
ತುಮಕೂರು , 21 ಜುಲೈ (ಹಿ.ಸ.):
ಆ್ಯಂಕರ್:
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಗಣಿಗಾರಿಕೆ ಪ್ರದೇಶದಲ್ಲಿ ರಸ್ತೆ ಕುಸಿದು ಲಾರಿ ಕ್ವಾರಿಯ ಗುಂಡಿಗೆ ಬಿದ್ದ ಪರಿಣಾಮ ಚಾಲಕ ಹಾಗೂ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಖಾಲಿ ಲಾರಿಯನ್ನು ಯೂಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಏಕಾಏಕಿ ರಸ್ತೆ ಕುಸಿದು ಸುಮಾರು 50 ಮೀಟರ್ ಆಳದ ಕ್ವಾರಿ ಗುಂಡಿಗೆ ವಾಹನ ಉರುಳಿಬಿದ್ದಿದೆ. ಅಪಘಾತದ ತೀವ್ರತೆಗೆ ಲಾರಿ ನಜ್ಜುಗುಜ್ಜಾಗಿದೆ, ವಾಹನದ ಅವಶೇಷಗಳು ಎಲ್ಲೆಡೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಮೃತರನ್ನು ಜಾರ್ಖಂಡ್ ಮೂಲದ ಅಕ್ಷಯ್ (30) ಹಾಗೂ ಮಧ್ಯಪ್ರದೇಶದ ಸಹದೇವ್ (25) ಎಂದು ಗುರುತಿಸಲಾಗಿದೆ. ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಧಾವಿಸಿದ ಹುಲಿಯೂರುದುರ್ಗ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬಿಜಿಎಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII