
ಬೆಂಗಳೂರು, 22 ಜುಲೈ (ಹಿ.ಸ.):
ಆ್ಯಂಕರ್:
ರಾಜಧಾನಿಯ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಮುಂಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು, ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಕಿಡಿಗೇಡಿಗಳು ಮೊಟ್ಟೆ ಎಸೆದ ಘಟನೆ ನಡೆದಿದೆ.
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನಿಲುವುಗಳನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ವೇಳೆ ಈ ಘಟನೆ ಜರುಗಿದೆ.
ರಾಹುಲ್ ಗಾಂಧಿ ದೇಶದ ಯುವಜನತೆಗೆ ದ್ರೋಹ ಎಸಗುತ್ತಿದ್ದಾರೆ ಎಂದು ಆರೋಪಿಸಿ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಕೆಪಿಸಿಸಿ ಕಚೇರಿ ಮುತ್ತಿಗೆಗೆ ಯತ್ನಿಸಿದ್ದರು.
ಈ ವೇಳೆ ಕಂಟೋನ್ಮೆಂಟ್ ಬಳಿಯೇ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದರು. ಆದರೆ ಈ ವಿಚಾರ ತಿಳಿಯದೆ ನೇರವಾಗಿ ಕೆಪಿಸಿಸಿ ಕಚೇರಿ ಬಳಿ ಬಂದ ಶಾಸಕ ಬಿ.ಪಿ. ಹರೀಶ್ ಕಾರಿನಿಂದ ಇಳಿದು ಮುಂದೆ ಸಾಗುತ್ತಿದ್ದಂತೆ ಅವರ ಮೇಲೆ ಮೊಟ್ಟೆ ದಾಳಿ ನಡೆದಿದೆ. ಕೂಡಲೇ ಎಚ್ಚೆತ್ತ ಪೊಲೀಸರು ಶಾಸಕರನ್ನು ರಕ್ಷಿಸಿ, ಸುರಕ್ಷಿತವಾಗಿ ಅಲ್ಲಿಂದ ಕಳುಹಿಸಿಕೊಟ್ಟಿದ್ದಾರೆ. ಈ ಹಠಾತ್ ಬೆಳವಣಿಗೆಯಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿತ್ತು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII