
ಗದಗ, 10 ಜುಲೈ (ಹಿ.ಸ.)
ಆ್ಯಂಕರ್:- ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ, ಯೋಜನೆಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಉದ್ದೇಶದಿಂದ ಗದಗ ಜಿಲ್ಲೆಯ ಶ್ರೀ ತೋಂಟದಾರ್ಯ ಸಿದಲಿಂಗೇಶ್ವರ ಕಲ್ಯಾಣ ಕೇಂದ್ರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ವಿಶೇಷ ಅರಿವು ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಯ ಉದ್ದೇಶ, ಅರ್ಹತಾ ಮಾನದಂಡಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಯೋಜನೆಯಿಂದ ದೊರೆಯುವ ಪ್ರಯೋಜನಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು. ವಿದ್ಯಾಭ್ಯಾಸ ಪೂರ್ಣಗೊಳಿಸಿದ ನಂತರ ಉದ್ಯೋಗದ ಹುಡುಕಾಟದಲ್ಲಿರುವ ಯುವಕರು ಸರ್ಕಾರದ ಈ ಯೋಜನೆಯ ಸದುಪಯೋಗ ಪಡೆದುಕೊಂಡು ತಮ್ಮ ವೃತ್ತಿ ಜೀವನಕ್ಕೆ ಭದ್ರ ಬುನಾದಿ ಹಾಕಿಕೊಳ್ಳಬೇಕು ಎಂದು ಅಧಿಕಾರಿಗಳು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ ಹಾಗೂ ಗದಗ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ವಹಿಸಿದ್ದರು. ಅವರು ಮಾತನಾಡಿ, ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿದ್ದು, ಅರ್ಹ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳ ಮೊರೆ ಹೋಗದೆ ನೇರವಾಗಿ ಯೋಜನೆಗೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಬೇಕು ಎಂದು ತಿಳಿಸಿದರು.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡುತ್ತಾ, ಉದ್ಯೋಗಾವಕಾಶಗಳು, ಕೌಶಲ್ಯಾಭಿವೃದ್ಧಿಯ ಅಗತ್ಯತೆ, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಹಾಗೂ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಲಭ್ಯವಿರುವ ಉದ್ಯೋಗ ಅವಕಾಶಗಳ ಕುರಿತು ಮಾಹಿತಿ ನೀಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪದವಿ ಅಥವಾ ಡಿಪ್ಲೊಮಾ ಹೊಂದುವುದಷ್ಟೇ ಸಾಕಾಗುವುದಿಲ್ಲ. ಹೊಸ ಕೌಶಲ್ಯಗಳನ್ನು ಬೆಳೆಸಿಕೊಂಡು ಉದ್ಯೋಗ ಮಾರುಕಟ್ಟೆಯ ಅಗತ್ಯಗಳಿಗೆ ತಕ್ಕಂತೆ ತಮ್ಮನ್ನು ತಾವು ಸಿದ್ಧಗೊಳಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಲಾಯಿತು.
ಯುವನಿಧಿ ಯೋಜನೆಯಡಿ 2023 ಅಥವಾ ನಂತರ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರುವ ನಿರುದ್ಯೋಗಿಗಳಿಗೆ ಸರ್ಕಾರದಿಂದ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಪದವೀಧರರಿಗೆ ತಿಂಗಳಿಗೆ ₹3,000 ಹಾಗೂ ಡಿಪ್ಲೊಮಾ ಹೊಂದಿದವರಿಗೆ ತಿಂಗಳಿಗೆ ₹1,500 ಆರ್ಥಿಕ ನೆರವು ಲಭ್ಯವಿರುತ್ತದೆ. ಶಿಕ್ಷಣ ಪೂರ್ಣಗೊಂಡ ನಂತರ ಕನಿಷ್ಠ ಆರು ತಿಂಗಳ ಕಾಲ ನಿರುದ್ಯೋಗಿಯಾಗಿರಬೇಕು ಎಂಬುದು ಪ್ರಮುಖ ಅರ್ಹತಾ ಷರತ್ತಾಗಿದೆ. ಈ ಭತ್ಯೆಯನ್ನು ಗರಿಷ್ಠ ಎರಡು ವರ್ಷಗಳವರೆಗೆ ನೀಡಲಾಗುತ್ತದೆ.
ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಯೋಜನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದೂ ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ತೋಂಟದಾರ್ಯ ಸಿದಲಿಂಗೇಶ್ವರ ಕಲ್ಯಾಣ ಕೇಂದ್ರ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಜಗದೀಶ ಶಿವನಗುತ್ತಿ, ಜಿಲ್ಲಾ ಉದ್ಯೋಗಾಧಿಕಾರಿ ಬಸವಂತ್ ಪಿ.ಎನ್., ಸಹಾಯಕ ಉದ್ಯೋಗಾಧಿಕಾರಿ ಎಚ್ಚರಪ್ಪ ಬಡಿಗೇರ, ಆಪ್ತ ಸಮಾಲೋಚಕ ಆನಂದ ಹೊಂಬಳ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ಯೋಜನೆ ಕುರಿತು ಮಾಹಿತಿ ಪಡೆದುಕೊಂಡರು.
ಯುವಕರಿಗೆ ಆರ್ಥಿಕ ಬೆಂಬಲ ನೀಡುವುದರ ಜೊತೆಗೆ ಉದ್ಯೋಗದತ್ತ ಪ್ರೇರೇಪಿಸುವ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಯುವನಿಧಿ ಕುರಿತು ನಡೆದ ಈ ಅರಿವು ಕಾರ್ಯಕ್ರಮ ವಿದ್ಯಾರ್ಥಿಗಳಿಂದ ಉತ್ತಮ ಸ್ಪಂದನೆ ಪಡೆಯಿತು. ಅಧಿಕಾರಿಗಳು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿ, ಯೋಜನೆಯ ಸೌಲಭ್ಯಗಳನ್ನು ತಪ್ಪದೇ ಬಳಸಿಕೊಳ್ಳುವಂತೆ ಮನವಿ ಮಾಡಿದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP