
ಕೊಪ್ಪಳ, 10 ಜುಲೈ (ಹಿ.ಸ.)
ಆ್ಯಂಕರ್ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಅಂಗವಾಗಿ ಕೊಪ್ಪಳ ತಾಲೂಕ ಸ್ವೀಪ್ ಸಮಿತಿ ಹಾಗೂ ಹಲಗೇರಿ ಗಾಮ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ಹಲಗೇರಿಯಲ್ಲಿ ಅರಿವು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ನಡೆದ ಜಾಥಾ ಮೂಲಕ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮಕ್ಕೆ ಕೊಪ್ಪಳ ತಾಲೂಕ ಪಂಚಾಯತ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್ ಅವರು ಚಾಲನೆ ನೀಡಿದರು.
ಬಳಿಕ ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯಕ್ರಮ ಹಮ್ಮಿಕೊಂಡಿದ್ದು ಬೂತ್ ಮಟ್ಟದ ಅಧಿಕಾರಿಗೆ ಅಗತ್ಯ ಮಾಹಿತಿ ನೀಡಲು ಸಹಕರಿಸಬೇಕು. ಕಾರ್ಯಕ್ರಮದ ಮೂಲಕ ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದು ಹಾಗೂ ಮರಣ ಹೊಂದಿರುವವರು, ಸ್ಥಳಾಂತರಗೊಂಡಿರುವವರು, ನಕಲು ಹೆಸರುಗಳು, ಮತ್ತು ಇತರ ಅನರ್ಹ ಮತದಾರರನ್ನು ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವುದು ಇದರ ಉದ್ದೇಶವಾಗಿದೆ. ಜೂನ್ 30 ರಿಂದ ಜುಲೈ 29 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಓ) ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ. ಮತದಾರರು ಎಸ್ಐಆರ್ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕೆಂದರು.
ಬೂತ್ ಮಟ್ಟದ ಅಧಿಕಾರಿಯು ಪ್ರತಿ ಮನೆಗೆ 03 ಬಾರಿ ಭೇಟಿ ನೀಡಲಿದ್ದಾರೆ. ಅಗತ್ಯ ಮಾಹಿತಿಯನ್ನು ಪ್ರತಿಯೊಬ್ಬರು ಸಲ್ಲಿಸಲು ಇದೊಂದು ಸದಾವಕಾಶ ಹಾಗು ಹೊಸದಾಗಿ ಸೇರ್ಪಡೆಗೆ ಅವಕಾಶವಿದೆ ಎಂದರು.
ವಿದ್ಯಾರ್ಥಿಗಳಿಂದ ಕಾಲ್ನಡಿಗೆ ಮೂಲಕ ಜಾಗೃತಿ ಜಾಥಾವು ಗ್ರಾಮ ಪಂಚಾಯತಿಯಿಂದ ಪ್ರಾರಂಭವಾಗಿ ಗ್ರಾಮದ ಶಾಂಭವಿ ದೇವಸ್ಥಾನದ ಮಾರ್ಗವಾಗಿ ಕನಕನಗರ, ಕೆಂಚಮ್ಮ ದೇವಸ್ಥಾನದ ಮೂಲಕ ಸಂಚರಿಸಿ ಪುನಃ ಗ್ರಾಮ ಪಂಚಾಯತಿಗೆ ತಲುಪಿ ಜಾಗೃತಿ ಮೂಡಿಸಿ ಮುಕ್ತಾಯಗೊಂಡಿತು.ಬಟಿಂಗ್ಸ್ ಪ್ರದರ್ಶನದಿಂದ ಕಾಲ್ನಡಿಗೆ ಜಾಥಾಕ್ಕೆ ಮೆರಗು ತಂದಿತು. 250 ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿ ಸಂಗಮೇಶ ತೇರಿನ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ದೊಡ್ಡನಗೌಡ ಪಾಟೀಲ್, ಸಂಜೀವಿನಿ ಯೋಜನೆಯ ತಾಲೂಕ ಕಾರ್ಯಕ್ರಮ ವ್ಯವಸ್ದಾಪಕ ಸುನೀಲ್, ಕಾಲೇಜಿನ ಉಪನ್ಯಾಸಕ ವಿರೇಶ್, ಗ್ರಾಮ ಪಂಚಾಯತ ಕಾರ್ಯದರ್ಶಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಯೋಜನೆಯ ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ದೇವಪ್ಪ ಪಿಟ್ಟರ್, ಪಂಚಾಕ್ಷರಿ, ಮಾಲತೇಶ ಹಾಜರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್