
ತುಮಕೂರು, 14 ಜುಲೈ (ಹಿ.ಸ.):
ಆ್ಯಂಕರ್:
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026ರ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜುಲೈ 14ರ ಮಧ್ಯಾಹ್ನ 12 ಗಂಟೆಯ ವೇಳೆಗೆ ಜಿಲ್ಲೆಯ ಮತದಾರರಿಗೆ ವಿತರಿಸಬೇಕಿದ್ದ ಎಣಿಕೆ ನಮೂನೆಗಳ ಪೈಕಿ ಶೇ.98.11ರಷ್ಟು ವಿತರಣೆ ಪೂರ್ಣಗೊಂಡಿದ್ದು, ಉಳಿದ ಕಾರ್ಯವನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಮತದಾರರಿಂದ ಹಿಂತಿರುಗಿ ಬಂದ ನಮೂನೆಗಳ ಪೈಕಿ ಶೇ.34.12ರಷ್ಟು ಮಾಹಿತಿಯನ್ನು ಈಗಾಗಲೇ ಡಿಜಿಟಲೀಕರಣಗೊಳಿಸಲಾಗಿದ್ದು, ಜುಲೈ 29ರೊಳಗೆ ಎಸ್ಐಆರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದರು.
ಜಿಲ್ಲೆಯಲ್ಲಿ 8,841 ಸಂಶಯಾಸ್ಪದ ಮತದಾರರನ್ನು ಗುರುತಿಸಲಾಗಿದ್ದು, ಬೂತ್ ಮಟ್ಟದ ಏಜೆಂಟರು (ಬಿಎಲ್ಎ) ಬೂತ್ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿವರಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.
ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರ ಹೆಸರು ಸೇರ್ಪಡೆಯಾಗದಂತೆ ಎಸ್ಐಆರ್ ಪ್ರಕ್ರಿಯೆಗೆ ರಾಜಕೀಯ ಪಕ್ಷಗಳು ಸಂಪೂರ್ಣ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಚುನಾವಣಾ ತಹಶೀಲ್ದಾರ್ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.