
ಬಾಗಲಕೋಟೆ, 02 ಜುಲೈ (ಹಿ.ಸ.)
ಆ್ಯಂಕರ್ : ವಿಶೇಷ ಮತಪಟ್ಟಿ ಪರಿಷ್ಕರಣೆ ಅಭಿಯಾನದ ಅಂಗವಾಗಿ ಬಾಗಲಕೋಟೆ ಜಿಲ್ಲೆಯ ಮುಧೋಳ ಕ್ಷೇತ್ರದ ಶಾಸಕ ಆರ್.ಬಿ. ತಿಮ್ಮಾಪುರ ಅವರು ಸಂಬಂಧಪಟ್ಟ ಅರ್ಜಿಯನ್ನು ಖುದ್ದಾಗಿ ಭರ್ತಿ ಮಾಡಿ ತಹಸೀಲ್ದಾರ್ ಅವರಿಗೆ ಅಧಿಕೃತವಾಗಿ ಸಲ್ಲಿಸಿದರು. ಈ ಮೂಲಕ ಪ್ರತಿಯೊಬ್ಬ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸರಿಯಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಆರ್.ಬಿ. ತಿಮ್ಮಾಪುರ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಮತದಾರನ ಮತ ಅತ್ಯಂತ ಅಮೂಲ್ಯವಾಗಿದ್ದು, ದೇಶದ ಭವಿಷ್ಯ ನಿರ್ಧಾರದಲ್ಲಿ ಮತದಾನದ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಅಥವಾ ತಿದ್ದುಪಡಿ ಅಗತ್ಯವಿದ್ದರೆ ವಿಶೇಷ ಮತಪಟ್ಟಿ ಪರಿಷ್ಕರಣೆ ಅವಧಿಯನ್ನು ಸದ್ಬಳಕೆ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಕರೆ ನೀಡಿದರು.
ವಿಶೇಷವಾಗಿ 18 ವರ್ಷ ಪೂರ್ಣಗೊಳಿಸಿರುವ ಯುವಜನತೆ ಹಾಗೂ ಹೊಸ ಮತದಾರರು ತಪ್ಪದೇ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಈಗಾಗಲೇ ಹೆಸರು ಹೊಂದಿರುವವರು ತಮ್ಮ ವಿವರಗಳನ್ನು ಪರಿಶೀಲಿಸಿ ಯಾವುದೇ ದೋಷ ಕಂಡುಬಂದರೆ ತಿದ್ದುಪಡಿ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮತದಾರರ ಪಟ್ಟಿಯು ಶುದ್ಧ ಹಾಗೂ ನಿಖರವಾಗಿರುವುದು ಪ್ರಜಾಪ್ರಭುತ್ವದ ಬಲವರ್ಧನೆಗೆ ಅಗತ್ಯವಾಗಿದ್ದು, ಚುನಾವಣಾ ಆಯೋಗದ ಈ ವಿಶೇಷ ಅಭಿಯಾನಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಕೀಲ ಅಶೋಕ್ ಕಿವಡಿ, ಮುಧೋಳ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ರಾಘು ಮೊಕಾಶಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದರು.
ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಪಡೆದು, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಮೂಲಕ ಜವಾಬ್ದಾರಿಯುತ ನಾಗರಿಕರಾಗಿ ಪಾಲ್ಗೊಳ್ಳಬೇಕು ಎಂದು ಶಾಸಕ ಆರ್.ಬಿ. ತಿಮ್ಮಾಪುರ ಅವರು ಇದೇ ವೇಳೆ ಕರೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande