
ಹಾಸನ, 18 ಜುಲೈ (ಹಿ.ಸ.):
ಆ್ಯಂಕರ್:
ಸಾರ್ವಜನಿಕರು ಜಿಲ್ಲಾ ಹಾಗೂ ತಾಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ನಿರ್ದೇಶನದಂತೆ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಹೋಬಳಿ ಕೇಂದ್ರದಲ್ಲೇ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ತಿಳಿಸಿದ್ದಾರೆ.
ದುದ್ದ ಹೋಬಳಿಯಲ್ಲಿ ನಡೆದ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಒಂದೇ ವೇದಿಕೆಯಲ್ಲಿ ಜನರ ಅಹವಾಲುಗಳನ್ನು ಆಲಿಸಿ ತ್ವರಿತವಾಗಿ ಪರಿಹಾರ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಖಾತೆ, ಸರ್ವೆ, ರಸ್ತೆ, ಸಾಗುವಳಿ ಚೀಟಿ, ಪರಿಹಾರ, ದಾರಿ ಒತ್ತುವರಿ, ಬಸ್ ನಿಲುಗಡೆ ಹಾಗೂ ಬಸ್ ಸೌಲಭ್ಯ ಸೇರಿದಂತೆ 55 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಅವುಗಳ ವಿಲೇವಾರಿಯನ್ನು ನಿರಂತರವಾಗಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಶಾಲಾ ಜಾಗದ ಒತ್ತುವರಿ ತೆರವುಗೊಳಿಸಿ ಕಾಂಪೌಂಡ್ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದ ಅವರು, ಜಿಲ್ಲೆಯಾದ್ಯಂತ ಶಾಲಾ ಮಕ್ಕಳು ಕೈ ತೋರಿಸಿದ ಎಲ್ಲೆಡೆ ಬಸ್ ನಿಲ್ಲಿಸುವಂತೆ ಸಾರಿಗೆ ಇಲಾಖೆಗೆ ಸುತ್ತೋಲೆ ಹೊರಡಿಸಲು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ 5 ಲಕ್ಷ ಗಿಡಗಳನ್ನು ನೆಡುವ ಗುರಿ ಹೊಂದಿದ್ದು, ಈಗಾಗಲೇ 3.50 ಲಕ್ಷ ಗಿಡಗಳನ್ನು ನೆಡಲಾಗಿದೆ ಎಂದು ತಿಳಿಸಿದ ಅವರು, ಕೆರೆ, ಶಾಲೆ-ಕಾಲೇಜು ಆವರಣಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಿಡ ನೆಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿಗಳು ವಿತರಿಸಿರುವ ಎನ್ಯೂಮರೇಷನ್ ನಮೂನೆಗಳನ್ನು ಸರಿಯಾಗಿ ಭರ್ತಿ ಮಾಡಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಕರೆ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಶಾಲಾ ಆವರಣದಲ್ಲಿ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.