
ಬಾಗಲಕೋಟೆ, 21 ಜುಲೈ (ಹಿ.ಸ.)
ಆ್ಯಂಕರ್ :ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸನ್ಮಾನ್ಯ ಸದಸ್ಯರಾದ ಜಗನ್ನಾಥ್ ಹಲಮಡಗಿ ಅವರು ಮಂಗಳವಾರ ಬಾಗಲಕೋಟೆ ಜಿಲ್ಲಾ ಪೊಲೀಸ್ ಕಾರ್ಯಾಲಯ ಹಾಗೂ ನವನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಜಿಲ್ಲಾ ಮಕ್ಕಳ ಸ್ನೇಹಿ ಪೊಲೀಸ್ ಕೊಠಡಿಗೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳು, ಮಕ್ಕಳಿಗೆ ಒದಗಿಸಲಾಗುತ್ತಿರುವ ಸೇವೆಗಳು ಹಾಗೂ ಮಕ್ಕಳ ಸ್ನೇಹಿ ವಾತಾವರಣದ ಕುರಿತು ಪರಿಶೀಲನೆ ನಡೆಸಿದರು.
ಭೇಟಿಯ ಸಂದರ್ಭದಲ್ಲಿ ಮಕ್ಕಳ ಸ್ನೇಹಿ ಪೊಲೀಸ್ ವ್ಯವಸ್ಥೆಯ ಉದ್ದೇಶ, ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ ನ್ಯಾಯ ವ್ಯವಸ್ಥೆಯಲ್ಲಿ ಮಕ್ಕಳಿಗೆ ಮಾನವೀಯ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ಅಗತ್ಯತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು. ಪೊಲೀಸ್ ಇಲಾಖೆಯು ಮಕ್ಕಳಿಗೆ ಆತ್ಮವಿಶ್ವಾಸ ತುಂಬುವ ಹಾಗೂ ಸ್ನೇಹಪರ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳನ್ನು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಬಾಗಲಕೋಟೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿದ್ಧಾರ್ಥ ಗೋಯಲ್ ಅವರು ಮಕ್ಕಳ ಸ್ನೇಹಿ ಪೊಲೀಸ್ ಕೊಠಡಿಯ ಕಾರ್ಯವೈಖರಿ, ಮಕ್ಕಳ ರಕ್ಷಣೆಗಾಗಿ ಕೈಗೊಂಡಿರುವ ವಿವಿಧ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕರಲ್ಲಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಉಪಾಧೀಕ್ಷಕರಾದ ಗಜಾನನ ಸುತಾರ, ಸೇರಿದಂತೆ ಜಿಲ್ಲಾ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ಮಕ್ಕಳ ಹಕ್ಕುಗಳ ಸಂರಕ್ಷಣೆ ಮತ್ತು ಮಕ್ಕಳಿಗೆ ಸುರಕ್ಷಿತ ಹಾಗೂ ಸ್ನೇಹಪರ ವಾತಾವರಣ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ನಿರಂತರವಾಗಿ ಬದ್ಧವಾಗಿದೆ ಎಂದು ತಿಳಿಸಿದರು.
ಈ ಭೇಟಿ ಮಕ್ಕಳ ಹಕ್ಕುಗಳ ರಕ್ಷಣೆ, ಬಾಲಸ್ನೇಹಿ ಪೊಲೀಸ್ ವ್ಯವಸ್ಥೆಯ ಪರಿಣಾಮಕಾರಿ ಅನುಷ್ಠಾನ ಹಾಗೂ ಪೊಲೀಸ್ ಇಲಾಖೆ–ಮಕ್ಕಳ ಹಕ್ಕುಗಳ ಆಯೋಗದ ನಡುವಿನ ಸಮನ್ವಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande