


ಬಳ್ಳಾರಿ, 20 ಜುಲೈ (ಹಿ.ಸ.)
ಆ್ಯಂಕರ್ : ನಗರದ ಕೌಲ್ ಬಜಾರ್ ಹಾಗೂ ಕಂಟೋನ್ಮೆಂಟ್ ಪ್ರದೇಶಗಳಲ್ಲಿ ಅನಧಿಕೃತವಾಗಿ ಒತ್ತುವರಿಯಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಜೆಸಿಬಿ ಯಂತ್ರಗಳ ಸಹಾಯದೊಂದಿಗೆ ಯಶಸ್ವಿಯಾಗಿ ತೆರವುಗೊಳಿಸಿದ್ದಾರೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ನಿರ್ದೇಶನದಂತೆ, ಅಪರ ಜಿಲ್ಲಾಧಿಕಾರಿ ಮಹಮ್ಮದ್.ಎನ್ ಝುಬೇರ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಅವರ ನೇತೃತ್ವದಲ್ಲಿ ಬಳ್ಳಾರಿ ತಹಶೀಲ್ದಾರ್ ಟಿ.ರೇಖಾ ಮತ್ತು ಕಂದಾಯ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಯ ಜಂಟಿ ಕಾರ್ಯಾಚರಣೆ ನಡೆಯಿತು.
ಬಳ್ಳಾರಿ ನಗರದ ಸಿಟಿಸಿ ವಾರ್ಡ್ ನಂ. 20, ಬ್ಲಾಕ್ ನಂ. 13, ಟಿಎಸ್ ನಂ. 1074 ರಲ್ಲಿ ಬರುವ ಸುಮಾರು 0.93 ಸೆಂಟ್ಸ್ ವಿಸ್ತೀರ್ಣದ ಸರ್ಕಾರಿ ಹಳ್ಳದ ಜಮೀನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸ್ಥಳದಲ್ಲಿದ್ದ ಅನಧಿಕೃತ ತಾತ್ಕಾಲಿಕ ಶೆಡ್ಗಳು ಮತ್ತು ಕಟ್ಟಡಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಯಿತು.
ಬಳ್ಳಾರಿ ಕೋಟೆ ಸಮೀಪದ ಹೊಸಪೇಟೆ ರಸ್ತೆಯ ಕಂಟೋನ್ಮೆಂಟ್ ವ್ಯಾಪ್ತಿಯಲ್ಲಿರುವ ಸಿಟಿಸಿ ವಾರ್ಡ್ ನಂ. 21, ಬ್ಲಾಕ್ ನಂ. 03, ಟಿಎಸ್ ನಂ.59(ಪಿ) ರಲ್ಲಿ ಬರುವ 0.10.50 ಸೆಂಟ್ಸ್ ಸರ್ಕಾರಿ ಜಮೀನಿನ ಒತ್ತುವರಿಯನ್ನೂ ಸಹ ಅಧಿಕಾರಿಗಳ ತಂಡ ಸಮ್ಮುಖದಲ್ಲಿ ತೆರವುಗೊಳಿಸಿ, ಸರ್ಕಾರದ ವಶಕ್ಕೆ ಪಡೆಯಲಾಯಿತು.
ಎಚ್ಚರಿಕೆ ಫಲಕ ಅಳವಡಿಕೆ – ಕ್ರಿಮಿನಲ್ ಮೊಕದ್ದಮೆಯ ಎಚ್ಚರಿಕೆ:
ತೆರವುಗೊಳಿಸಲಾದ ಜಾಗಗಳಲ್ಲಿ ಅಧಿಕೃತ ಸರ್ಕಾರಿ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದೆ. ಈ ಜಮೀನು ಸರ್ಕಾರಕ್ಕೆ ಸೇರಿದ್ದಾಗಿದ್ದು, ಮುಂದಿನ ದಿನಗಳಲ್ಲಿ ಯಾರಾದರೂ ಇದನ್ನು ಒತ್ತುವರಿ ಮಾಡಲು ಯತ್ನಿಸಿದರೆ ಅವರ ವಿರುದ್ಧ ಕಠಿಣ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಬೋರ್ಡ್ಗಳ ಮೂಲಕ ಸಾರ್ವಜನಿಕರಿಗೆ ಕಡಕ್ ಎಚ್ಚರಿಕೆ ನೀಡಲಾಗಿದೆ.
ಕಾರ್ಯಾಚರಣೆಯ ಸಂದರ್ಭದಲ್ಲಿ ಸ್ಥಳೀಯ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಕೌಲ್ ಬಜಾರ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು. ಇಲಾಖೆಯ ಈ ದಿಟ್ಟ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್