
ಧಾರವಾಡ, 18 ಜುಲೈ (ಹಿ.ಸ.):
ಆ್ಯಂಕರ್:
ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಹೆಸರು ಹಾಗೂ ಉದ್ದು ಬೆಳೆಗಳಲ್ಲಿ ಹಳದಿ ನಂಜಾಣು ರೋಗ ಅಲ್ಲಲ್ಲಿ ಕಾಣಿಸಿಕೊಂಡಿದ್ದು, ರೈತರು ತಕ್ಷಣ ಮುನ್ನೆಚ್ಚರಿಕೆ ಮತ್ತು ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
30ರಿಂದ 40 ದಿನಗಳ ಬೆಳೆಯಲ್ಲಿ ಈ ರೋಗ ಹೆಚ್ಚಾಗಿ ಕಂಡುಬರುತ್ತಿದ್ದು, ಎಲೆಗಳು ಹಳದಿಯಾಗುವುದು, ಗಿಡಗಳು ಕುಳ್ಳಗಾಗುವುದು ಹಾಗೂ ಒಣಗಲು ಆರಂಭಿಸುವುದು ಪ್ರಮುಖ ಲಕ್ಷಣಗಳಾಗಿವೆ. ರೋಗ ತೀವ್ರವಾದರೆ ಕಾಯಿ ಬಿಡದೆ ಇಳುವರಿಯಲ್ಲಿ ಭಾರೀ ನಷ್ಟ ಉಂಟಾಗುವ ಸಾಧ್ಯತೆ ಇದೆ.
ರೋಗಬಾಧಿತ ಗಿಡಗಳನ್ನು ಬುಡಸಮೇತ ಕಿತ್ತು ನಾಶಪಡಿಸಬೇಕು. ರೋಗವನ್ನು ಹರಡುವ ಬಿಳಿ ನೊಣ ನಿಯಂತ್ರಣಕ್ಕೆ ಶಿಫಾರಸು ಮಾಡಿದ ಕೀಟನಾಶಕಗಳನ್ನು ಕೃಷಿ ಇಲಾಖೆಯ ಸಲಹೆಯಂತೆ ಸಿಂಪಡಿಸುವಂತೆ ಸೂಚಿಸಲಾಗಿದೆ.
ಹೆಸರು ಮತ್ತು ಉದ್ದು ಬೆಳೆಗಳಲ್ಲಿ ರೋಗದ ಲಕ್ಷಣಗಳು ಕಂಡುಬಂದ ತಕ್ಷಣ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಸೂಕ್ತ ಸಲಹೆ ಪಡೆದು ನಿರ್ವಹಣಾ ಕ್ರಮಗಳನ್ನು ಅನುಸರಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.