಸ್ಥಿತಿಯನ್ನು ಶಾಂತಿಯುತವಾಗಿ ಬಗೆಹರಿಸುವಂತೆ ಭಾರತ ಮತ್ತೊಮ್ಮೆ ಕರೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.