



ಕುರುಗೋಡು, 13 ಜುಲೈ (ಹಿ.ಸ.)
ಆ್ಯಂಕರ್ : ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯು ಪ್ರಸ್ತುತ ವರ್ಷದ ಜುಲೈ 01 ರಂದು ಅಧಿಕೃತವಾಗಿ ಪ್ರಾರಂಭವಾಗಿದ್ದು, ಗ್ರಾಮೀಣ ಭಾಗದ ಅಕುಶಲ ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವುದರ ಜೊತೆಗೆ ಹಳ್ಳಿಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಈ ಯೋಜನೆ ಅತ್ಯಂತ ಸಹಕಾರಿಯಾಗಲಿದೆ ಕುರುಗೋಡು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ರೇಣುಕಾಚಾರ್ಯ ಸ್ವಾಮಿ (ಪ್ರಭಾರ) ಅವರು ಹೇಳಿದರು.
ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾದನಹಟ್ಟಿ ಗ್ರಾಮದ ಉಡಸಲಮ್ಮ ದೇವಸ್ಥಾನದ ಮುಂಭಾಗದಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯ ಐಇಸಿ ಚಟುವಟಿಕೆಯಡಿ ಸೋಮವಾರ ಹಮ್ಮಿಕೊಂಡಿದ್ದ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಈ ಯೋಜನೆಯಡಿ ಕೂಲಿಕಾರರ ದಿನಗೂಲಿ ಮೊತ್ತವನ್ನು ರೂ. 370 ರಿಂದ ರೂ. 382 ಕ್ಕೆ ಏರಿಕೆ ಮಾಡಲಾಗಿದೆ. ಪ್ರತಿ ಕುಟುಂಬಕ್ಕೆ ವರ್ಷಕ್ಕೆ ನೀಡಲಾಗುತ್ತಿದ್ದ 100 ದಿನಗಳ ಉದ್ಯೋಗದ ಬದಲಾಗಿ, ಇನ್ನುಮುಂದೆ 125 ದಿನಗಳವರೆಗೆ ಉದ್ಯೋಗಾವಕಾಶ ನೀಡಲಾಗುವುದು. ಗ್ರಾಮೀಣ ಭಾಗದ ಕೂಲಿಕಾರರು ಈ ಯೋಜನೆಯ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಬಳಿಕ ಗಣ್ಯರು ಜಂಟಿಯಾಗಿ ಎಸ್ಬಿಎಂ ವಾಹನದ ಮುಖಾಂತರ ಪ್ರಚಾರ ಕಾರ್ಯಕ್ಕೆ ಹಸಿರು ನಿಶಾನೆ ತೋರಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಮತ್ತು ಅಜೀವಿಕಾ ಮಿಷನ್’ ಯೋಜನೆಯ ಪ್ರಮುಖ ಅಂಶಗಳು ಹಾಗೂ ಮಾಹಿತಿಯುಳ್ಳ ಅಧಿಕೃತ ಕರಪತ್ರಗಳನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು (ಗ್ರಾ.ಉ) ಶಿವರಾಮರೆಡ್ಡಿ, ಬಾದನಹಟ್ಟಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ಹೆಚ್., ತಾಪಂ ಐಇಸಿ ಸಂಯೋಜಕ ಚಂದ್ರಶೇಖರ ಸೇರಿದಂತೆ ತಾಲೂಕು ಪಂಚಾಯತಿ ತಾಂತ್ರಿಕ ಸಹಾಯಕರು, ಬಿ.ಎಫ್.ಟಿ ಗಳು, ಎನ್.ಆರ್.ಎಲ್.ಎಮ್ ತಂಡ, ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು, ಗ್ರಾಮ ಕಾಯಕ ಮಿತ್ರರು, ಬಾದನಹಟ್ಟಿ ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಕೂಲಿಕಾರರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್