
ಬಾಗಲಕೋಟೆ, 02 ಜುಲೈ (ಹಿ.ಸ.)
ಆ್ಯಂಕರ್ : ಪ್ರಭಾತ್ ಫೇರಿ ಬಾಗಲಕೋಟ ಸಂಸ್ಥೆಯು ಕಳೆದ 11 ವರ್ಷಗಳಿಂದ ಸಮಾಜಮುಖಿ ಹಾಗೂ ಸೇವಾ ಮನೋಭಾವದೊಂದಿಗೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ತನ್ನ 12ನೇ ವರ್ಷದ ಸೇವಾ ಪಯಣಕ್ಕೆ ಹೆಮ್ಮೆಯಿಂದ ಪಾದಾರ್ಪಣೆ ಮಾಡಿದೆ. ಈ ವಿಶೇಷ ಸಂಭ್ರಮದ ಅಂಗವಾಗಿ ಜುಲೈ 4, ಶನಿವಾರ ನಗರದ ಮಹೇಶ್ವರಿ ಮಂಗಲ್ ಭವನದಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಳೆದ ಒಂದು ದಶಕಕ್ಕೂ ಹೆಚ್ಚು ಕಾಲ ಪ್ರಭಾತ್ ಫೇರಿ ತಂಡವು ಬೆಳಗಿನ ಜಾವ ನಗರದ ವಿವಿಧ ಪ್ರದೇಶಗಳಲ್ಲಿ ಸುತ್ತಾಟ ನಡೆಸುವುದರೊಂದಿಗೆ ಆರೋಗ್ಯ ಜಾಗೃತಿ, ಸಾಮಾಜಿಕ ಒಗ್ಗಟ್ಟು, ಪರಿಸರ ಸಂರಕ್ಷಣೆ, ಸಾರ್ವಜನಿಕರಲ್ಲಿ ಶಿಸ್ತು ಮತ್ತು ಸೇವಾ ಮನೋಭಾವ ಬೆಳೆಸುವ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಸಂಸ್ಥೆಯ ಸದಸ್ಯರು ಹಲವು ಸಾಮಾಜಿಕ, ಧಾರ್ಮಿಕ ಹಾಗೂ ಮಾನವೀಯ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನಮನ್ನಣೆಯನ್ನು ಗಳಿಸಿದ್ದಾರೆ.
12ನೇ ವರ್ಷದ ಶುಭಾರಂಭವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಆಯೋಜಿಸಿರುವ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ನಗರದ ಗಣ್ಯರು, ಸಮಾಜಸೇವಕರು, ಸದಸ್ಯರು, ಹಿತೈಷಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಈ ಕಾರ್ಯಕ್ರಮವು ಕೇವಲ ವಾರ್ಷಿಕೋತ್ಸವದ ಆಚರಣೆಯಾಗಿರದೆ, ಸಮಾಜದಲ್ಲಿ ಸೇವಾ ಮನೋಭಾವವನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪದ ಸಂಕೇತವಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ನಗರದ ಎಲ್ಲ ನಾಗರಿಕರು ಕುಟುಂಬ ಸಮೇತರಾಗಿ ಆಗಮಿಸಿ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande